ಹೊಸದಿಗಂತ ವರದಿ, ಮಡಿಕೇರಿ:
ಕೊಡಗು ಜಿಲ್ಲೆಯ ಬಿಜೆಪಿ ಅಭ್ಯರ್ಥಿಗಳಿಬ್ಬರೂ ಕಳೆದ ಬಾರಿಗಿಂತ ಈ ಬಾರಿ ಶೇ.10ರಷ್ಟು ಹೆಚ್ಚುವರಿ ಮತಗಳನ್ನು ಪಡೆದು ಜಯ ಗಳಿಸಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ನುಡಿದರು.
ಕುಶಾಲನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊಡಗು ಜಿಲ್ಲೆಗೆ ನೀಡಿದ ಕೊಡುಗೆಗಳನ್ನು ಜನ ಮರೆಯಬಾರದು. ಇತರೆ ಪಕ್ಷಗಳನ್ನು ಮರೆತು ಬಿಜೆಪಿಯನ್ನು ಮತ್ತೊಮ್ಮೆ ಬೆಂಬಲಿಸಬೇಕಿದೆ ಎಂದು ಕೋರಿದರು.
ಶಾಸಕ ಅಪ್ಪಚ್ಚುರಂಜನ್ ಮಾತನಾಡಿ, ಕಾಂಗ್ರೆಸ್’ನಲ್ಲಿ ರಾಜೀನಾಮೆ ಪರ್ವ ಆರಂಭಗೊಂಡಿದ್ದು, ಇದು ಆ ಪಕ್ಷದ ಪತನದ ಸಂಕೇತ. ಹಲವು ಮುಖಂಡರು ಶೀಘ್ರದಲ್ಲೇ ಬಿಜೆಪಿ ಸೇರಲಿದ್ದಾರೆ. ಡಿ.ವಿ.ಸದಾನಂದ ಗೌಡ ಅವರಿಗೆ ಅವರದ್ದೇ ಆದ ಬೆಂಬಲಿಗರಿದ್ದು ಇದು ಬಿಜೆಪಿಗೆ ಶಕ್ತಿ ತುಂಬಲಿದೆ ಎಂದರು.
ಈ ಸಂದರ್ಭ ಬಿಜೆಪಿ ಜಿಲ್ಲಾಧ್ಯಕ್ಷ ರಾಬಿನ್ ದೇವಯ್ಯ, ಮಾಜಿ ಎಂಎಲ್ಸಿ ಎಸ್.ಜಿ.ಮೇದಪ್ಪ, ಕುಡಾ ಅಧ್ಯಕ್ಷ ಎಂ.ಎಂ.ಚರಣ್, ಪ್ರಮುಖರಾದ ಮಹೇಶ್ ಜೈನಿ, ಗಣಿಪ್ರಸಾದ್ ಮತ್ತಿತರರು ಇದ್ದರು.