ಮಡಿಕೇರಿ: ತಲಕಾವೇರಿಯಲ್ಲಿ ಅಕ್ಟೋಬರ್ 17 ರಂದು ಜರುಗಲಿರುವ ಪವಿತ್ರ ಕಾವೇರಿ ತೀರ್ಥೋದ್ಭವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರಾ ಅವರು ಬುಧವಾರ ಭಾಗಮಂಡಲ ಮತ್ತು ತಲಕಾವೇರಿಗೆ ಭೇಟಿ ನೀಡಿ ಸಿದ್ಧತೆ ಸಂಬಂಧ ಪರಿಶೀಲನೆ ನಡೆಸಿದರು.
ಕೋವಿಡ್-19 ಹಿನ್ನೆಲೆಯಲ್ಲಿ ಸರ್ಕಾರದ ಮಾರ್ಗಸೂಚಿ ಪಾಲಿಸಬೇಕಿದ್ದು, ಸಿದ್ಧತೆ ಬಗ್ಗೆ ಭಾಗಮಂಡಲ-ತಲಕಾವೇರಿ ದೇವಾಲಯ ವ್ಯವಸ್ಥಾಪನಾ ಸಮಿತಿ ಮತ್ತು ಅಧಿಕಾರಿಗಳಿಂದ ಮಾಹಿತಿ ಪಡೆದರು.
ಕೋವಿಡ್-19 ಹಿನ್ನೆಲೆ ತಲಕಾವೇರಿ ಜಾತ್ರಾ ಮಹೋತ್ಸವನ್ನು ಸರಳ ಮತ್ತು ಸಾಂಪ್ರದಾಯಿಕವಾಗಿ ಈ ಬಾರಿ ಆಚರಿಸಲಾಗುತ್ತಿದ್ದು, ಸರ್ಕಾರದ ಮಾರ್ಗಸೂಚಿಯನ್ನು ಪ್ರತಿಯೊಬ್ಬರೂ ಪಾಲಿಸಬೇಕಿದೆ ಎಂದರು.
ಪವಿತ್ರ ತೀರ್ಥೋದ್ಭವಕ್ಕೆ ಇನ್ನೂ ಕೆಲವೇ ದಿನಗಳು ಇದ್ದು, ಈ ಹಿನ್ನೆಲೆಯಲ್ಲಿ ಬಾಕಿ ಇರುವ ಕಾರ್ಯಗಳನ್ನು ಪೂರ್ಣಗೊಳಿಸಿ. ತೀರ್ಥೋದ್ಭವ ದಿನದಂದು ಯಾವುದೇ ಗೊಂದಲಗಳಿಗೆ ಅವಕಾಶ ಮಾಡದೆ, ಜನರು ಗುಂಪು ಸೇರದಂತೆ ನಿಗದಿತ ಸ್ಥಳಗಳಲ್ಲಿ ಬ್ಯಾರಿಕೇಡ್ ವ್ಯವಸ್ಥೆ ಮಾಡುವಂತೆ ತಿಳಿಸಿದರು.
ಭಾಗಮಂಡಲ-ತಲಕಾವೇರಿ ದೇವಾಲಯ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಬಿ.ಎಸ್.ತಮ್ಮಯ್ಯ ಅವರು ಪವಿತ್ರ ತೀರ್ಥೋದ್ಭವ ಸಿದ್ಧತೆ ಬಗ್ಗೆ ಹಲವು ಮಾಹಿತಿ ನೀಡಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರಾ, ಜಿ.ಪಂ. ಸಿಇಒ ಭನ್ವರ್ ಸಿಂಗ್ ಮೀನಾ, ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಮೋಹನ್, ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಎಂಜಿನಿಯರ್ ಮದನ್ ಮೋಹನ್, ಡಿವೈಎಸ್ಪಿ ದಿನೇಶ್ ಕುಮಾರ್, ತಹಶೀಲ್ದಾರ್ ಮಹೇಶ್, ತಲಕಾವೇರಿ ಭಾಗಮಂಡಲ ದೇವಾಲಯ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣಪ್ಪ, ಭಾಗಮಂಡಲ ಪಿಡಿಒ, ಉಪ ತಹಶೀಲ್ದಾರರು ಇತರರು ಇದ್ದರು.
ಕೊಡಗು ಜಿಲ್ಲೆಯಾದ್ಯಂತ ಮುಂದುವರಿದ ಮಳೆ
ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ಬುಧವಾರವೂ ಮಳೆ ಮುಂದುವರಿದಿದೆ. ಜಿಲ್ಲಾ ಕೇಂದ್ರ ಮಡಿಕೇರಿ ಸೇರಿದಂತೆ ಬಹುತೇಕ ಪ್ರದೇಶಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಿದ್ದು, ಚಳಿಯ ವಾತಾವರಣವೂ ಮುಂದುವರಿದಿದೆ.
ಬುಧವಾರ ಬೆಳಗ್ಗೆ 8.30 ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳ ಅವಧಿಯಲ್ಲಿ ಮಡಿಕೇರಿ ತಾಲೂಕಿನಲ್ಲಿ 29.50 ಮಿ.ಮೀ.,ವೀರಾಜಪೇಟೆ ತಾಲೂಕಿನಲ್ಲಿ 13.97 ಮಿ.ಮೀ. ಸೋಮವಾರಪೇಟೆ ತಾಲೂಕಿನಲ್ಲಿ 17.20 ಮಿ.ಮೀ ಸೇರಿದಂತೆ ಜಿಲ್ಲೆಯಲ್ಲಿ ಸರಾಸರಿ 20.22 ಮಿ.ಮೀ. ಮಳೆಯಾಗಿದೆ.
ಜಿಲ್ಲೆಯಲ್ಲಿ ಹೋಬಳಿವಾರು ದಾಖಲಾಗಿರುವ ಮಳೆ ವಿವರದನ್ವಯ ಮಡಿಕೇರಿ ಕಸಬಾ 36.80, ನಾಪೋಕ್ಲು 27, ಭಾಗಮಂಡಲ 54.20, ವೀರಾಜಪೇಟೆ ಕಸಬಾ 20.20, ಹುದಿಕೇರಿ 22, ಶ್ರೀಮಂಗಲ 4.60, ಪೊನ್ನಂಪೇಟೆ 20, ಅಮ್ಮತ್ತಿ 4, ಬಾಳೆಲೆ 13, ಸೋಮವಾರಪೇಟೆ ಕಸಬಾ 14.40, ಶನಿವಾರಸಂತೆ 14.40, ಶಾಂತಳ್ಳಿ 38.20, ಕೊಡ್ಲಿಪೇಟೆ 19.60, ಕುಶಾಲನಗರ 2.60, ಸುಂಟಿಕೊಪ್ಪ 14 ಮಿ.ಮೀ.ಮಳೆಯಾದ ಬಗ್ಗೆ ವರದಿಯಾಗಿದೆ.