ಹೊಸ ದಿಗಂತ ವರದಿ, ಅಂಕೋಲಾ:
ಮುಂಬರುವ ಲೋಕಸಭಾ ಚುನಾವಣೆ ದೃಷ್ಟಿಯಿಂದ ಆರು ತಿಂಗಳುಗಳ ಮೊದಲೇ ಕ್ಷೇತ್ರದಲ್ಲಿ ಪ್ರಚಾರ ಕಾರ್ಯ ನಡೆಸಲಿದ್ದು , ಕಾರ್ಯಕರ್ತರ ಮತ್ತು ಬೆಂಬಲಿಗರ ಸಲಹೆ ಪಡೆದು ತಿಂಗಳ ಅಂತ್ಯದೊಳಗಡೆ ರಾಜಕೀಯ ನಿರ್ಧಾರ ತೆಗೆದುಕೊಳ್ಳುವುದಾಗಿ ಮಾಜಿ ಸಚಿವ ಆನಂದ ಅಸ್ನೋಟಿಕರ್ ಅವರು ಹೇಳಿದ್ದಾರೆ.
ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಉತ್ತರ ಕನ್ನಡ ಜಿಲ್ಲೆಯ ಸಂಸದ ಸ್ಥಾನಕ್ಕೆ ರಾಷ್ಟ್ರೀಯ ಪಕ್ಷದಿಂದ ಸ್ಪರ್ಧಿಸುವ ಬಯಕೆಯಿದ್ದು , ಕ್ಷೇತ್ರಾದ್ಯಂತ ಪ್ರಚಾರ ಕಾರ್ಯದಲ್ಲಿ ತೊಡಗಿಕೊಳ್ಳಬೇಕಾಗಿದೆ. ಕಳೆದ ಬಾರಿ 30 ದಿನಗಳ ಅತ್ಯಲ್ಪ ಅವಧಿಯಲ್ಲಿ ಲೋಕಸಭೆಗೆ ಸ್ಪರ್ಧಿಸಿ ಸುಮಾರು 3.60 ಲಕ್ಷ ಮತಗಳನ್ನು ಪಡೆದ ಸಮಾಧಾನವಿದೆ ಎಂದ ಅವರು, ಚುನಾವಣೆ ಗೆಲ್ಲಲು ಅಗತ್ಯವಾದ ಎಲ್ಲಾ ಅರ್ಹತೆಗಳು ತಮ್ಮಲ್ಲಿದ್ದು ಮುಂದಿನ ದಿನಗಳಲ್ಲಿ ಹಿಂದುಳಿದ ವರ್ಗದವರಿಗೆ ಸಂಸದರಾಗುವ ಅವಕಾಶ ದೊರಕಬೇಕಿದೆ ಎಂದರು.