ಬಾಗಲಕೋಟೆ: ಜಿಲ್ಲೆಯಾದ್ಯಂತ ಜೂನ್ 30 ವರೆಗೆ ಲಾಕ್ಡೌನ್ ಮುಂದುವರೆದಿದ್ದು, ಪ್ರತಿದಿನ ಸಂಜೆ 9 ಗಂಟೆಯಿಂದ ಬೆಳಿಗ್ಗೆ 5 ಗಂಟೆವರೆಗೆ ಅವಶ್ಯಕ ಕಾರಣವಿಲ್ಲದ ಹೊರತು ಎಲ್ಲ ವ್ಯಕ್ತಿಗಳ ಸಂಚಾರವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗಳಧ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ಆದೇಶ ಹೊರಡಿಸಿದ್ದಾರೆ.
65 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು, 10 ವರ್ಷದೊಳಗಿನ ಮಕ್ಕಳು, ಯಾವುದೇ ರೋಗವನ್ನು ಹೊಂದಿರುವ ರೋಗಗ್ರಸ್ಥ ವ್ಯಕ್ತಿಗಳು ಹಾಗೂ ಗರ್ಭಿಣಿಯರು ಆರೋಗ್ಯ, ಅವಶ್ಯಕ ಪೂರೈಕೆಗಳಂತಹ ಅನಿವಾರ್ಯ ಕಾರಣಗಳಲ್ಲದ ಹೊರತು ಕಡ್ಡಾಯವಾಗಿ ಮನೆಯಲ್ಲಿಯೇ ಇರುವಂತೆ ತಕ್ಷಣದಿಂದ ಜಾರಿಗೆ ಬರುವಂತೆ ಆದೇಶಿಸಿದ್ದಾರೆ.
ಈ ಆದೇಶವನ್ನು ಪೊಲೀಸ್ ಅಧೀಕ್ಷಕರು ಕಟ್ಟುನಿಟ್ಟಾಗಿ ಜಾರಿಗೆ ತರಲು ಕ್ರಮವಹಿಸಬೇಕು. ಆದೇಶ ಅನುಷ್ಠಾನಕ್ಕೆ ಇತರೆ ಯಾವುದೇ ಇಲಾಖೆಯ ಅಧಿಕಾರಿ, ಸಿಬ್ಬಂದಿಗಳ ಸೇವೆಯನ್ನು ಅಗತ್ಯವಿದ್ದಲ್ಲಿ ಪಡೆದುಕೊಳ್ಳಲು ಅನುಮತಿ ನೀಡಲಾಗಿದೆ. ಜಿಲ್ಲೆಯ ಎಲ್ಲ ತಾಲೂಕಾ ದಂಡಾಧಿಕಾರಿಗಳು ಹಾಗೂ ಜಿಲ್ಲೆಯ ಎಲ್ಲ ಉಪವಿಭಾಗದ ದಂಡಾಧಿಕಾರಿಗಳು ತಮ್ಮ ಕಾರ್ಯವ್ಯಾಪ್ತಿಯಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಆರಕ್ಷಕ ಇಲಾಖೆಗೆ ಅಗತ್ಯ ಸಹಕಾರ ನೀಡುವ ಜೊತೆಗೆ ಆದೇಶ ಉಲ್ಲಂಘಿಸಿದವರ ವಿರುದ್ದ ಕ್ರಮ ಜರುಗಿಸುವಂತೆ ಆದೇಶದಲ್ಲಿ ತಿಳಿಸಿದ್ದಾರೆ.