ಹೊಸ ದಿಗಂತ ವರದಿ, ಧಾರವಾಡ:
ನಗರದ ಸಿವಿಲ್ ನ್ಯಾಯಾಲಯ ಆವರಣದಲ್ಲಿ ಸ್ಥಾಪಿಸಿದ ಮಕ್ಕಳ ಸ್ನೇಹಿ ನ್ಯಾಯಾಲಯವನ್ನು ಹೈಕೋರ್ಟ್ ನ್ಯಾಯಾಧೀಶ
ಹಾಗೂ ಧಾರವಾಡ ಜಿಲ್ಲಾ ಆಡಳಿತಾತ್ಮಕ ನ್ಯಾಯಾಧೀಶ ಹರೀಶ ಕುಮಾರ ಶನಿವಾರ ಲೋಕಾರ್ಪಣೆಗೊಳಿಸಿದರು.
ರಾಜ್ಯದಲ್ಲಿ ಪೋಕ್ಸೊ ಕಾಯ್ದೆ, ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆಗಳ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಸುಪ್ರೀಂ ಕೋರ್ಟ್ ನಿರ್ದೇಶನದಂತೆ ರಾಜ್ಯ ಮಕ್ಕಳ ರಕ್ಷಣಾ ಆಯೋಗದ ಅನುದಾನದಲ್ಲಿ ಮಕ್ಕಳ ಸ್ನೇಹಿ ನ್ಯಾಯಾಲಯ ಸ್ಥಾಪಿಸಿದೆ.
ರಾಜ್ಯ ಮಕ್ಕಳ ರಕ್ಷಣಾ ಆಯೋಗದ ಅನುದಾನದಡಿ ಮೊದಲ ಹಂತವಾಗಿ ರಾಜ್ಯದ ಹತ್ತು ಜಿಲ್ಲೆಗಳಲ್ಲಿ ಮಕ್ಕಳ ಸ್ನೇಹಿ ನ್ಯಾಯಾಲಯಕ್ಕೆ ಅಗತ್ಯ ಮೂಲ ಸೌಕರ್ಯಗಳನ್ನು ಪೂರೈಸಲಾಗುತ್ತಿದೆ. ಅದರಂತೆ ಧಾರವಾಡದಲ್ಲೂ ನ್ಯಾಯಾಲಯ ಆರಂಭಿಸಿದೆ.
ಈ ನ್ಯಾಯಾಲಯದಲ್ಲಿ ಸಂತ್ರಸ್ಥ ಮಗುವಿಗೆ ಪ್ರತ್ಯೇಕ ಕೊಠಡಿ, ಆರೋಪಿತನಿಗೆ ಬೇರೆ ಕೊಠಡಿ, ಮಕ್ಕಳ ಶೌಚಾಲಯ, ಅಡುಗೆ ಮನೆ, ಅಗತ್ಯವಿದ್ದಲ್ಲಿ ಮಗುವಿನ ಪಾಲಕರಿಗೆ ರಾತ್ರಿ ವೇಳೆ ಉಳಿಯಲು ಕೊಠಡಿ ವ್ಯವಸ್ಥೆಯೂ ಸಹ ಮಾಡಲಾಗಿದೆ.
ಕಟ್ಟಡ ಆವರಣದಲ್ಲಿ ಮಕ್ಕಳಿಕ್ಕೆ ಆಟದ ಮೈದಾನ, ಮಕ್ಕಳ ಪಾಲಕರಿಗೆ ಪ್ರತ್ಯೇಕ ಕೊಠಡಿ, ವಿಡಿಯೋ ಕಾನ್ಪರೆನ್ಸ ಕೊಠಡಿ, ನೀರಿನ ವ್ಯವಸ್ಥೆ, ಮಕ್ಕಳಿಗಾಗಿ ಗ್ರಂಥಾಲಯ, ವರ್ಣಮಾಲೆ ಅಕ್ಷರಗಳ ಚಾರ್ಟ್ಗಳ ವ್ಯವಸ್ಥೆ, ಫ್ರೀಜ್ ಇತ್ಯಾಗಳಿವೆ.
ಅಲ್ಲದೇ, ನ್ಯಾಯಾಧೀಶರ ಕೋರ್ಟ್ ಹಾಲ್, ನ್ಯಾಯಾಧೀಶರಿಗೆ ಪ್ರತ್ಯೇಕ ಕೊಠಡಿ, ನಿರ್ವಹಣೆಗೆ ಸಿಬ್ಬಂದಿ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಕಲ್ಪಿಸಿದೆ. ಹೈಕೋರ್ಟ್ ನ್ಯಾಯಾಧೀಶರು ನ್ಯಾಯಾಲಯ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ನ್ಯಾಯಾಧೀಶರಾದ ಉಮೇಶ ಅಡಿಗ, ಎಂ.ಪoಚಾಕ್ಷರಿ, ಆರ್.ಎಸ್.ಚಿಣ್ಣನ್ನವರ, ಸಂಜಯ ಗುಡಗುಡಿ, ವಕೀಲರ ಸಂಘದ ಅಧ್ಯಕ್ಷ ಬಿ.ಎಸ್.ಗೊಡ್ಸೆ, ರಾಜ್ಯ ವಕೀಲರ ಪರಿಷತ್ ಸದಸ್ಯ ವಿ.ಡಿ.ಕಾಮರಡ್ಡಿ, ಆನಂದ ಮಗದಂ ಇದ್ದರು.