ಹೊಸ ದಿಗಂತ ವರದಿ, ಶಿವಮೊಗ್ಗ :
ಸರ್ಕಾರಿ ಹಾಸ್ಟೆಲ್ ಹಾಗೂ ವಸತಿ ಶಾಲೆಗಳಲ್ಲಿ ಹೊರಗುತ್ತಿಗೆಯಲ್ಲಿ ಕೆಲಸ ಮಾಡುತ್ತಿರುವ ನೌಕರರಿಗೆ ಲಾಕ್ಡೌನ್ ಅವಧಿಯ ಸಂಬಳ ನೀಡುವಂತೆ ಒತ್ತಾಯಿಸಿ ರಾಜ್ಯ ಸರ್ಕಾರಿ ಹಾಸ್ಟೆಲ್ ಮತ್ತು ವಸತಿ ಶಾಲಾ ನೌಕರರ ಸಂಘದ ಜಿಲ್ಲಾ ಘಟಕದಿಂದ ಗುರುವಾರ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಲಾಯಿತು.
ಹಿಂದುಳಿದ ವರ್ಗಗಳ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಗಳ ಅಡಿಯಲ್ಲಿ ನಡೆಯುತ್ತಿರುವ ಹಾಸ್ಟೆಲ್ಗಳಲ್ಲಿ ಕಳೆದ ಹತ್ತಾರು ವರ್ಷಗಳಿಂದ ಹೊರಗುತ್ತಿಗೆಯಲ್ಲಿ ಕೆಲಸ ಮಾಡಲಾಗುತ್ತಿದೆ. ಕೋವಿಡ್ ಸಂದರ್ಭದಲ್ಲಿ ಲಾಕ್ಡೌನ್ ಘೋಷಿಸಿದಾಗ ವೇತನ ನೀಡಿಲ್ಲ. ಇದರಿಂದ ಜೀವನ ನಿರ್ವಹಣೆ ಕಷ್ಟವಾಗಿದ್ದು, ಆ ಸಂದರ್ಭದ ವೇತನ ನೀಡುವಂತೆ ಒತ್ತಾಯಿಸಿದ್ದಾರೆ.
ಖಾಯಂ ನೌಕರರಿಗೆ ಲಾಕ್ ಡೌನ್ ಸಂದರ್ಭದಲ್ಲಿ ಎಲ್ಲಾ ರೀತಿಯ ಸೌಲಭ್ಯಗಳನ್ನು ನೀಡಲಾಗಿದೆ. ಆದರೆ ಹೊರಗುತ್ತಿಗೆ ನೌಕರರಿಗೆ ಮಾತ್ರ ಯಾವುದೇ ಸೌಲಭ್ಯ ಹಾಗೂ ವೇತನ ನೀಡಿಲ್ಲ. ಪಿಎಫ್, ಇಎಸ್ಐ, ಮನೆ ಭತ್ಯೆ ಹೀಗೆ ಯಾವುದೂ ಕೂಡ ಲಭ್ಯವಾಗುತ್ತಿಲ್ಲ. ಹೀಗಾಗಿ ಲಾಕ್ಡೌನ್ ಅವಧಿಯ ವೇತನ ನೀಡುವಂತೆ ಒತ್ತಾಯಿಸಿದ್ದಾರೆ.
2018 ರಲ್ಲಿ ನೇರ ನೇಮಕಾತಿ ಮೂಲಕ ನೌಕರರನ್ನು ನೇಮಕ ಮಾಡಿಕೊಳ್ಳಲಾಗಿತ್ತು. ಆ ಸಂದರ್ಭದಲ್ಲಿ ಸಾವಿರಾರು ಹೊರಗುತ್ತಿಗೆ ನೌಕರರು ಬೀದಿ ಪಾಲಾಗಿದ್ದರು. ಈ ರೀತಿ ಹೊರಗೆ ಬಂದ ನೌಕರರನ್ನು ಹೆಚ್ಚುವರಿ ಎಂದು ಪರಿಗಣಿಸಿ ವೇತನ ನೀಡಲು 17 ಕೋಟಿ ರೂ. ಬಿಡುಗಡೆ ಮಾಡಲಾಗಿತ್ತು. ಆದರೆ ರಾಜ್ಯ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಈ ಹಣ ನೀಡಲು ಇಂದಿಗೂ ಆಸ್ಕ್ತಿ ತೋರುತ್ತಿಲ್ಲ. ಈ ಬಗ್ಗೆ ಗಮನಹರಿಸಿ ಬಿಡುಗಡೆ ಮಾಡಬೇಕೆಂದು ಅಗ್ರಹಿಸಿದ್ದಾರೆ.
ಪ್ರತಿಭಟನೆಯಲ್ಲಿ ಪ್ರಮುಖರಾ ಪ್ರದೀಪ್ ದಳವಾಯಿ, ದೇವರಾಜ್, ಅಕ್ಕಮ್ಮ, ಕಲ್ಪನಾ, ನೀಲಮ್ಮ ಮೊದಲಾದವರು ಇದ್ದರು.