ಹೊಸದಿಗಂತ ಡಿಜಿಟಲ್ ಡೆಸ್ಕ್:
ದೇಶದಲ್ಲಿ ಯಾವುದೇ ರೀತಿಯ ಬಿಕ್ಕಟ್ಟು ಉಂಟಾದಾಗ ಈ ಇಬ್ಬರು ಅಣ್ಣ-ತಂಗಿ ದೇಶವನ್ನು ತೊರೆದು ವಿದೇಶಕ್ಕೆ ಓಡಿ ಹೋಗುತ್ತಾರೆ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಪ್ರಿಯಾಂಕಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರನ್ನು ಕಾಲೆಳೆದಿದ್ದಾರೆ.
ಹಿಮಾಚಲ ಪ್ರದೇಶದ ಉನಾದಲ್ಲಿ ಸೋಮವಾರ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಯೋಗಿ ಆದಿತ್ಯನಾಥ್,ದೇಶದಲ್ಲಿ ಕೊರೋನಾ ಬಿಕ್ಕಟ್ಟಿನ ಸಂದರ್ಭ ಇವರಿಬ್ಬರೂ ದೇಶವನ್ನು ತೊರೆದು ವಿದೇಶಕ್ಕೆ ಪಲಾಯನ ಮಾಡಿದ್ದರು ಎಂದು ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿಯವರ ವಿರುದ್ಧ ತೀವ್ರವಾದ ವಾಗ್ದಾಳಿ ನಡೆಸಿದರು.
ದೇಶದಲ್ಲಿ ಭಯೋತ್ಪಾದನೆಯ ಮೂಲವನ್ನು ಸೃಷ್ಟಿಸಲು ಕಾಂಗ್ರೆಸ್ 370ನೇ ವಿಧಿಯನ್ನು ಹೇರಿತ್ತು. ಜಮ್ಮು ಮತ್ತು ಕಾಶ್ಮೀರದಲ್ಲಿ ಉದ್ದೇಶಪೂರ್ವಕವಾಗಿ 370 ಅನ್ನು ವಿಧಿಸಲಾಯಿತು. ಇದರಿಂದ ದೇಶ ಭಯೋತ್ಪಾದನೆ ಹೆಚ್ಚಾಯಿತು. ಆದರೆಪ್ರಧಾನಿ ನರೇಂದ್ರ ಮೋದಿ ಅವರು ತಮಗೆ ಅವಕಾಶ ಸಿಕ್ಕ ತಕ್ಷಣ ಜಮ್ಮು ಮತ್ತು ಕಾಶ್ಮೀರದಿಂದ 370ನೇ ವಿಧಿಯನ್ನು ಅನ್ನು ತೆಗೆದುಹಾಕಿದರು ಎಂದು ತಿಳಿಸಿದರು.
ಕಾಂಗ್ರೆಸ್ ತನ್ನ ಸ್ವಾರ್ಥಕ್ಕಾಗಿ 370ನೇ ವಿಧಿಯನ್ನು ತೆಗೆದುಹಾಕಲಿಲ್ಲ. ಕಾಂಗ್ರೆಸ್ ಕೇವಲ ವೋಟ್ ಬ್ಯಾಂಕ್ ರಾಜಕಾರಣ ಮಾಡುತ್ತಿದೆ. ಕಾಂಗ್ರೆಸ್ ದೇಶದ ಆಂತರಿಕ ಭದ್ರತೆಯನ್ನು ಖಚಿತಪಡಿಸಲು ಸಾಧ್ಯವಿಲ್ಲ, ದೇಶವಾಸಿಗಳಿಗೆ ಕಲ್ಯಾಣ ಯೋಜನೆಗಳನ್ನು ಪ್ರಾರಂಭಿಸಲು ಸಾಧ್ಯವಿಲ್ಲ ಎಂದು ಆದಿತ್ಯನಾಥ್ ಹೇಳಿದರು.
ಆದರೆ ಇಂದು ಜಮ್ಮು ಮತ್ತು ಕಾಶ್ಮೀರ ದೇಶದ ಇತರ ರಾಜ್ಯಗಳಂತೆ. ಹಿಮಾಚಲ ಪ್ರದೇಶ ಮತ್ತು ಇತರ ರಾಜ್ಯಗಳ ಜನರು ಜಮ್ಮು ಮತ್ತು ಕಾಶ್ಮೀರಕ್ಕೆ ಹೋಗಿ ಭೂಮಿಯನ್ನು ಖರೀದಿಸಬಹುದು, ಸ್ವಂತ ಮನೆಯನ್ನೂ ನಿರ್ಮಿಸಬಹುದು ಎಂದರು.