ಹೊಸದಿಗಂತ ವರದಿ ಮಡಿಕೇರಿ:
ಕೊಡಗು ಜಿಲ್ಲೆಯ ಮುಖ್ಯ ರಸ್ತೆಗಳ ಅಭಿವೃದ್ಧಿಗೆ ರಾಜ್ಯ ಸರಕಾರ 100 ಕೋಟಿ ರೂ.ಗಳ ವಿಶೇಷ ಪ್ಯಾಕೇಜ್’ನ್ನು ಘೋಷಿಸಿದೆ.
ವಿಧಾನ ಮಂಡಲದಲ್ಲಿ ಶುಕ್ರವಾರ ತಮ್ಮ ಅಧಿಕಾರವಧಿಯ ದ್ವಿತೀಯ ಆಯ-ವ್ಯಯವನ್ನು ಮಂಡಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೊಡಗು ಜಿಲ್ಲೆಯ ಮುಖ್ಯ ರಸ್ತೆಗಳ ಅಭಿವೃದ್ಧಿಗಾಗಿ 100ಕೋಟಿ ರೂ.ಗಳ ವಿಶೇಷ ಪ್ಯಾಕೇಜ್ ನೀಡುವುದಾಗಿ ಘೋಷಿಸಿದರು.
ಅತಿವೃಷ್ಟಿ ಹಾಗೂ ಅಕಾಲಿಕ ಮಳೆಯಿಂದ ಹಾನಿಗೊಳಗಾಗಿರುವ ಕೊಡಗಿನ ರಸ್ತೆಗಳ ಅಭಿವೃದ್ಧಿಗಾಗಿ ಬಜೆಟ್’ನಲ್ಲಿ 150 ಕೋಟಿ ರೂ.ಗಳ ವಿಶೇಷ ಪ್ಯಾಕೇಜ್ ಘೋಷಿಸಿಸುವಂತೆ ಶಾಸಕರಾದ ಕೆ.ಜಿ.ಬೋಪಯ್ಯ, ಎಂ.ಪಿ.ಅಪ್ಪಚ್ಚುರಂಜನ್ ಹಾಗೂ ಸುಜಾ ಕುಶಾಲಪ್ಪ ಅವರುಗಳು ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿದ್ದರು.
ಇದಕ್ಕೆ ಸ್ಪಂದಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಮ್ಮ ಬಜೆಟ್ ಭಾಷಣದಲ್ಲಿ ವಿಶೇಷ ಅನುದಾನ ನೀಡುವುದಾಗಿ ಘೋಷಿಸಿದರು.
ಮುಖ್ಯಮಂತ್ರಿಯವರು ಜಿಲ್ಲೆಯ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಘೋಷಿಸಿರುವುದನ್ನು ಶಾಸಕತ್ರಯರು ಸ್ವಾಗತಿಸಿದ್ದಾರೆ. ಉಳಿದಂತೆ ವನ್ಯಪ್ರಾಣಿ-ಮಾನವ ಸಂಘರ್ಷ ನಿಯಂತ್ರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ ಮುಖ್ಯಮಂತ್ರಿಯವರು ಕಾಡಾನೆಗಳ ಹಾವಳಿ ನಿಯಂತ್ರಿಸಲು ರೈಲ್ವೆ ಕಂಬಿ ಬೇಲಿ, ಸೋಲಾರ್ ಬೇಲಿ, ಆನೆ ಕಂದಕ ನಿರ್ಮಾಣ ಕಾರ್ಯಗಳನ್ನು ಮುಂದುವರೆಸುವುದಾಗಿಯೂ ನುಡಿದರು.