ಹೊಸ ದಿಗಂತ ವರದಿ, ಕೊಪ್ಪಳ:
ಶ್ರೀ ಹುಲಿಗೆಮ್ಮ ದೇವಸ್ಥಾನಕ್ಕೆ ಬರುವ ಭಕ್ತರಿಗೆ ಅನುಕೂಲವಾಗುವಂತೆ ದೇವಸ್ಥಾನದ ಆವರಣದಲ್ಲಿ ಅಂದಾಜು 10.27 ಕೋಟಿ ರೂ.ವೆಚ್ಚದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಶ್ರೀ ಅಮ್ಮ ನಿಲಯವನ್ನು ಜಿಲ್ಲಾ ಉಸ್ತುವಾರಿ ಸಚಿವ ಆನಂದ ಸಿಂಗ್ ಲೋಕಾರ್ಪಣೆ ಮಾಡಿದರು.
ಜಿಲ್ಲಾಡಳಿತ, ಹಿಂದೂ ಧಾರ್ಮಿಕ ದತ್ತಿ ಇಲಾಖೆ ಮತ್ತು ಶ್ರೀ ಹುಲಿಗೆಮ್ಮ ದೇವಿ ದೇವಸ್ಥಾನ ಶ್ರೀಕ್ಷೇತ್ರ ಹುಲಗಿ ಸಹಯೋಗದಲ್ಲಿ ಸೋಮವಾರ ನಡೆದ ಕಾರ್ಯಕ್ರಮ ದಲ್ಲಿ ಮಾತನಾಡಿದ ಅವರು, ಶ್ರೀ ಹುಲಿಗೆಮ್ಮ ದೇವಿ ದೇವಸ್ಥಾನದಲ್ಲಿ ದೇವಸ್ಥಾನಕ್ಕೆ ಬರುವ ಭಕ್ತರ ಅನುಕೂಲಕ್ಕಾಗಿ 5.54 ಕೋಟಿ ರೂ ವೆಚ್ಚದಲ್ಲಿ ಶ್ರೀ ಅಮ್ಮ ನಿಲಯ ನಲ ಮಹಡಿ ಕಾಮಗಾರಿಯನ್ನು ಲೋಕೋಪಯೋಗಿ ಇಲಾಖೆಯಿಂದ ಕೈಗೊಳ್ಳಲಾಗುತ್ತಿದೆ. ಈ ಕಟ್ಟಡದಲ್ಲಿ ಭಕ್ತಾದಿಗಳು ಉಳಿದುಕೊಳ್ಳಲು ಒಟ್ಟು 15 ಕೊಠಡಿಗಳು ಮತ್ತು ಶುಭಕಾರ್ಯಗಳನ್ನು ಮಾಡಲು ಹಾಲ್ ಮತ್ತು ಅಡುಗೆ ಕೋಣೆ ನಿರ್ಮಿಸಲಾಗಿದೆ ಎಂದರು.
ಶ್ರೀ ಹುಲಿಗೆಮ್ಮ ದೇವಿ ದೇವಸ್ಥಾನದಲ್ಲಿ ದೇವಸ್ಥಾನಕ್ಕೆ ಬರುವ ಭಕ್ತರ ಅನುಕೂಲಕ್ಕಾಗಿ ಶ್ರೀ ಅಮ್ಮ ನಿಲಯ ಮೊದಲನೇ ಮಹಡಿ ಕಾಮಗಾರಿಯನ್ನು ಅಂದಾಜು 4.74 ಕೋಟಿ ರೂ. ವೆಚ್ಚದಲ್ಲಿ ಲೋಕೋಪಯೋಗಿ ಇಲಾಖೆಯಿಂದ ನಡೆಸಲಾಗಿದೆ. ಈ ಕಟ್ಟಡದಲ್ಲಿ ಭಕ್ತಾದಿಗಳಿಗೆ ಉಳಿದುಕೊಳ್ಳಲು ಒಟ್ಟು 30 ಕೊಠಡಿಗಳನ್ನು ನಿರ್ಮಿಸಲಾಗಿದೆ. ಶ್ರೀ ಅಮ್ಮ ನಿಲಯದಲ್ಲಿ ಒಟ್ಟು 45 ಕೊಠಡಿಗಳು ಭಕ್ತರ ವಸತಿಗೆ ಲಭ್ಯವಾಗುತ್ತಿವೆ ಎಂದು ತಿಳಿಸಿದರು.