August 27, 2026
Thursday, August 27, 2026
spot_img

ಸ್ಕೂಲ್‌ನಲ್ಲಿ ಮೊಟ್ಟೆ ಕೊಟ್ಟಿದ್ದಕ್ಕೆ 70ಕ್ಕೂ ಹೆಚ್ಚು ಮಕ್ಕಳ ಶಾಲೆ ಬದಲಾವಣೆ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಸರ್ಕಾರಿ ಶಾಲೆಯ ಮಕ್ಕಳಲ್ಲಿ ಪೌಷ್ಟಿಕಾಂಶ ಹೆಚ್ಚಿಸುವ ನಿಟ್ಟಿನಲ್ಲಿ ಸರ್ಕಾರ ಮಕ್ಕಳಿಗೆ ಮೊಟ್ಟೆ ನೀಡುತ್ತಿದೆ. ಮೊಟ್ಟೆ ತಿನ್ನದ ಮಕ್ಕಳಿಗೆ ಕಡ್ಲೆ ಮಿಠಾಯಿ ಹಾಗೂ ಬಾಳೆಹಣ್ಣನ್ನು ನೀಡಲಾಗುತ್ತದೆ. ಮಕ್ಕಳ ಬೆಳವಣಿಗೆಗೆ ಬೇಕಾದ ಪ್ರೋಟೀನ್‌ ಇದರಲ್ಲಿದೆ ಎಂದು ಸರ್ಕಾರ ನೀಡುತ್ತಿದೆ. 

ಆದರೆ ಈ ಶಾಲೆಯಲ್ಲಿ ಮೊಟ್ಟೆ ಕೊಟ್ಟಿದ್ದಕ್ಕೆ 70ಕ್ಕೂ ಹೆಚ್ಚು ಮಕ್ಕಳನ್ನು ಬೇರೆ ಶಾಲೆಗೆ ಸೇರಿಸಲಾಗಿದೆ.ಮಂಡ್ಯದ ಆಲಕೆರೆ ಗ್ರಾಮದಲ್ಲಿ ಇದೀಗ ಮೊಟ್ಟೆಯ ತಕರಾರು ಎದ್ದಿದೆ.

ಆಲಕೆರೆ ಗ್ರಾಮದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಇದೆ. ಸರ್ಕಾರ ಸರ್ಕಾರಿ ಶಾಲೆಗಳಿಗೆ ಮೊಟ್ಟೆ ಕೊಡುವ ಕಾರ್ಯಕ್ರಮವನ್ನು ಪ್ರಾರಂಭ ಮಾಡಿದಾಗಿನಿಂದ ಈ ಗ್ರಾಮದ ಜನರು, ಶಾಲೆಯಲ್ಲಿ ಮೊಟ್ಟೆ ಕೊಡುವುದು ಬೇಡ ಎಂದು ಒಕ್ಕೊರಲಿನಿಂದ ತೀರ್ಮಾನ ಮಾಡಿದ್ದರು.

ಶಾಲೆ ಇರುವ 100 ಮೀಟರ್ ಅಂತರದಲ್ಲಿ ವೀರಭದ್ರಸ್ವಾಮಿ‌ ದೇವಸ್ಥಾನವಿದೆ. ಹೀಗಾಗಿ, ದೇವಸ್ಥಾನದ ಸುತ್ತಮುತ್ತ ಮಾಂಸಾಹಾರ ಹಾಗೂ ಮೊಟ್ಟೆಯನ್ನು ಸೇವನೆ ಮಾಡಲ್ಲ. ಶಾಲೆಯಲ್ಲೂ ಮೊಟ್ಟೆಯ ಬದಲಿಗೆ ಇಷ್ಟು ದಿನ ಕಡ್ಲೆ ಮಿಠಾಯಿ ಹಾಗೂ ಬಾಳೆಹಣ್ಣನ್ನು ಕೊಡಲಾಗುತ್ತಿತ್ತು.

ಕಳೆದ 20 ದಿನಗಳ ಹಿಂದೆ ಈ ಶಾಲೆಯಲ್ಲಿ ಓದುವ ಕೆಲ ಮಕ್ಕಳ ಪೋಷಕರು ತಮ್ಮ ಮಕ್ಕಳಿಗೆ ಮೊಟ್ಟೆ ಕೊಡಬೇಕೆಂದು ಪಟ್ಟು ಹಿಡಿದಿದ್ದರು. ಇದಕ್ಕೆ ಗ್ರಾಮಸ್ಥರು ತೀವ್ರ ವಿರೋಧ ವ್ಯಕ್ತಪಡಿಸಿದರು. ಆದರೆ, ಅಧಿಕಾರಿಗಳು ಕಾನೂನಿನ ಪ್ರಕಾರ ಮೊಟ್ಟೆ ಕೊಡಲೇಬೇಕೆಂದು, ಮೊಟ್ಟೆ ತಿನ್ನುವ ಮಕ್ಕಳಿಗೆ ಮೊಟ್ಟೆಯನ್ನು ನೀಡಿದ್ದಾರೆ.

ಅಧಿಕಾರಿಗಳ ಈ ನಿರ್ಧಾರ ಇದೀಗ ಇಲ್ಲಿನ ಗ್ರಾಮಸ್ಥರ ಧಾರ್ಮಿಕ ಭಾವನೆಗೆ ಧಕ್ಕೆ ಉಂಟಾಗಿದೆ. ಹೀಗಾಗಿ, 124 ಮಕ್ಕಳ ಪೈಕಿ 70ಕ್ಕೂ‌ ಅಧಿಕ ಮಕ್ಕಳ ಪೋಷಕರು ತಮ್ಮ ಮಕ್ಕಳನ್ನು ಆಲಕೆರೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ಬಿಡಿಸಿದ್ದಾರೆ. ಇದೀಗ 70ಕ್ಕೂ ಅಧಿಕ ಮಕ್ಕಳನ್ನು ಆಲಕೆರೆಯ ಪಕ್ಕದ ಊರಾದ ಕೀಲಾರ ಗ್ರಾಮದ ಸರ್ಕಾರಿ ಶಾಲೆ‌ ಹಾಗೂ ಇತರ ಶಾಲೆಗಳಿಗೆ ದಾಖಲು ಮಾಡಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !