ಹೊಸದಿಗಂತ ವರದಿ,ಮೈಸೂರು:
ಸುತ್ತೂರು ಮಠವು ಇತರೆ ಮಠಗಳಿಗೆ ಮಾದರಿಯಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.
ಸೋಮವಾರ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಸುತ್ತೂರು ಗ್ರಾಮದಲ್ಲಿ ಆಯೋಜಿಸಲಾಗಿದ್ದ ಸುತ್ತೂರು ಜಗದ್ಗುರು ವೀರಸಿಂಹಾಸನ ಮಹಾಸಂಸ್ಥಾನದ ಸಂಸ್ಥಾಪಕರಾದ ಶ್ರೀ ಆದಿ ಜಗದ್ಗುರು ಶಿವರಾತ್ರೀಶ್ವರ ಶಿವಯೋಗಿಗಳ 1061ನೆಯ ಜಯಂತಿ ಮಹೋತ್ಸವವನ್ನು ಉದ್ಘಾಟಿಸಿ, ಪಂಚಾoಗ ಬಿಡುಗಡೆ ಹಾಗೂ ಕೃತಿಯನ್ನು ಲೋಕಾರ್ಪಣೆ ಮಾಡಿ ಮಾತನಾಡಿದ ಅವರು,
ಹತ್ತು ಶತಮಾನಗಳ ಹಿಂದೆ ಲೋಕಕಲ್ಯಾಣಕ್ಕಾಗಿ ಕಪಿಲಾ ನದಿಯ ದಡದಲ್ಲಿ ಸುತ್ತೂರು ಶ್ರೀ ಕ್ಷೇತ್ರದಲ್ಲಿ ಮಹಾಸಂಸ್ಥಾನ ಸ್ಥಾಪಿಸಿದ ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳು ಶ್ರೇಷ್ಠ ಸಂತರಲ್ಲಿ ಪ್ರಾತಃಸ್ಮರಣೀಯರಾಗಿದ್ದಾರೆ ಎಂದು ಹೇಳಿದರು.
ಗಂಗರು ಮತ್ತು ಚೋಳರ ನಡುವೆ ಸಂಭವಿಸಲಿದ್ದ ಯುದ್ಧವನ್ನ ತಡೆದು ಘೋರ ಅನಾಹುತವನ್ನ ತಪ್ಪಿಸಿದ ಶ್ರೀಗಳ ದೂರ ದೃಷ್ಟಿಗೆ ಸಾಟಿಯಿಲ್ಲ. ಶತಮಾನಗಳಿಂದ ಮಠದ ಪರಂಪರೆಯಿoದ ಬಂದ ಎಲ್ಲಾ ಧಾರ್ಮಿಕ, ಆಧ್ಯಾತ್ಮಿಕ, ಶೈಕ್ಷಣಿಕ, ಸಾಮಾಜಿಕ, ಸಾಹಿತ್ಯ ಮತ್ತು ಸಾಂಸ್ಕೃತಿಕ ಕ್ಷೇತ್ರಗಳ ಅಭ್ಯುದಯಕ್ಕೆ ತಮ್ಮದೇ ಆದ ಭವ್ಯ ಕೊಡುಗೆಯನ್ನು ನೀಡುತ್ತಾ ಬಂದಿದ್ದಾರೆ ಎಂದು ತಿಳಿಸಿದರು.
ನಾಡಿನಲ್ಲಿ ಪ್ರಾಕೃತಿಕ ವಿಕೋಪಗಳು ಸಂಭವಿಸಿದಾಗಲೆಲ್ಲ ಶ್ರೀಮಠ ನೇರವಿನ ಹಸ್ತ ಚಾಚಿದೆ. ಕೋರೊನ ಲಾಕ್ಡೌನ್ ಸಂದರ್ಭದಲ್ಲೂ ಶ್ರೀಮಠ ಎಲ್ಲಾ ರೀತಿಯಲ್ಲೂ ಬೆಂಬಲ ನೀಡಿದೆ. ತ್ರಿವಿಧ ದಾಸೋಹಗಳ ಮೂಲಕ ಲಕ್ಷಾಂತರ ಮಂದಿಯ ಬಾಳು ಬೆಳಗಿದೆ ಎಂದರು.
ಭಾರತದಲ್ಲಿ ಅದರಲ್ಲೂ ವಿಶೇಷವಾಗಿ ಕರ್ನಾಟಕದಲ್ಲಿ ಮಠಗಳು ಮತ್ತು ಇತರ ಧಾರ್ಮಿಕ ಸಂಸ್ಥೆಗಳು ಜನರ ಸಾಮಾಜಿಕ ಮತ್ತು ಶೈಕ್ಷಣಿಕ ಬದುಕಿನಲ್ಲಿ ನೀಡಿರುವ ಕೊಡುಗೆ ಅನನ್ಯವಾದದ್ದು. ಸುತ್ತೂರು ಮಠವು ಇತರೆ ಮಠಗಳಿಗೆ ಮಾದರಿಯಾಗಿದೆ. ಮಠದ ಜನಪರ ಚಟುವಟಿಕೆಗಳಿಗಾಗಿ ಸರ್ಕಾರದ ಬೆಂಬಲ ಸದಾ ಇರುತ್ತದೆ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ `ಶ್ರೀ ಸುತ್ತೂರೇಶ್ವರ ಶತಕಗಳು’ ಕೃತಿಯನ್ನು ಲೋಕಾರ್ಪಣೆ ಮಾಡಲಾಯಿತು. ಸುತ್ತೂರು ಮಠದ ಪೀಠಾಧ್ಯಕ್ಷರಾದ ಶ್ರೀ ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ, ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್, ಪೌರಾಡಳಿತ ಸಚಿವ ನಾರಾಯಣಗೌಡ, ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್, ಶಾಸಕರಾದ ಎಸ್.ಎ.ರಾಮದಾಸ್, ಜಿ.ಟಿ.ದೇವೇಗೌಡ, ಎಲ್.ನಾಗೇಂದ್ರ, ನಿರಂಜನ್ ಕುಮಾರ್, ತನ್ವೀರ್ ಸೇಠ್, ಎನ್.ಮಹೇಶ್, ಅಶ್ವಿನ್ ಕುಮಾರ್, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಚ್.ವಿ.ರಾಜೀವ್, ಚಿತ್ರ ನಟ ದೊಡ್ಡಣ್ಣ, ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ಸೇರಿದಂತೆ ಇತರರು ಉಪಸ್ಥಿತರಿದ್ದರು.