ಕಲಬುರಗಿ: ಬೆಣ್ಣೆತೋರಾ ಯೋಜನೆ ಜಲಾಶಯವು ಭರ್ತಿಯಾಗಿದೆ. ಸೆಪ್ಟೆಂಬರ್ 16 ರಿಂದ 20 ರವರೆಗೆ ಜಲಾನಯನ ಪ್ರದೇಶದಲ್ಲಿ ಇನ್ನೂ ವ್ಯಾಪಕವಾಗಿ ಮಳೆಯಾಗುವುದಾಗಿ ಭಾರತೀಯ ಹವಾಮಾನ ಇಲಾಖೆಯವರು ತಿಳಿಸಿರುತ್ತಾರೆ. ಈ ಜಲಾಶಯಕ್ಕೆ ಹೆಚ್ಚಿನ ಒಳಹರಿವು ಬರುತ್ತಿರುವುದರಿಂದ ಗರಿಷ್ಠ ಮಟ್ಟದ ನಂತರ ಬಂದ ಒಳಹರಿವಿನ ನೀರನ್ನು ಆಣೆಕಟ್ಟಿನ ಕೋಡಿ ಮುಖಾಂತರ ನದಿಗೆ ನೀರು ಹರಿಬಿಡಲಾಗುತ್ತದೆ ಎಂದು ಕರ್ನಾಟಕ ನೀರಾವರಿ ನಿಗಮ ನಿಯಮಿತ ಹೆಬ್ಬಾಳ ಬೆಣ್ಣೆತೋರಾ ಯೋಜನೆ ವಿಭಾಗ ನಂ. 4ರ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.
ಆದ್ದರಿಂದ ಬೆಣ್ಣೆತೋರಾ ನದಿಯ ಅಕ್ಕಪಕ್ಕದ ಗ್ರಾಮಗಳು ನದಿಯ ಪ್ರವಾಹದಿಂದ ತೊಂದರೆಯುಂಟಾಗಬಹುದಾಗಿದೆ. ಪ್ರಯುಕ್ತ ನದಿಯ ಅಕ್ಕಪಕ್ಕದ ಜನರು, ಸಾರ್ವಜನಿಕರು ನದಿಯಲ್ಲಿ ಇಳಿದು ಈಜುವುದಾಗಲಿ, ಬಟ್ಟೆ ಒಗೆಯುವುದಾಗಲಿ, ದನಕರುಗಳಿಗೆ ನೀರು ಕುಡಿಸುವುದಾಗಲಿ ಹಾಗೂ ಇನ್ನಿತರ ಯಾವುದೇ ಕಾರಣಕ್ಕಾಗಿ ನದಿಯಲ್ಲಿ ಇಳಿಯಬಾರದು. ನದಿಯ ಪಾತ್ರದಲ್ಲಿರುವ ಸಣ್ಣ ನೀರಾವರಿ ಮತ್ತು ಇನ್ನಿತರ ಯಾವುದೇ ಇಲಾಖೆಗಳಿಗೆ ಸಂಬಂಧಪಟ್ಟ ಆಸ್ತಿಗಳಿದ್ದಲ್ಲಿ ಮುಂಜಾಗ್ರತೆಯಾಗಿ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಬೇಕೆಂದು ಅವರು ತಿಳಿಸಿದ್ದಾರೆ.