ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ, ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

ಹೊಸದಿಗಂತ ವರದಿ,ಚಿತ್ರದುರ್ಗ

ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ, ಬಿಜೆಪಿ ಶಾಸಕರಾದ ಎಂ.ಚಂದ್ರಪ್ಪ ಹಾಗೂ ಗೂಳೀಹಟ್ಟಿ ಡಿ.ಶೇಖರ್ ಅವರಿಗೆ ಜೀವ ಬೆದರಿಕೆ ಸಂದೇಶಕ್ಕೆ ಸಂಬಂಧಿಸಿದ ಆರೋಪಿಯನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಪರಶುರಾಮ್ ತಿಳಿಸಿದರು.
ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆರೋಪಿಯ ಹೆಸರು ಡಾ.ತಿಪ್ಪೇರುದ್ರಸ್ವಾಮಿ, ಇವರು ಚಿಕ್ಕಬಳ್ಳಾಪುರ ಜಿಲ್ಲೆಯ ಮುದ್ದೇನಹಳ್ಳಿ ಗ್ರಾಮದವರು. ಇಲ್ಲಿನ ಸತ್ಯಸಾಯಿ ಸರಳ ಆಸ್ಪತ್ರೆಯಲ್ಲಿ ವೈದ್ಯರಾಗಿ ಕೆಲಸ ಮಾಡುತ್ತಿದ್ದಾರೆ. ಇವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ಹೇಳಿದರು.
ರಾಷ್ಟ್ರೀಯ ವಡ್ಡರ ಸೇನೆ ಎಂಬ ಸಂಘಟನೆ ಕಟ್ಟಿಕೊಂಡಿದ್ದಾರೆ. ಇದೇ ಜುಲೈ ೧ ರಂದು ಧಾರವಾಡದಲ್ಲಿ ಸಮಾವೇಶ ನಡೆಸಿದ್ದರು. ಇದನ್ನು ಸಹಿಸದ ಅಖಿಲ ಕರ್ನಾಟಕ ಭೋವಿ ಸಂಘದ ಕೆಲವು ಸದಸ್ಯರು, ಡಾ.ತಿಪ್ಪೇರುದ್ರಸ್ವಾಮಿ ಅವರ ಸಂಘಟನೆಯ ಕಾರ್ಯಕರ್ತರಿಗೆ ತೊಂದರೆ ಕೊಡುತ್ತಿದ್ದರು ಎಂದು ಡಾ.ತಿಪ್ಪೇರುದ್ರಸ್ವಾಮಿ ದೂರಿದ್ದಾರೆ ಎಂದರು.
ಹಾಗಾಗಿ ಇವರ ವಿರುದ್ಧ ಸೇಡು ತೀರಿಸಿಕೊಳ್ಳುವ ಉದ್ದೇಶದಿಂದ ಅಖಿಲ ಕರ್ನಾಟಕ ಭೋವಿ ಸಂಘದ ನಾಲ್ವರ ಹೆಸರುಗಳನ್ನು ಬಳಸಿಕೊಂಡು, ಇವರಿಂದ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ಹಾಗೂ ಬಿಜೆಪಿ ಶಾಸಕರಿಬ್ಬರಿಗೆ ಜೀವ ಬೆದರಿಕೆ ಇದೆ ಎಂಬ ಸಂದೇಶ ಕಳಿಸಿದ್ದಾಗಿ ತನಿಖೆ ಸಂದರ್ಭದಲ್ಲಿ ಡಾ.ತಿಪ್ಪೇರುದ್ರಸ್ವಾಮಿ ಒಪ್ಪಿಕೊಂಡಿದ್ದಾರೆ ಎಂದು ಹೇಳಿದರು.
ಈ ಹಿನ್ನೆಲೆಯಲ್ಲಿ ಅವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಪರಶುರಾಮ್ ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!