ಬಿಜೆಪಿಯ ಯೋಜನೆ ಜನರಿಗೆ ತಲುಪಿಸುವ ಉದ್ದೇಶವೇ ಜನಸಂಕಲ್ಪ ಸಮಾವೇಶ: ಎನ್.ರವಿಕುಮಾರ್

ಹೊಸದಿಗಂತ ವರದಿ,ಕಲಬುರಗಿ:

ಅಕ್ಟೋಬರ್ 19 ರಂದು ಕಲಬುರಗಿ ಗ್ರಾಮೀಣ ಮತಕ್ಷೇತ್ರದ ಮಹಾಗಾಂವ್ ಗ್ರಾಮದಲ್ಲಿ ನಡೆಯಲಿರುವ ಬಿಜೆಪಿಯ ಜನಸಂಕಲ್ಪ ಸಮಾವೇಶಕ್ಕೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹಾಗೂ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ನವರು ಆಗಮಿಸಲಿದ್ದಾರೆ ಎಂದು ರಾಜ್ಯ ಬಿಜೆಪಿ ಪ್ರದಾನ ಕಾರ್ಯದರ್ಶಿ ಎನ್. ರವಿಕುಮಾರ್ ತಿಳಿಸಿದರು.

ನಗರದ ಗ್ರಾಮೀಣ ಶಾಸಕರ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಜನಸಂಕಲ್ಪ ಸಮಾವೇಶಕ್ಕೆ ರಾಜ್ಯದ ವಿವಿಧಡೆ ಜನರಿಂದ ಬಾರಿ ಸ್ಪಂದಿನೆ ದೊರೆತ್ತಿದ್ದು, ಇದೀಗ ಕಲ್ಯಾಣ ಕರ್ನಾಟಕದ ಕಲಬುರಗಿ, ಯಾದಗಿರಿ, ಬೀದರ್ ಜಿಲ್ಲೆಯಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹಾಗೂ ಮಾಜಿ ಸಿಎಂ ಯಡಿಯೂರಪ್ಪ ನವರ ನೇತೃತ್ವದ ತಂಡ ಜನಸಂಕಲ್ಪ ಸಮಾವೇಶದ ಮೂಲಕ ಜನರಿಗೆ ಕೇಂದ್ರ ಹಾಗೂ ರಾಜ್ಯ ಸರಕಾರಗಳ ಅಭಿವೃದ್ಧಿ ಕಾರ್ಯಗಳು, ಯೋಜನೆಗಳ ಬಗ್ಗೆ ತಿಳಿಸಲಾಗುವುದು. ಅಲ್ಲದೇ, ಕಾಂಗ್ರೆಸ್ ನ ಸುಳ್ಳು ಭಾರತ ಜೋಡೋ ಯಾತ್ರೆ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಗುವುದು ಎಂದು ಹೇಳಿದರು.

ಅ.19ರಂದು ಬೆಳಗ್ಗೆ 11.30ಕ್ಕೆ ಯಾದಗಿರಿಯ ಹುಣಸಗಿ ಮತ್ತು ಮಧ್ಯಾಹ್ನ 2.30ಕ್ಕೆ ಕಲಬುರಗಿಯ ಮಹಾಗಾಂವ್ ಗ್ರಾಮದಲ್ಲಿ ಸಮಾವೇಶ ನಡೆಯಲಿವೆ. ಈ ಕಾರ್ಯಕ್ರಮದಲ್ಲಿ ಸಿಎಂ ತಂಡದಲ್ಲಿ ಕೇಂದ್ರ ಸಚಿವ ಭಗವಂತ ಖುಬಾ, ಸಚಿವರಾದ ಗೋವಿಂದ ಕಾರಜೋಳ, ಭೈರತಿ ಬಸವರಾಜ್ ಹಾಗೂ ಜಿಲ್ಲೆಯ ಎಲ್ಲಾ ಶಾಸಕರು, ಲೋಕಸಭಾ ಸದಸ್ಯರು ಹಾಗೂ ಪಕ್ಷದ ಎಲ್ಲಾ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ. ಇದಲ್ಲದೇ, ಅ.23 ರಂದು ಆಳಂದ ಮತ್ತು ಚಿತ್ತಾಪುರ ತಾಲೂಕಿನಲ್ಲಿ ಸಮಾವೇಶ ನಡೆಯಲಿದೆ ಎಂದು ಅವರು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಕಲಬುರಗಿ ಗ್ರಾಮೀಣ ಶಾಸಕ ಬಸವರಾಜ್ ಮತ್ತಿಮಡು, ಬಿಜೆಪಿ ಗ್ರಾಮಾಂತರ ಜಿಲ್ಲಾಧ್ಯಕ್ಷ ಶಿವರಾಜ್ ಪಾಟೀಲ್ ರದ್ದೇವಾಡಗಿ, ಮಂಡಲ ಅಧ್ಯಕ್ಷರಾದ ಸಂಗಮೇಶ್ ವಾಲಿ, ಅಣವೀರ್ ಇಂಗನಶೆಟ್ಟಿ ಹಾಗೂ ಹರ್ಷವರ್ಧನ್ ಗುಗ್ಗಳೆ ಇದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!