ದಿಗಂತ ವರದಿ ಬಳ್ಳಾರಿ:
ಜನರಿಗೆ ಶುದ್ದ ಕುಡಿವ ನೀರಿನ ಸಮಸ್ಯೆ ಎದುರಾಗದಂತೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಗ್ರಾಮೀಣ ಕ್ಷೇತ್ರ ವ್ಯಾಪ್ತಿಯ ನಾನಾ ಕಡೆ ಈಗಾಗಲೆ ಶುದ್ದ ಕುಡಿವ ನೀರಿನ ಘಟಕಗಳನ್ನು ನಿರ್ಮಿಸಿದ್ದು, ಬರುವ ದಿನಗಳಲ್ಲಿ ವ್ಯಾಪ್ತಿಯ ಎಲ್ಲ ಕಡೆಗಳಲ್ಲೂ ಈ ಸೌಲಭ್ಯ ಕಲ್ಪಿಸಲಾಗುವುದು ಎಂದು ಗ್ರಾಮೀಣ ಶಾಸಕ ಬಿ.ನಾಗೇಂದ್ರ ಅವರ ಆಪ್ತ ಸಹಾಯಕ ಅನಂತರಾಜು ಅವರು ಹೇಳಿದರು.
ತಾಲೂಕಿನ ಬೇವಿನಹಳ್ಳಿ ಗ್ರಾಮದಲ್ಲಿ ಶುದ್ದ ಕುಡಿವ ನೀರಿನ ಘಟಕ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದರು. ಕ್ಷೇತ್ರ ವ್ಯಾಪ್ತಿಯ ನಾಗರಿಕರಿಗೆ ಬೇಸಿಗೆ ವೇಳೆಯಲ್ಲೂ ನೀರಿನ ಕೊರತೆ ಎದುರಾಗದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ರಸ್ತೆ ಅಭಿವೃದ್ಧಿ ಹಾಗೂ ಗ್ರಾಮೀಣ ರಸ್ತೆ ನಿರ್ಮಾಣ, ಚರಂಡಿ ವ್ಯವಸ್ಥೆ, ಬೀದಿ ದೀಪದ ವ್ಯವಸ್ಥೆ, ಬಹು ನ ಮುಖ್ಯವಾಗಿ ದೇಶಕ್ಕೆ ಅನ್ನ ನೀಡುವ ರೈತರಿಗೆ ಸಮರ್ಪಕ ನೀರಾವರಿ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ನಮ್ಮ ಶಾಸಕ ಬಿ.ನಾಗೇಂದ್ರ ಅವರು ಸುಳ್ಳು ಭರವಸೆ ನಿಡೋಲ್ಲ, ಆಗುವದಿದ್ದರೆ ಮಾತ್ರ ಭರವಸೆ ನೀಡಿ ಅದರಂತೆ ಖಂಡಿತ ನಡೆದುಕೊಳ್ಳುವ ಜಾಯಮಾನ ಅವರದ್ದು, ಈಗಾಗಲೆ ಸಾಕಷ್ಟು ಬಾರಿ ಕ್ಷೇತ್ರದಲ್ಲಿ ಸಂಚರಿಸಿ ಜನರ ಸಮಸ್ಯೆಗಳನ್ನು ಆಲಿಸಿದ್ದಾರೆ. ಕೆಲ ಸಣ್ಣ ಪುಟ್ಟ ಸಮಸ್ಯೆಗಳನ್ನು ಸ್ಥಳದಲ್ಲೇ ಸರಿಪಡಿಸಿ ಇತರರಿಗೆ ಮಾದರಿಯಾಗಿದ್ದಾರೆ ಎಂದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಯುವ ನಾಯಕ ಸಂಗನಕಲ್ ವಿಜಯಕುಮಾರ್ ಸೇರಿದಂತೆ ಗ್ರಾಮದ ವಿವಿಧ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.