ಶಾಲಾ ಮಕ್ಕಳಿಗೆ ಗುಡ್ ನ್ಯೂಸ್ ಕೊಟ್ಟ ಸಚಿವರು: ಇನ್ಮುಂದೆ ಎಲ್ಲರಿಗೂ ಸಿಗಲಿದೆ ಮೊಟ್ಟೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ರಾಜ್ಯಾದ್ಯಂತ ಶಾಲಾ ಮಕ್ಕಳಿಗೆ ಮೊಟ್ಟೆ ವಿತರಿಸಲು ಸರ್ಕಾರ ನಿರ್ಧರಿಸಿದೆ ಎಂದು ಶಿಕ್ಷಣ ಸಚಿವ ಬಿ. ಸಿ ನಾಗೇಶ್ ತಿಳಿಸಿದರು.

ವಿಧಾನಸೌಧದಲ್ಲಿ ಮಾತನಾಡಿದ ಅವರು, ಮಕ್ಕಳಿಗೆ ಮೊಟ್ಟೆ ಕೊಡೋದು ಬೇಡ ಎಂಬ ಶಿಫಾರಸಿಗೆ ಭಾರೀ ವಿರೋಧ ವ್ಯಕ್ತವಾದ ಬೆನ್ನಲ್ಲೆ 7 ಜಿಲ್ಲೆಗಳಿಗೆ ಸೀಮಿತವಾದ ಯೋಜನೆಯನ್ನು ಸರ್ಕಾರ ರಾಜ್ಯಾದ್ಯಂತ ವಿಸ್ತರಿಸಿದೆ. 1 ರಿಂದ 8 ನೇ ಕ್ಲಾಸ್ ಮಕ್ಕಳಿಗೆ ಊಟದ ಜತೆ ಮೊಟ್ಟೆ ವಿತರಿಸಲು ನಿರ್ಧರಿಸಲಾಗಿದೆ. ಯಾರು ಮೊಟ್ಟೆ ತಿನ್ನಲು ಇಚ್ಛೆ ಪಡುತ್ತಾರೆ, ಆ ವಿದ್ಯಾರ್ಥಿಗಳಿಗೆ ಮಾತ್ರ ಮೊಟ್ಟೆ ನೀಡಲಾಗುವುದು. ಯಾರಿಗೂ ಬಲವಂತವಾಗಿ ಮೊಟ್ಟೆ ತಿನ್ನಿಸುವ ಹಾಗಿಲ್ಲ ಎಂದು ಸ್ಪಷ್ಟಪಡಿಸಿದರು.

ಮೊಟ್ಟೆ ತಿನ್ನದ ವಿದ್ಯಾರ್ಥಿಗಳಿಗೆ ಪೌಷ್ಠಿಕಯುಕ್ತ ಚಿಕ್ಕಿ ಅಥವಾ ಬಾಳೆ ಹಣ್ಣನ್ನು ವಿತರಿಸಲು ತೀರ್ಮಾನಿಸಲಾಗಿದೆ. ಯಾವುದೇ ಶಿಕ್ಷಕರು ಮಕ್ಕಳಿಗೆ ಮೊಟ್ಟೆ ತಿನ್ನುವಂತೆ ಬಲವಂತ ಮಾಡಬಾರದು ಎಂದು ಸ್ಪಷ್ಟಪಡಿಸಿದರು.

ಕಲ್ಯಾಣ ಕರ್ನಾಟಕ ಭಾಗದ ಮಕ್ಕಳು ಅಪೌಷ್ಠಿಕತೆಯಿಂದ ಬಳಲುತ್ತಿದ್ದಾರೆ ಎಂದು ಆ ಮಕ್ಕಳಿಗೆ ಪೌಷ್ಟಿಕ ಆಹಾರ ಕೊಡಬೇಕೆಂಬ ಉದ್ದೇಶದಿಂದ ರಾಜ್ಯ ಸರ್ಕಾರ ಆ ಮಕ್ಕಳಿಗೆ ಬಿಸಿಯೂಟದ ಜೊತೆಗೆ ವಾರದ 2 ದಿನ ಮೊಟ್ಟೆಯನ್ನು ಕೊಡುತ್ತಿದೆ. ಈ ಮಹತ್ವಾಕಾಂಕ್ಷಿ ಯೋಜನೆಯನ್ನು ರಾಜ್ಯಾದ್ಯಂತ ವಿಸ್ತರಿಸಲು ಈಗ ನಿರ್ಧರಿಸಲಾಗಿದೆ ಎಂದು ಹೇಳಿದರು.

1 ರಿಂದ 8ನೇ ಕ್ಲಾಸ್ ಮಕ್ಕಳಿಗೆ ಊಟದ ಜತೆ ಮೊಟ್ಟೆ ವಿತರಣೆ ಮಾಡಲು ರಾಜ್ಯ ಆರ್ಥಿಕ ಇಲಾಖೆ ಒಪ್ಪಿಗೆ ನೀಡಿದೆ. ಇದಕ್ಕೆ 350 ಕೋಟಿ ನಿಗದಿ ಮಾಡಲಾಗಿದ್ದು, ಉಳಿದಿರುವ ಶೈಕ್ಷಣಿಕ ವರ್ಷದ 6 ತಿಂಗಳಲ್ಲಿ ವಾರಕ್ಕೆ 2 ರಂತೆ 46 ದಿನ ಮೊಟ್ಟೆ ಕೊಡಲು ತೀರ್ಮಾನಿಸಲಾಗಿದೆ. ಇನ್ನು ಮೊಟ್ಟೆ ತಿನ್ನದ ಮಕ್ಕಳಿಗೆ ಬಾಳೆಹಣ್ಣು ಅಥವಾ ಶೇಂಗಾ ಚಿಕ್ಕಿ ನೀಡಲಾಗುವುದು ಎಂದರು.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!