ಹೊಸ ದಿಗಂತ ವರದಿ, ದಾವಣಗೆರೆ:
ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕು ಚಿಕ್ಕಬಿದರಿಯ ಹಿರಿಯ ಸರ್ಕಾರಿ ಪ್ರಾಥಮಿಕ ಶಾಲೆ ಆವರಣದಲ್ಲಿ ಆರೋಗ್ಯ ಇಲಾಖೆ, ತಾಲ್ಲೂಕು ಪಂಚಾಯತ್ ಸಹಯೋಗದಲ್ಲಿ ಭಾನುವಾರ ವಿಶೇಷ ಉಚಿತ ಆರೋಗ್ಯ ತಪಾಸಣಾ ಶಿಬಿರ ಏರ್ಪಡಿಸಲಾಗಿತ್ತು.
ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಸುದ್ದಿಗಾರರೊಂದಿಗೆ ಮಾತನಾಡಿ, ಚಿಕ್ಕಬಿದರಿ ಸಮೀಪದ ಡಿಸ್ಟಿಲರಿ ಕಾರ್ಖಾನೆಯಿಂದ ಹೊರಸೂಸುವ ಹಾರುಬೂದಿಯಿಂದಾಗಿ ಗ್ರಾಮಸ್ಥರಿಗೆ ತೀವ್ರ ತೊಂದರೆಯಾಗುತ್ತಿದೆ. ಆರೋಗ್ಯ ಸಮಸ್ಯೆಗಳು
ತಲೆದೋರುತ್ತಿವೆ ಎಂಬುದಾಗಿ ಇಲ್ಲಿನ ಗ್ರಾಮಸ್ಥರು ದೂರು ನೀಡಿದ್ದರು. ಹೀಗಾಗಿ ಗ್ರಾಮಸ್ಥರ ಕೋರಿಕೆಯಂತೆ ಆರೋಗ್ಯ ಇಲಾಖೆ ವತಿಯಿಂದ ವಿಶೇಷ ಉಚಿತ ಆರೋಗ್ಯ ತಪಾಸಣೆ ಶಿಬಿರ ಆಯೋಜಿಸಲಾಗಿದೆ. ಕಾರ್ಖಾನೆಯಿಂದ ಹೊರಸೂಸುವ ಹಾರುಬೂದಿ ಹಾಗೂ ತ್ಯಾಜ್ಯದಿಂದ ಗಾಳಿ, ನೀರು ಕಲುಷಿತವಾಗಿರುವ ಬಗ್ಗೆ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.
ಕಾರ್ಖಾನೆಯವರು ಮಾಲಿನ್ಯ ನಿಯಂತ್ರಣಕ್ಕಾಗಿ ನೂತನ ತಂತ್ರಜ್ಞಾನ ಅಳವಡಿಸಿಕೊಳ್ಳುವಂತೆ ಸೂಚಿಸಲಾಗುವುದು. ಇದರ ಜೊತೆಗೆ ಇಲ್ಲಿನ ಗ್ರಾಮಗಳ ನೀರಿನ ಮಾದರಿ ಸಂಗ್ರಹಿಸಿ, ಬಳಕೆಗೆ ಯೋಗ್ಯವಿರುವ ಬಗ್ಗೆ ಪರೀಕ್ಷಿಸಿ ವರದಿ ಸಲ್ಲಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ಜನರಲ್ಲಿ ವಿಶ್ವಾಸ ಮೂಡಿಸುವ ಕಾರ್ಯ ಮಾಡಲಾಗುವುದು
ಗ್ರಾಮಸ್ಥರ ರಕ್ತದ ಮಾದರಿ ಸಂಗ್ರಹಿಸಿ ವಿಶೇಷ ಪರೀಕ್ಷೆಗೆ ಒಳಪಡಿಸುವಂತೆಯೂ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ಇದೀಗ ಗ್ರಾಮದಲ್ಲಿ ವಿಶೇಷ ಆರೋಗ್ಯ ತಪಾಸಣಾ ಶಿಬಿರ ಏರ್ಪಡಿಸಿದ್ದು, ಆರೋಗ್ಯ ಸಮಸ್ಯೆ ಗಂಭೀರವಾಗಿದ್ದಲ್ಲಿ
ಜಿಲ್ಲಾಸ್ಪತ್ರೆಯಲ್ಲಿ ಹೆಚ್ಚಿನ ಚಿಕಿತ್ಸೆ ಕೊಡಿಸಲಾಗುವುದು. ಆರೋಗ್ಯ ಇಲಾಖೆ ನೀಡುವ ವರದಿಯನ್ನಾಧರಿಸಿ ಮುಂದಿನ ಅಗತ್ಯ ಕ್ರಮ ಜರುಗಿಸಲಾಗುವುದು. ಗ್ರಾಮಸ್ಥರ ಆರೋಗ್ಯ ಕಾಪಾಡಲು ಜಿಲ್ಲಾಡಳಿತ ಬದ್ಧವಾಗಿದ್ದು, ಈ ಕುರಿತು ಜನರಲ್ಲಿ ವಿಶ್ವಾಸ ಮೂಡಿಸುವ
ಕಾರ್ಯ ಮಾಡಲಾಗುವುದು ಎಂದು ಅವರು ತಿಳಿಸಿದರು.
ನಿಯಂತ್ರಣಕ್ಕೆ ಕ್ರಮ ವಹಿಸಲಾಗಿದೆ
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪದ್ಮಾ ಬಸವಂತಪ್ಪ ಮಾತನಾಡಿ, ಜಿಲ್ಲೆಯ ಕೆಲವು ಗ್ರಾಮಗಳಲ್ಲಿನ ನೀರಿನಲ್ಲಿ ಫ್ಲೋರೈಡ್ ಅಂಶ ಇರುವ ಬಗ್ಗೆ ಮಾಹಿತಿ ಬಂದಿದೆ. ಇದಕ್ಕೆ ಕಾರಣಗಳನ್ನು ಕಂಡುಹಿಡಿದು, ನಿಯಂತ್ರಣಕ್ಕೆ ಕ್ರಮ ವಹಿಸಲಾಗಿದೆ.
ಜಲಸಿರಿ ಯೋಜನೆಯಡಿ ಕೊಂಡಜ್ಜಿ ಹಾಗೂ ಸುತ್ತಮುತ್ತಲ 11 ಗ್ರಾಮಗಳಿಗೆ ಶುದ್ಧ ನೀರು ಪೂರೈಸಲು ಯೋಜನೆ ರೂಪಿಸಲಾಗಿದೆ. ಸ್ವಚ್ಛ ಭಾರತ್ ಮಿಷನ್ನಡಿ ಮನೆ-ಮನೆಯಿಂದ ಕಸ ಸಂಗ್ರಹಿಸಿ, ಪ್ಲಾಸ್ಟಿಕ್ ತೊಡೆದುಹಾಕಿ ಪರಿಸರ ಕಾಯ್ದುಕೊಳ್ಳುವುದು ಹಾಗೂ
ಶೌಚಾಲಯಗಳನ್ನು ಬಳಸುವಂತೆ ಜಾಗೃತಿ ಮೂಡಿಸಲಾಗುವುದು. ಇಲ್ಲಿನ ಗ್ರಾಮಗಳಲ್ಲಿ ಗಾಳಿ, ನೀರಿನಿಂದ ಹರಡುವ ರೋಗ ತಡೆಗಟ್ಟಲು ಕ್ರಮ ಕೈಗೊಳ್ಳಲಾಗುವುದು ಎಂದರು.
ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ರಾಘವನ್, ಉಪವಿಭಾಗಾಧಿಕಾರಿ ಮಮತಾ ಹೊಸಗೌಡರ್, ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಡಾ.ನಟರಾಜ್, ಆರೋಗ್ಯಾಧಿಕಾರಿ ಡಾ.ಚಂದ್ರಮೋಹನ್
ಸೇರಿದಂತೆ ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳು, ತಹಸಿಲ್ದಾರರು, ಗ್ರಾಪಂ ಸದಸ್ಯರು, ಗ್ರಾಮದ ಮುಖಂಡರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಗ್ರಾಮಸ್ಥರ ಕಿವಿ, ಮೂಗು, ಗಂಟಲು, ಕಣ್ಣು, ಕೋವಿಡ್, ಚರ್ಮರೋಗ, ಮಧುಮೇಹ, ರಕ್ತದೊತ್ತಡ, ಹೃದ್ರೋಗ ಮುಂತಾದ ಪರೀಕ್ಷೆಗಳಿಗೆ ಶಾಲೆಯ ಪ್ರತಿ ಕೊಠಡಿಗಳಲ್ಲಿ ಪ್ರತ್ಯೇಕ ವಿಭಾಗ ವ್ಯವಸ್ಥೆ ಮಾಡಲಾಗಿತ್ತು. ಹರಿಹರ ಹಾಗೂ ದಾವಣಗೆರೆಯ
ತಜ್ಞ ವೈದ್ಯರು ಗ್ರಾಮಸ್ಥರ ಆರೋಗ್ಯ ತಪಾಸಣೆ ನಡೆಸಿದರು.