ಹೊಸ ದಿಗಂತ ವರದಿ, ಮಡಿಕೇರಿ:
ಕಾರ್ಮಿಕರ ಆರೋಗ್ಯದ ಹಿತದೃಷ್ಟಿಯಿಂದ ಕೊಡಗು ಜಿಲ್ಲೆಯ ಕುಶಾಲನಗರ ಬಳಿ 100 ಹಾಸಿಗೆಗಳುಳ್ಳ ಸುಸಜ್ಜಿತ ಇಎಸ್ಐ ಆಸ್ಪತ್ರೆ ಆರಂಭಿಸುವಂತೆ ತಾನು ಮಾಡಿರುವ ಮನವಿಗೆ ಆರೋಗ್ಯ ಸಚಿವರಿಂದ ಸಕಾರಾತ್ಮಕ ಸ್ಪಂದನೆ ದೊರಕಿದೆ ಎಂದು ಕೊಡಗು –ಮೈಸೂರು ಕ್ಷೇತ್ರದ ಲೋಕಸಭಾ ಸದಸ್ಯ ಪ್ರತಾಪ್ಸಿಂಹ ತಿಳಿಸಿದ್ದಾರೆ.
ಪ್ರಸ್ತುತ ಕೊಡಗು ಜಿಲ್ಲೆಯಲ್ಲಿ ಯಾವುದೇ ಇಎಸ್ಐ ಆಸ್ಪತ್ರೆಗಳು ಇಲ್ಲ. ಕೊಡಗು ಜಿಲ್ಲೆಯ ಕುಶಾಲನಗರ ಸಮೀಪ ಸರಕಾರದ ವತಿಯಿಂದ 100 ಹಾಸಿಗೆಗಳ ಒಂದು ಸುಸಜ್ಜಿತ ಕಾರ್ಮಿಕ ರಾಜ್ಯ ವಿಮಾ(ಇಎಸ್ಐ) ಆಸ್ಪತ್ರೆಯನ್ನು ಮಂಜೂರು ಮಾಡಿದಲ್ಲಿ ಕಾರ್ಮಿಕರಿಗೆ ಅನುಕೂಲವಾಗುತ್ತದೆ. ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಕೂಡ್ಲೂರು ಗ್ರಾಮದ ಕರ್ನಾಟಕ ಕೈಗಾರಿಕಾ ಪ್ರದೇಶಗಳ ಅಭಿವೃದ್ಧಿ ಮಂಡಳಿಯ(ಕೆಐಎಡಿಬಿ) ವ್ಯಾಪ್ತಿಗೆ ಬರುವ ಸುಮಾರು 120 ಅತಿ ಸಣ್ಣ, ಮಧ್ಯಮ ಮತ್ತು ಬೃಹತ್ ಕೈಗಾರಿಕೆಗಳಲ್ಲಿ ಸುಮಾರು 4,500 ಕಾರ್ಮಿಕರು ಕೆಲಸ ನಿರ್ವಹಿಸುತ್ತಿದ್ದು, ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಖಾನೆಗಳು, ಕೈಗಾರಿಕೆಗಳ ಸ್ಥಾಪನೆಯಾಗುವುದರಿಂದ ದುಡಿಯುವ ಕಾರ್ಮಿಕರ ಸಂಖ್ಯೆಯೂ ಹೆಚ್ಚುತ್ತದೆ. ಅವರ ಆರೋಗ್ಯದ ಹಿತದೃಷ್ಟಿಯಿಂದ ಕಾರ್ಮಿಕ ರಾಜ್ಯ ವಿಮಾ(ಇಎಸ್ಐ) ಆಸ್ಪತ್ರೆಯನ್ನು ತೆರೆಯುವುದು ಅತ್ಯಾವಶ್ಯಕವಾಗಿದೆ ಎಂದು ಸಂಸದ ಪ್ರತಾಪ್ಸಿಂಹ ಅವರು ರಾಜ್ಯ ಕಾರ್ಮಿಕ ಇಲಾಖೆ ಸಚಿವ ಶಿವರಾಮ ಹೆಬ್ಬಾರ್ ಅವರಿಗೆ ಮನವಿ ಸಲ್ಲಿಸಿದರು.
ತಮ್ಮ ಮನವಿಗೆ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಮುಂದಿನ ದಿನಗಳಲ್ಲಿ ಆಸ್ಪತ್ರೆ ಆರಂಭವಾಗುವ ನಿರೀಕ್ಷೆಯಿದೆ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.
ಸಚಿವರಿಗೆ ಮನವಿ ಸಲ್ಲಿಸುವ ಸಂದರ್ಭ ಕೋಲಾರ ಸಂಸದ ಮುನಿಸ್ವಾಮಿ ಅವರೂ ಜೊತೆಗಿದ್ದರು.