ಕುಶಾಲನಗರ: ಕರ್ನಾಟಕದ ಪ್ರಪ್ರಥಮ ಡೈರಿಯಾಗಿ ಸ್ಥಾಪನೆಗೊಂಡ ಕೂಡಿಗೆ ಡೈರಿಯನ್ನು ವಿವಿಧ ಹಂತದಲ್ಲಿ ಅಭಿವೃದ್ಧಿಪಡಿಸುವುದರ ಜೊತೆಗೆ ಕೊಡಗಿನ ಗ್ರಾಹಕರಿಗೆ ಉತ್ತಮ ಗುಣಮಟ್ಟದ ಹಾಲು, ಹಾಲಿನ ಉತ್ಪನ್ನಗಳನ್ನು ಸಕಾಲದಲ್ಲಿ ಒದಗಿಸಲು ಕ್ರಮವಹಿಸಲಾಗುವುದು ಎಂದು ಹಾಸನ ಹಾಲು ಒಕ್ಕೂಟದ ಅಧ್ತಕ್ಷ , ಮಾಜಿ ಸಚಿವ ಹೆಚ್. ಡಿ. ರೇವಣ್ಣ ತಿಳಿಸಿದರು.
ಹಾಸನ ಹಾಲು ಉತ್ಪಾದಕರ ಒಕ್ಕೂಟದ ವಾರ್ಷಿಕ ಮಹಾಸಭೆಯಲ್ಲಿ ಮಾತನಾಡಿದ ಅವರು, ಕೊಡಗು ಜಿಲ್ಲೆಯಲ್ಲಿರುವ ಕೂಡಿಗೆ ಡೈರಿಯ ಅಭಿವೃದ್ಧಿಗೆ ಪೂರಕ ಕ್ರಿಯಾ ಯೋಜನೆ ಸಿದ್ಧವಾಗಿದ್ದು, ಅದರನ್ವಯ ಹಂತ ಹಂತವಾಗಿ ಒಕ್ಕೂಟದ ಮೂಲಕ ಹಣ ಬಿಡುಗಡೆ ಮಾಡಲಾಗುವುದು ಎಂದರು.
ಈಗಿನ ಹಳೆ ಕಟ್ಟಡವನ್ನು ತೆರವುಗೊಳಿಸಿ ಹೊಸ ತಂತ್ರಜ್ಞಾನದ ಯಂತ್ರೋಪಕರಣಗಳನ್ನು ಅಳವಡಿಸುವ ಮೂಲಕ ಹಾಲಿನ ಉತ್ಪನ್ನಗಳು ತಯಾರಿಸಲು ಚಿಂತನೆ ನಡೆಸಲಾಗುತ್ತಿದೆ ಎಂದು ಅವರು ಹೇಳಿದರು.
ಕೊಡಗು ಜಿಲ್ಲೆಯ ಎಲ್ಲಾ ಹೋಬಳಿ ಮತ್ತು ತಾಲೂಕು ಮಟ್ಟದಲ್ಲಿ ಅನೇಕ ನಂದಿನಿ ಹಾಲಿನ ಮಳಿಗೆಗಳನ್ನು ತೆರದು ಅದರ ಮೂಲಕ ಗ್ರಾಹಕರಿಗೆ ಸಮರ್ಪಕವಾಗಿ ನಿಗದಿತ ಸಮಯದಲ್ಲಿ ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ದೊರಕಿಸಲಾಗುವುದು. ಜಿಲ್ಲೆಯ ಹಾಲು ಉತ್ಪಾದಕರ ಸಹಕಾರ ಸಂಘಗಳಿಗೆ ಹಾಲು ನೀಡುವ ರೈತರಿಗೆ ಗೌರಿ ಗಣೇಶ ಹಬ್ಬದ ಅಂಗವಾಗಿ ಲೀಟರ್ ಒಂದಕ್ಕೆ ಒಂದು ರೂ. ಹೆಚ್ಚಳ ಮಾಡಲಾಗಿದ್ದು, ರಾಜ್ಯದಲ್ಲಿ ಪ್ರಥಮ ಸ್ಧಾನದಲ್ಲಿದ್ದೇವೆ. ರಾಜ್ಯದ ಇತರ ಒಕ್ಕೂಟಗಳು ಹಾಲು ಉತ್ಪಾದಕರಿಗೆ ನೀಡುವ ಹಣಕ್ಕಿಂತ ಹೆಚ್ಚು ಹಣವನ್ನು ಹಾಲು ಉತ್ಪಾದಕ ರೈತರಿಗೆ ನೀಡಲಾಗುತ್ತಿದೆ ಎಂದು ಸುದ್ಧಿಗಾರಿಗೆ ತಿಳಿಸಿದರು.
ಈ ಸಂದರ್ಭ ಒಕ್ಕೂಟದ ಜಿಲ್ಲಾ ನಿರ್ದೇಶಕ ಕೆ.ಕೆ. ಹೇಮಂತ್ ಕುಮಾರ್ ಸೇರಿದಂತೆ ಇತರ ನಿರ್ದೇಶಕರು ಹಾಜರಿದ್ದರು.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ