ಶಿವಮೊಗ್ಗ : ಜಿಲ್ಲೆಯನ್ನು ಕಾಡುತ್ತಿರುವ ಮಂಗನ ಕಾಯಿಲೆ ನಿಯಂತ್ರಣಕ್ಕಾಗಿ ವಿಶೇಷ ಸಭೆಯನ್ನು ಕರೆದು ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಶ್ರೀರಾಮುಲು ತಿಳಿಸಿದರು.
ಅವರು ಶನಿವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸಭೆ ನಡೆಸಿ ಜಿಲ್ಲೆಯಲ್ಲಿ ಕರೋನಾ ಹಾಗೂ ಕೆಎಫ್ಡಿ ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳ ಪರಿಶೀಲನೆ ನಡೆಸಿದರು.
ಕೆಎಫ್ಡಿ ಬಗ್ಗೆ ಈಗಾಗಲೇ ಜಿಲ್ಲೆಯ ಶಾಸಕರು ವಿಧಾನಸಭೆಯಲ್ಲಿ ಸಮಗ್ರ ಮಾಹಿತಿ ನೀಡಿದ್ದಾರೆ. ಕೆಎಫ್ಡಿಗೆ ಸೂಕ್ತ ಔಷಧ ಕಂಡು ಹಿಡಿಯುವುದು ಸೇರಿದಂತೆ ಈ ನಿಟ್ಟಿನಲ್ಲಿ ಆಗಬೇಕಾದ ಸಂಶೋಧನೆಗಳು ಇತ್ಯಾದಿಗಳ ಕುರಿತು ಸಮಾಲೋಚನೆ ನಡೆಸಲು ಉನ್ನತ ಮಟ್ಟದ ಸಭೆಯನ್ನು ಕರೆಯಲಾಗುವುದು ಎಂದು ಅವರು ಹೇಳಿದರು.
ಜಿಲ್ಲೆಯಲ್ಲಿ ಪ್ರಸ್ತುತ ವರ್ಷ 168 ಕೆಎಫ್ಡಿ ಪ್ರಕರಣಗಳು ವರದಿಯಾಗಿದ್ದು, ತೀರ್ಥಹಳ್ಳಿಯಲ್ಲಿ 132 ಹಾಗೂ ಸಾಗರದಲ್ಲಿ 36 ಪ್ರಕರಣ ವರದಿಯಾಗಿದೆ. ಪ್ರಸ್ತುತ 12ಮಂದಿ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಳೆದ ನಾಲ್ಕು ತಿಂಗಳಲ್ಲಿ 5ಸಾವಿರ ರಕ್ತ ಪರಿಶೋಧನೆ ನಡೆಸಲಾಗಿದೆ. 2ಮಂಗಳಲ್ಲಿ ಪಾಸಿಟಿವ್ ಕಂಡು ಬಂದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು. ಸಂಸದ ಬಿ.ವೈ.ರಾಘವೇಂದ್ರ, ಶಾಸಕರಾದ ಅರಗ ಜ್ಞಾನೇಂದ್ರ, ಹರತಾಳು ಹಾಲಪ್ಪ, ಆಯನೂರು ಮಂಜುನಾಥ, ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಮತ್ತಿತರರು ಉಪಸ್ಥಿತರಿದ್ದರು.