ಹೊಸದಿಗಂತ ಡಿಜಿಟಲ್ ಡೆಸ್ಕ್:
ಹಿಜಾಬ್ ನಿಷೇಧಿಸಿ ಕರ್ನಾಟಕ ಹೈಕೋರ್ಟ್ ನೀಡಿರುವ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯ ವಿಚಾರಣೆ ವಿಳಂಬವಾಗುತ್ತಿರುವ ಕಾರಣ ಈಗಿನ ಪೀಠದ ಬದಲಾಗಿ ಮತ್ತೊಂದು ಪೀಠಕ್ಕೆ ಅರ್ಜಿಯನ್ನು ವರ್ಗಾಯಿಸಲಾಗುವುದು ಎಂದು ಸುಪ್ರೀಂಕೋರ್ಟ್ ತಿಳಿಸಿದೆ.
ಅರ್ಜಿಯನ್ನು ವಿಚಾರಣೆ ನಡೆಸುತ್ತಿರುವ ಪೀಠದ ಜಡ್ಜ್ಗಳಲ್ಲಿ ಒಬ್ಬರು ಅನಾರೋಗ್ಯಕ್ಕೀಡಾಗಿದ್ದಾರೆ. ಹೀಗಾಗಿ ಹೊಸ ಪೀಠವನ್ನು ರಚಿಸಲಾಗುವುದು ಎಂದು ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣ ಮಂಗಳವಾರ ತಿಳಿಸಿದರು.
ಅರ್ಜಿಗಳನ್ನು ಕೈಗೆತ್ತಿಕೊಳ್ಳಲು ದಿನಾಂಕ ನಿಗದಿ ಮಾಡುವ ವಿಷಯವಾಗಿ ನಡೆದ ಚರ್ಚೆಯಲ್ಲಿ ಹಿರಿಯ ವಕೀಲರಾದ ಮೀನಾಕ್ಷಿ ಅರೋರಾ ಅವರು ಹಿಜಾಬ್ ಅರ್ಜಿಯನ್ನು ಪ್ರಸ್ತಾಪಿಸಿದರು. ಈ ವೇಳೆ ಸೂಚಿತ ಕೋರ್ಟ್ ಪೀಠದ ಒಬ್ಬ ಜಡ್ಜ್ ಅನಾರೋಗ್ಯಕ್ಕೀಡಾಗಿದ್ದಾರೆ. ಹೀಗಾಗಿ ಅರ್ಜಿಯನ್ನು ಅದೇ ಪೀಠದಿಂದ ವಿಚಾರಣೆ ನಡೆಸುವುದು ಕಷ್ಟ. ಹೊಸ ಪೀಠಕ್ಕೆ ನೀಡಲು ಯೋಜಿಸಲಾಗುವುದು ಎಂದು ಸಿಜೆಐ ತಿಳಿಸಿದರು.