ಹೊಸದಿಗಂತ ವರದಿ, ಮಂಡ್ಯ :
ಬರ ಪರಿಸ್ಥಿತಿ ನಿರ್ವಹಣೆ ಮಾಡುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಇದೊಂದು ರೀತಿಯಲ್ಲಿ ಖಾಲಿ ಡಬ್ಬವಿದ್ದಂತೆ. ಒಡಕಲು ಮನೆಯಾಗಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಅಶ್ವತ್ಥನಾರಾಯಣ ಆರೋಪಿಸಿದರು.
ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇವಲ ಮೋದಿಯವರನ್ನು ಟೀಕೆ ಮಾಡುವುದರಲ್ಲೇ ಕಾಲ ಕಳೆಯುತ್ತಿದ್ದಾರೆಯೇ ಹೊರತು, ರಾಜ್ಯದಲ್ಲಿರುವ ಬರ ಪರಿಸ್ಥಿತಿ ಬಗ್ಗೆ ವರದಿ ತಯಾರಿಸಿ ಕೇಂದ್ರಕ್ಕೆ ಸಲ್ಲಿಸುವಲ್ಲಿ ವಿಫಲರಾಗಿದ್ದಾರೆ ಎಂದು ದೂರಿದರು.
ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ಇನ್ನೂ ಕೇಂದ್ರಕ್ಕೆ ವರದಿ ಸಲ್ಲಿಸಿಲ್ಲ, ವರದಿ ತಯಾರಿಸಿಕೊಡಿ, ಡಿಬಿಟಿ ಮಾಡಲು ಯೋಜನೆ ರೂಪಿಸಬೇಕಾಗಿದೆ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ತಿಳಿಸಿದ್ದಾರೆ. ಅವರ ಹೇಳಿಕೆ ಗಮನಿಸಿದರೆ ಇನ್ನೂ ಕೇಂದ್ರಕ್ಕೆ ವರದಿ ಸಲ್ಲಿಸಿಲ್ಲ ಎಂಬುದು ಅರ್ಥವಾಗುತ್ತದೆ. ತಮ್ಮ ಸರ್ಕಾರದ ಲೋಪವನ್ನು ಮುಚ್ಚಿಕೊಳ್ಳಲು ಕೇಂದ್ರ ನಮಗೆ ಹಣ ಕೊಡುತ್ತಿಲ್ಲ ಎಂದು ರಾಜ್ಯ ಸರ್ಕಾರ ಆರೋಪ ಮಾಡುತ್ತಿರುವುದರಲ್ಲಿ ಯಾವುದೇ ಸತ್ಯಾಂಶವಿಲ್ಲ ಎಂದು ಟೀಕಿಸಿದರು.
ಇತ್ತೀಚೆಗೆ ಸದಾನಂದಗೌಡ ಅವರ ಭರ ಅಧ್ಯಯನ ತಂಡ ಜಿಲ್ಲೆಯ ನಾಲ್ಕಾರು ತಾಲೂಕುಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದ ಸಂದರ್ಭದಲ್ಲಿ ಭೀಕರ ಬರಗಾಲ ತಲೆದೋರಿದೆ. ಸಾಮಾನ್ಯವಾಗಿ ಮೇ ತಿಂಗಳಲ್ಲಿ ಮಳೆ ಬರಲ್ಲ ಎಂಬ ಮುನ್ಸೂಚನೆ ಇದ್ದರೂ ಅದಕ್ಕೆ ಸರಿಯಾದ ರೀತಿಯಲ್ಲಿ ಕ್ರಮ ಕೈಗೊಳ್ಳಲಿಲ್ಲ. ಆದರಿಂದಾಗಿ ಪರಿಸ್ಥಿತಿ ಮತ್ತಷ್ಟು ಉಲ್ಬಣವಾಗಲು ಕಾರಣವಾಗಿದೆ ಎಂದು ಆರೋಪಿಸಿದರು.