ಹೊಸದಿಗಂತ ಆನ್ ಲೈನ್ ಡೆಸ್ಕ್:
ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಶಿಕ್ಷೆ ಅನುಭವಿಸುತ್ತಿರುವ ತಮಿಳುನಾಡಿನ ಮಾಜಿ ಸಿಎಂ ಜಯಲಲಿತಾ ಆಪ್ತೆ ಶಶಿಕಲಾ ಗೆ ಕೊರೋನಾ ಸೋಂಕು ದೃಢಪಟ್ಟಿದೆ.
ಎರಡನೇ ಬಾರಿ ನಡೆಸಿದ ಆರ್ಟಿಪಿಸಿಆರ್ ಪರೀಕ್ಷೆಯಲ್ಲಿ ಸೋಂಕು ದೃಢವಾಗಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗೆ ವಿಕ್ಟೋರಿಯಾ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.
ಜ್ವರ ಮತ್ತು ಬೆನ್ನು ಉರಿ ಹಿನ್ನೆಲೆಯಲ್ಲಿ ಬುಧವಾರ ಮಧ್ಯಾಹ್ನ ಬೌರಿಂಗ್ ಆಸ್ಪತ್ರೆಗೆ ದಾಖಲಾಗಿದ್ದರು. ಅಲ್ಲಿ ಕೊರೋನಾ ಪರೀಕ್ಷೆ ನಡೆಸಿದಾಗ ಕೊರೋನಾ ನೆಗೆಟಿವ್ ವರದಿ ಬಂದಿತ್ತು. ಬಳಿಕ ಬೇರೆ ಸಮಸ್ಯೆಗಳಿಗೆ ಚಿಕಿತ್ಸೆ ನೀಡಿದ ವೈದ್ಯರು ಎಂಆರ್ಐ ಸ್ಕ್ಯಾನಿಂಗ್ ಸಲುವಾಗಿ ಗುರುವಾರ ಮಧ್ಯಾಹ್ನ ವಿಕ್ಟೋರಿಯಾ ಆಸ್ಪತ್ರೆಗೆ ಶಶಿಕಲಾರನ್ನು ಸ್ಥಳಾಂತರ ಮಾಡಿದ್ದರು. ಈ ವೇಳೆ ಮತ್ತೊಮ್ಮೆ ಕೊರೋನಾ ಪರೀಕ್ಷೆಯನ್ನು ಮಾಡಲಾಗಿದ್ದು, ಸೋಂಕು ಇರುವುದು ಕಾಣಿಸಿಕೊಂಡಿದೆ.
ಶಶಿಕಲಾಗೆ ಟೈಪ್ 2 ಡಯಾಬಿಟಿಸ್, ಅಧಿಕ ರಕ್ತದೊತ್ತಡ, ಹೈಪೋಥೈರಾಯ್ಡಿಸಮ್ ಯುಟಿಐ (ಮೂತ್ರಕೋಶದ ಸೋಂಕು), ಶಂಕಿತ ‘ಸಾರಿ’ (ತೀವ್ರ ಉಸಿರಾಟದ ತೊಂದರೆ) ಸಮಸ್ಯೆಯಿಂದಾಗಿ ಬೌರಿಂಗ್ನಿಂದ ಮಧ್ಯಾಹ್ನ 2.30ಕ್ಕೆ ವಿಕ್ಟೋರಿಯಾ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದೆ.
ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಗಿರುವ ಶಶಿಕಲಾ ಅವರು ಜನವರಿ 27ರಂದು ಬಿಡುಗಡೆಯಾಗಲಿದ್ದಾರೆ ಎಂದು ಪರಪ್ಪನ ಅಗ್ರಹಾರದ ಅಧಿಕಾರಿಗಳು ದೃಢಪಡಿಸಿದ್ದರು. ಆದರೆ ಇದೀಗ ಅವರಿಗೆ ಕೊರೋನಾ ಸೋಂಕು ದೃಢವಾಗಿರುವ ಹಿನ್ನೆಲೆಯಲ್ಲಿ ಬಿಡುಗಡೆ ದಿನವೂ ಮುಂದೆ ಹೋಗುವ ಸಾಧ್ಯತೆಯಿದೆ ಎನ್ನಲಾಗಿದೆ.