ಹೊಸದಿಗಂತ ಡಿಜಿಟಲ್ ಡೆಸ್ಕ್ :
ಇಂದು ತ್ರಿವಿಧ ದಾಸೋಹಿ ಲಿಂಗೈಕ್ಯ ಶ್ರೀ ಶಿವಕುಮಾರ ಸ್ವಾಮೀಜಿಯವರ 116ನೇ ಜನ್ಮ ದಿನ. ಈ ಹಿನ್ನೆಲೆ ಸಿದ್ಧಗಂಗಾ ಮಠದಲ್ಲಿ ಬೆಳಗ್ಗೆಯಿಂದಲೇ ವಿಶೇಷ ಪೂಜಾ ಕೈಂಕರ್ಯಗಳು ಆರಂಭಗೊಂಡಿದೆ.
ಸಿದ್ದಲಿಂಗಾಶ್ರೀ ಸೇರಿದಂತೆ ವಿವಿಧ ಮಠಾಧೀಶರು ಶಿವಕುಮಾರ ಶ್ರೀಗಳ ಗದ್ದುಗೆಗೆ ರುದ್ರಾಭಿಷೇಕ, ಬಿಲ್ವಾರ್ಚನೆ, ಪುಷ್ಪಾರ್ಚನೆ ಮಾಡಿದ್ದಾರೆ. ಶ್ರೀಗಳ ಗದ್ದುಗೆಗೆ ದೀಪಾಲಂಕಾರ, ಪುಷ್ಪಗಳಿಂದ ಅಲಂಕಾರ ಮಾಡಿದ್ದಾರೆ.
ಶ್ರೀ ಶಿವಕುಮಾರ ಸ್ವಾಮೀಜಿಗಳ 116ನೇ ಜಯಂತ್ಯೋತ್ಸವ ಪ್ರಯುಕ್ತ ಇಂದು ಮಠದಲ್ಲಿ ವಿಶೇಷ ಕಾರ್ಯಕ್ರಮಗಳು ನಡೆಯಲಿದ್ದು ಲಕ್ಷಾಂತರ ಭಕ್ತರು ಪಾಲ್ಗೊಳ್ಳಲಿದ್ದಾರೆ.
ಇಂದು ಬೆಳಿಗ್ಗೆ 11 ಗಂಟೆಗೆ ಗೋಸಲಸಿದ್ದೇಶ್ವರ ವೇದಿಕೆಯಲ್ಲಿ ಅದ್ದೂರಿ ಸಭಾ ಕಾರ್ಯಕ್ರಮ ಜರುಗಲಿದೆ. ನೀತಿ ಸಂಹಿತೆ ಜಾರಿ ಇರುವ ಹಿನ್ನೆಲೆಯಲ್ಲಿ ರಾಜಕಾರಣಿಗಳು, ಜನಪ್ರತಿನಿಧಿಗಳು ಈ ವೇದಿಕೆ ಕಾರ್ಯಕ್ರಮದಲ್ಲಿ ಭಾಗಿಯಾಗುವುದಿಲ್ಲ. ಆದರೆ ರಾಜ್ಯಪಾಲ ಥಾವರ್ ಚಂದ್ ಗೆಲ್ಹೋಟ್, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಪ್ರಭಾಕರ್ ಕೋರೆ ಸೇರಿದಂತೆ ವಿವಿಧ ಗಣ್ಯರು ಈ ಸಮಾರಂಭದಲ್ಲಿ ಉಪಸ್ಥಿತರಿರಲಿದ್ದಾರೆ.
ಸಿದ್ದಗಂಗಾ ಮಠಾಧ್ಯಕ್ಷ ಶ್ರೀ ಸಿದ್ದಲಿಂಗ ಸ್ವಾಮಿಜಿ ಮತ್ತು ಸುತ್ತೂರು ಶ್ರೀಗಳ ಸಾನಿಧ್ಯದಲ್ಲಿ ಧಾರ್ಮಿಕ ಕಾರ್ಯಗಳು ನಡೆಯಲಿವೆ. ಅಲ್ಲದೇ ಶ್ರೀಗಳ 116ನೇ ಜಯಂತ್ಯೋತ್ಸವದ ಪ್ರಯುಕ್ತ ಒಟ್ಟು 116 ಮಕ್ಕಳಿಗೆ ಶಿವಕುಮಾರ ಶ್ರೀಗಳ ಹೆಸರನ್ನು ನಾಮಕರಣ ಮಾಡುವ ಸಲುವಾಗಿ ಈಗಾಗಲೇ ಪೋಷಕರು ಹೆಸರನ್ನ ನೊಂದಾಯಿಸಿಕೊಂಡಿದ್ದು, ಈ ನಾಮಕರಣ ಕಾರ್ಯಕ್ರಮ ಕೂಡ ನಡೆಯಲಿದೆ.
ಇಂದು ಸಂಜೆ ಗಾನೋತ್ಸವ ಕಾರ್ಯಕ್ರಮವನ್ನ ಕೂಡ ಹಮ್ಮಿಕೊಳ್ಳಲಾಗಿದ್ದು, ನಾದಬ್ರಹ್ಮ ಹಂಸಲೇಖ ಮತ್ತು ತಂಡ ಈ ಕಾರ್ಯಕ್ರಮವನ್ನ ನಡೆಸಲಿದೆ.