June 14, 2026
Sunday, June 14, 2026
spot_img

ಟ್ಯೂಷನ್‌ನಿಂದ ಮನೆಗೆ ಬರುತ್ತಿದ್ದ ಬಾಲಕನನ್ನು ಕಿಡ್ನ್ಯಾಪ್‌ ಮಾಡಿ ಬೆಂಕಿ ಹಾಕಿ ಕೊಂದ ದುರುಳರು!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಅರಕೆರೆಯ ಶಾಂತಿನಿಕೇತನ ಬಡಾವಣೆಯಲ್ಲಿ ಟ್ಯೂಷನ್‌ ಮುಗಿಸಿಕೊಂಡು ಬುಧವಾರ ರಾತ್ರಿ ಮನೆಗೆ ತೆರಳುತ್ತಿದ್ದ ಬಾಲಕನನ್ನು ಅಪಹರಿಸಿ ಕೊಲೆ ಮಾಡಲಾಗಿದ್ದು, ಆರೋಪಿಗಳಿಗಾಗಿ ಹುಳಿಮಾವು ಠಾಣೆಯ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

ನಿಶ್ಚಿತ್‌ (13) ಕೊಲೆಯಾದ ಬಾಲಕ. ನಿಶ್ಚಿತ್‌ ಅವರ ತಂದೆ ಕಾಲೇಜೊಂದರಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಕೆಲಸ ಮಾಡುತ್ತಿದ್ದಾರೆ. ನಿಶ್ಚಿತ್‌ ಮನೆಪಾಠಕ್ಕೆ ಹೋಗಿ ಮನೆಗೆ ವಾಪಸ್ ಬರುತ್ತಿದ್ದ. ಆಗ ಕಾರಿನಲ್ಲಿ ಬಂದ ದುಷ್ಕರ್ಮಿಗಳು, ಬಾಲಕನನ್ನು ಅಪಹರಣ ಮಾಡಿದ್ದರು. ನಂತರ, ನಿಶ್ಚಿತ್‌ ತಂದೆಗೆ ಕರೆ ಮಾಡಿದ್ದ ಆರೋಪಿಗಳು, ₹5 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದರು ಎಂದು ಮೂಲಗಳು ತಿಳಿಸಿವೆ.‌

ಪ್ರಕರಣ ದಾಖಲಿಸಿಕೊಂಡ ಪೊಲೀಸರು ಕಿಡ್ನ್ಯಾಪರ್ಸ್‌ಗಾಗಿ ಹುಡುಕಾಟ ಆರಂಭಿಸಿದ್ದರು. ಪೊಲೀಸರು ಲೊಕೇಶನ್ ಟ್ರೇಸ್ ಮಾಡಿ ಕಿಡ್ನ್ಯಾಪರ್ಸ್‌ಗಾಗಿ ಹುಡುಕಾಟ ನಡೆಸಿದ್ದರು. ಮತ್ತೊಂದೆಡೆ 5 ಲಕ್ಷ ರೂ. ಹಣವನ್ನು ಕೈಯಲ್ಲಿಡಿದು ಪೋಷಕರು ಕಾದು ಕುಳಿತ್ತಿದ್ದರು. ಹಣ ನೀಡಿ ಮಗನನ್ನು ರಕ್ಷಿಸಲು ಮುಂದಾಗಿದ್ದರು. ಅಷ್ಟರಲ್ಲಿ ಬಾಲಕನ ಮೃತದೇಹವು ಕಗ್ಗಲಿಪುರ ರಸ್ತೆಯ ನಿರ್ಜನ‌ ಪ್ರದೇಶದಲ್ಲಿ ಗುರುವಾರ ಸಂಜೆ ಪತ್ತೆಯಾಗಿದೆ ಎಂದು ಮೂಲಗಳು ತಿಳಿಸಿವೆ.

ಸದ್ಯ ಹುಳಿಮಾವು ಪೊಲೀಸರು ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಪ್ರತ್ಯೇಕ ತಂಡ ರಚಿಸಲಾಗಿದೆ. ಬಾಲಕನನ್ನು ಅಪಹರಣ ಮಾಡಿದ ಸ್ಥಳದ ಆಸುಪಾಸಿನಲ್ಲಿದ್ದ ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾದ ದೃಶ್ಯಾವಳಿಗಳನ್ನು ಪರಿಶೀಲನೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದರು.

ಬಾಲಕನ ಕುತ್ತಿಗೆ ಕೊಯ್ದು ಕೊಲೆ ಮಾಡಲಾಗಿದೆ. ಕೊಲೆ ಮಾಡಿದ ಬಳಿಕ ಮೃತದೇಹದ ಮೇಲೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿ ಬಂಡೆಯ ಮೇಲೆ ಎಸೆದು ಆರೋಪಿಗಳು ಪರಾರಿ ಆಗಿದ್ದಾರೆ. ಮೃತದೇಹವು ಬಹುತೇಕ ಸುಟ್ಟು ಹೋಗಿದೆ ಎಂದು ಪೊಲೀಸರು ಹೇಳಿದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !