ಹೊಸ ದಿಗಂತ ಆನ್ ಲೈನ್ ಡೆಸ್ಕ್:
ರಾಜ್ಯದ ಎಲ್ಲ ವಿಶ್ವವಿದ್ಯಾಲಯ-ಕಾಲೇಜುಗಳ ನಾಕ್ ಮಾನ್ಯತೆ, ಎನ್ಐಆರ್ಎಫ್ ರಾಂಕ್ ಪಡೆಯುವ ಸಂಬಂಧ 15 ದಿನಗಳ ಒಳಗಾಗಿ ಕ್ರಿಯಾ ಯೋಜನೆ ಸಲ್ಲಿಸುವಂತೆ ಎಲ್ಲ ಕುಲಪತಿಗಳಿಗೆ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಡೆಡ್ಲೈನ್ ವಿಧಿಸಿದ್ದಾರೆ.
ಬೆಂಗಳೂರಿನಲ್ಲಿ ಸೋಮವಾರ ಸರ್ಕಾರದ ಎಲ್ಲ ವಿಶ್ವವಿದ್ಯಾಲಯಗಳ ಕುಲಪತಿಗಳ ಸಭೆಯಲ್ಲಿ, ‘ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ನಮ್ಮ ರಾಜ್ಯದ ಶೈಕ್ಷಣಿಕ ಕ್ಷೇತ್ರದಲ್ಲೊಂದು ಬಹುದೊಡ್ಡ ಬದಲಾವಣೆ. ಇದಕ್ಕೆ ಅನುಗುಣವಾಗಿ ನಾವೆಲ್ಲ ಹೆಜ್ಜೆ ಇಡಬೇಕು. ಸ್ಪರ್ಧಾತ್ಮಕವಾಗಿರುವ ಈ ಸಂದರ್ಭದಲ್ಲಿ ಪ್ರತಿ ವಿವಿಯು ರಾಷ್ಟ್ರೀಯ ಸಾಂಸ್ಥಿಕ ಶ್ರೇಯಾಂಕದ ಚೌಕಟ್ಟಿನ (National Institutional Ranking Framework-NIRF) ರಾಂಕ್ ಹೊಂದಿರಬೇಕು ಹಾಗೂ ಪ್ರತಿ ಕಾಲೇಜ್ಗೂ ನಾಕ್ ಮಾನ್ಯತೆ (NAAC Accreditation) ಇರಲೇಬೇಕು ಎಂದು ಸ್ಪಷ್ಟ ಮಾತುಗಳಲ್ಲಿ ಹೇಳಿದರು.
ಈ ಹಿನ್ನೆಲೆ ಈಗ ಮೊದಲಿನಂತೆ ನಿಧಾನಗತಿಯಲ್ಲಿ ಕೆಲಸ ಮಾಡಿದರೆ ಸಾಲುವುದಿಲ್ಲ. ಬದಲಾಗುತ್ತಿರುವ ಜಗತ್ತಿಗೆ ಅನುಗುಣವಾಗಿ ಓಡಬೇಕು. ಜಾಗತಿಕ ಶೈಕ್ಷಣಿಕ ಕ್ಷೇತ್ರದಲ್ಲಿ ಏನೇನಾಗುತ್ತಿದೆ ಎಂಬುದನ್ನು ಗಮನಿಸಬೇಕು. ಅದರಂತೆ ನಮ್ಮ ವಿವಿಗಳನ್ನು ವರ್ತಮಾನದ ಅಗತ್ಯಗಳಿಗೆ ಅನುಗುಣವಾಗಿ ಮರುರೂಪಿಸಬೇಕು. ಅದಕ್ಕೆ ಶಿಕ್ಷಣ ನೀತಿಯನ್ನು ಜೋಡಿಸಬೇಕು ಹಾಗೂ ಜಾಗತಿಕವಾಗಿ ಎಲ್ಲರೂ ಒಪ್ಪಿರುವ ಇಂಥ ರಾಂಕ್-ಮಾನ್ಯತೆ ಅತ್ಯಗತ್ಯ ಎಂದು ಕುಲಪತಿಗಳಿಗೆ ಉಪ ಮುಖ್ಯಮಂತ್ರಿ ಸಲಹೆ ನೀಡಿದರು.
ಎನ್ಐಆರ್ಎಫ್ ರಾಂಕಿಂಗ್- ನಾಕ್ ಮಾನ್ಯತೆಯನ್ನು ಯಾವ ಕಾರಣಕ್ಕೂ ನಿರ್ಲಕ್ಷ್ಯ ಮಾಡುವಂತಿಲ್ಲ. ಜಾಗತಿಕ ಶಿಕ್ಷಣ ಸಂಸ್ಥೆಗಳ ಜತೆ ಒಡಂಬಡಿಕೆ ಮಾಡಿಕೊಳ್ಳಬೇಕಾದರೆ, ಹೆಚ್ಚು ಅನುದಾನ ಪಡೆಯಬೇಕಾದರೆ ಕೂಡ ಇವು ಅತ್ಯಗತ್ಯ ಎಂದು ಡಿಸಿಎಂ ಹೇಳಿದರು.
ಸದ್ಯ ರಾಜ್ಯದಲ್ಲಿ ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್ಸಿ)ಯು ಎನ್ಐಆರ್ಎಫ್ ರಾಂಕಿಂಗ್ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದೆ. ಮೈಸೂರು ವಿವಿ-27, ಬೆಂಗಳೂರು ವಿವಿ-68, ಶಿವಮೊಗ್ಗದ ಕುವೆಂಪು ವಿವಿ-73 ಹಾಗೂ ಬೆಳಗಾವಿಯ ವಿಟಿಯು-80ನೇ ಸ್ಥಾನದಲ್ಲಿವೆ.
ನಮ್ಮ ರಾಜ್ಯದ ಸರಕಾರಿ ಸ್ವಾಮ್ಯದ 19 ವಿವಿಗಳ ಪೈಕಿ ಎನ್ಐಆರ್ಎಫ್ ರಾಂಕಿಂಗ್ ಪಟ್ಟಿಯಲ್ಲಿ ಎ-ಅದಕ್ಕಿಂತ ಮೇಲ್ಪಟ್ಟು ಸ್ಥಾನದಲ್ಲಿ 6 ವಿವಿ, ಬಿ-ಎ ಹಂತದಲ್ಲಿ 4 ವಿವಿಗಳಿದ್ದರೆ, ಮಾನ್ಯತೆ ಪಡೆದ 9 ವಿವಿಗಳಿವೆ. ಉಳಿದಂತೆ ಇನ್ನೆರಡು ವಿವಿಗಳು ಅರ್ಜಿ ಹಾಕಿಕೊಂಡಿದ್ದು, ಇನ್ನು 4 ವಿವಿಗಳು ಅರ್ಜಿಯನ್ನೇ ಹಾಕಿಲ್ಲ. 3 ವಿವಿಗಳು ಎನ್ಐಆರ್ಎಫ್ ರಾಂಕಿಂಗ್ಗೆ ಅರ್ಹತೆಯನ್ನೇ ಹೊಂದಿಲ್ಲ ಎಂದು ಮಾಹಿತಿ ನೀಡಿದರು.
ಸಭೆಯಲ್ಲಿ ಉನ್ನತ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಕುಮಾರನಾಯಕ್, ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ಆಯುಕ್ತ ಪ್ರದೀಪ್, ಉನ್ನತ ಶಿಕ್ಷಣ ಪರಿಷತ್ತಿನ ಉಪಾಧ್ಯಕ್ಷ ಪ್ರೊ.ತಿಮ್ಮೇಗೌಡ, ಪರಿಷತ್ತಿನ ಕಾರ್ಯನಿರ್ವಾಹಕ ನಿರ್ದೇಶಕ ಗೋಪಾಲ ಜೋಶಿ ಮುಂತಾದವರು ಪಾಲ್ಗೊಂಡಿದ್ದರು.