ಹೊಸದಿಗಂತ ಡಿಜಿಟಲ್ ಡೆಸ್ಕ್:
ಹಾರ್ದಿಕ್ ಪಟೇಲ್ ಇಂದು ಅಧಿಕೃತವಾಗಿ ಭಾರತೀಯ ಜನತಾ ಪಾರ್ಟಿ ಸೇರ್ಡಪೆಯಾಗಿದ್ದಾರೆ. ಈ ಮೂಲಕ ತಮ್ಮ ರಾಜಕೀಯ ಹೊಸ ಅಧ್ಯಾಯ ಆರಂಭ ಮಾಡಿದ್ದಾರೆ. ಗುಜರಾತ್ನ ಗಾಂಧಿನಗರದಲ್ಲಿ ಆಯೋಜನೆ ಮಾಡಲಾಗಿದ್ದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಬಿಜೆಪಿ ಸೇರಿದ್ದಾರೆ.
ಬಿಜೆಪಿ ಗುಜರಾತ್ ಘಟಕದ ಮುಖ್ಯಸ್ಥ ಸಿ ಆರ್ ಪಾಟೀಲ್, ಮಾಜಿ ಉಪ ಮುಖ್ಯಮಂತ್ರಿ ನಿತಿನ್ ಪಟೇಲ್ ಮತ್ತು ಇತರೆ ನಾಯಕರ ಸಮ್ಮುಖದಲ್ಲಿ ಅವರು ಕೇಸರಿ ಪಕ್ಷಕ್ಕೆ ಸೇರಿದ್ದಾರೆ.
ಮುಂದಿನ ಕೆಲ ತಿಂಗಳಲ್ಲಿ ಗುಜರಾತ್ನಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ಇದರ ಬೆನ್ನಲ್ಲೇ ಕಾಂಗ್ರೆಸ್ ಬಿಟ್ಟಿರುವ ಪಾಟಿದಾರ್ ಸಮುದಾಯದ ಹಾರ್ದಿಕ್ ಪಟೇಲ್, ಬಿಜೆಪಿ ಸೇರ್ಪಡೆ ಪಕ್ಷಕ್ಕೆ ಮತ್ತಷ್ಟು ಬಲ ಬಂದಂತಾಗಿದೆ.
ಪಕ್ಷ ಸೇರ್ಪಡೆ ನಂತರ ಮಾತನಾಡಿರುವ ಹಾರ್ದಿಕ್ ಪಟೇಲ್, ಇಂದಿನಿಂದ ಹೊಸದೊಂದು ಅಧ್ಯಾಯ ಆರಂಭಿಸುತ್ತಿದ್ದೇನೆ. ಪಕ್ಷದಲ್ಲಿ ಸಣ್ಣ ಸೈನಿಕನಾಗಿ ಕೆಲಸ ಮಾಡುತ್ತೇನೆ. ನಾವು ಪ್ರತಿ 10 ದಿನಕ್ಕೊಮ್ಮೆ ಕಾರ್ಯಕ್ರಮ ಮಾಡುತ್ತೇವೆ, ಇದರಲ್ಲಿ ಕಾಂಗ್ರೆಸ್ ಜೊತೆ ಅತೃಪ್ತ ಶಾಸಕರು ಸೇರಿದಂತೆ ಕಾರ್ಯಕರ್ತರನ್ನ ಬಿಜೆಪಿಗೆ ಕರೆತರುವ ಕೆಲಸ ಮಾಡಲಾಗುವುದು ಎಂದಿದ್ದಾರೆ.
ಹಾರ್ದಿಕ್ ಪಟೇಲ್ 2019ರಲ್ಲಿ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಿದ್ದರು. ಗುಜರಾತ್ ವಿಧಾನಸಭೆ ಚುನಾವಣೆ ಗಮನದಲ್ಲಿಟ್ಟುಕೊಂಡು 2020ರ ಜುಲೈನಲ್ಲಿ ಇವರನ್ನ ಕಾಂಗ್ರೆಸ್ ಪಕ್ಷದ ಕಾರ್ಯಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿತ್ತು. ಆದರೆ, ಪಕ್ಷದಲ್ಲಿನ ಒಳಜಗಳ, ಅರಾಜಕತೆಯಿಂದ ಬೇಸತ್ತು 2022ರ ಮೇ 18ರಂದು ಸೋನಿಯಾ ಗಾಂಧಿ ಅವರಿಗೆ ಪತ್ರ ಬರೆದು, ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದರ ಬೆನ್ನಲ್ಲೇ ಇದೀಗ ಬಿಜೆಪಿ ಸೇರಿದ್ದಾರೆ.