ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಹುನಿರೀಕ್ಷಿತ ಬೈಯಪ್ಪನಹಳ್ಳಿ-ಕೆಆರ್ ಪುರ ಮೆಟ್ರೋ ವಿಭಾಗದ 2 ಕಿಲೋಮೀಟರ್ ಮಾರ್ಗ ಜುಲೈ 15 ರೊಳಗೆ ಸಂಚಾರಕ್ಕೆ ಮುಕ್ತವಾಗಲಿದೆ.
ಬೆನ್ನಿಗಾನಹಳ್ಳಿ ಬಳಿ ಬೆಂಗಳೂರು-ಸೇಲಂ ರೈಲ್ವೆ ಮಾರ್ಗದ ಮೇಲ್ಭಾಗದಲ್ಲಿ ತೆರೆದ ವೆಬ್ ಗರ್ಡರ್ ಅಳವಡಿಕೆ ಕೆಲಸ ಪೂರ್ಣಗೊಳ್ಳದ ಕಾರಣ ಸದ್ಯ ಬೈಯಪ್ಪನಹಳ್ಳಿ-ಕೆಆರ್ ಪುರ ಮಾರ್ಗ ಸಂಚಾರಕ್ಕೆ ಮುಕ್ತವಾಗಿಲ್ಲ. ಇದೀಗ ಕಾಮಗಾರಿ ತ್ವರಿತವಾಗಿ ಸಾಗುತ್ತಿದ್ದು, ಶೀಘ್ರದಲ್ಲೇ ಪೂರ್ಣಗೊಳ್ಳಲಿದೆ. ಜುಲೈ 15ರ ಒಳಗಾಗಿ ಮಾರ್ಗವು ಸಂಚಾರಕ್ಕೆ ಮುಕ್ತವಾಗಲಿದೆ ಎಂದು ಬಿಎಂಆರ್ಸಿಎಲ್ ತಿಳಿಸಿದೆ.
ಟ್ರಾಕ್ಷನ್, ಸಿಗ್ನಲಿಂಗ್ ಮತ್ತು ಇತರ ಸಂಬಂಧಿತ ಕೆಲಸಗಳನ್ನು ಜೂನ್ 15 ರೊಳಗೆ ಪೂರ್ಣಗೊಳಿಸಲಾಗುವುದು. ಬಳಿಕ ಪ್ರಾಯೋಗಿಕ ಸಂಚಾರ ಆರಂಭಗೊಳ್ಳಳಿದೆ. ದೂರವು ಕಡಿಮೆ ಇರುವುದರಿಂದ ಪ್ರಾಯೋಗಿಕ ಸಂಚಾರ ಪ್ರಕ್ರಿಯೆಯನ್ನು ತ್ವರಿತವಾಗಿ ಪೂರ್ಣಗೊಳಿಸಬಹುದು. ಕೊನೆಯಲ್ಲಿ ಮೆಟ್ರೋ ರೈಲ್ವೆ ಸುರಕ್ಷತಾ ಆಯುಕ್ತರನ್ನು ಪರಿಶೀಲನೆಗೆ ಆಹ್ವಾನಿಸಲಾಗುತ್ತದೆ. ಕೆಆರ್ ಪುರ-ಬೈಯಪ್ಪನಹಳ್ಳಿ ವಿಭಾಗದ ವಾಣಿಜ್ಯ ಕಾರ್ಯಾಚರಣೆಯನ್ನು ಜುಲೈ 15ರೊಳಗೆ ಪ್ರಾರಂಭಿಸಲಾಗುವುದು ಎಂದು ಅವರು ಮಾಹಿತಿ ನೀಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಮಾರ್ಚ್ 25ರಂದು ವೈಟ್ಫೀಲ್ಡ್ ಮತ್ತು ಕೆಆರ್ ಪುರ ನಡುವಣ ನಮ್ಮ ಮೆಟ್ರೋ ನೇರಳೆ ಮಾರ್ಗವನ್ನು ಲೋಕಾರ್ಪಣೆ ಮಾಡಿದ್ದರು. ಆದರೆ ಬೆನ್ನಿಗಾನಹಳ್ಳಿ ತನಕ ಮೆಟ್ರೋ ಸೇವೆ ವಿಸ್ತರಣೆಗೆ ಕಾಮಗಾರಿ ಪೂರ್ಣಗೊಳ್ಳದಿರುವುದು ಅಡ್ಡಿಯಾಗಿತ್ತು.