ಕಮೀಷನ್ ಯೋಜನೆಗಳಿಗೆ ಅನುದಾನ-ಗುತ್ತಿಗೆದಾರರಿಗೆ ದೊರೆಯದ 300 ಕೋಟಿ ಬಾಕಿ: ಚಲುವರಾಯಸ್ವಾಮಿ

ಹೊಸದಿಗಂತ ವರದಿ ಮಂಡ್ಯ:

ಕಮಿಷನ್ ಸಿಗುವ ಯೋಜನೆಗಳಿಗೆ ಅನುದಾನ ಬಿಡುಗಡೆ ಮಾಡಲು ಆಸಕ್ತಿ ತೋರುವ ರಾಜ್ಯ ಸರ್ಕಾರ ಜಿಲ್ಲೆಯ ಲೋಕೋಪಯೋಗಿ ಇಲಾಖೆಯಲ್ಲಿ ಕಾರ್ಯ ನಿರ್ವಹಿಸಿರುವ ಗುತ್ತಿಗೆದಾರರಿಗೆ ಸುಮಾರು 300 ಕೋಟಿ ರೂ. ಬಾಕಿ ಉಳಿಸಿಕೊಂಡಿದೆ ಎಂದು ಕೆಪಿಸಿಸಿ ಉಪಾಧ್ಯಕ್ಷ ಎನ್. ಚಲುವರಾಯಸ್ವಾಮಿ ಕಿಡಿಕಾರಿದರು.
ಸುದ್ಧಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಗುತ್ತಿಗೆದಾರರೇ ಹೇಳಿರುವಂತೆ ಶೇ. 40ರಷ್ಟು ಕಮೀಷನ್ ಕೊಡಬೇಕಿದೆ. ಇಲ್ಲದಿದ್ದರೆ ಗುತ್ತಿಗೆಯೂ ಇಲ್ಲಘಿ. ಬಾಕಿ ಪಾವತಿಯೂ ಇಲ್ಲದಂತಹ ಸ್ಥಿತಿ ನಿರ್ಮಾಣವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬೃಹತ್ ಬೆಂಗಳೂರು ಸೇರಿದಂತೆ ನಗರ ಹಾಗೂ ಪಟ್ಟಣ ಪ್ರದೇಶಗಳ ರಸ್ತೆಗಳು ಗುಂಡಿ ಬಿದ್ದು ಸಾರ್ವಜನಿಕರು ಸಂಚರಿಸಲು ದುಸ್ತರ ಪಡಬೇಕಾದ ಪರಿಸ್ಥಿತಿ ಎದುರಾಗಿದೆ. ಇಂತಹ ಪರಿಸ್ಥಿತಿಯನ್ನು ಈ ಹಿಂದೆ ಎಂದೂ ತಲೆ ದೂರಿರಲಿಲ್ಲ. ಈ ಬಗ್ಗೆಯೂ ಸರ್ಕಾರ ನಿರ್ಲಲ್ಷ್ಯ ಸರಿಯಲ್ಲ ಎಂದರು.

ಕಬ್ಬಿಗೆ ಬೆಂಬಲ ಬೆಲೆ ನಿಗದಿ, ಭತ್ತ ಖರೀದಿ ಕೇಂದ್ರ ತೆರೆಯುವುದು ಸೇರಿದಂತೆ ಕೃಷಿಕರ ಸಮಸ್ಯೆಗಳನ್ನು ಬಗೆ ಹರಿಸುವಲ್ಲಿ ಬಿಜೆಪಿ ಸರ್ಕಾರ ಸಂಪೂರ್ಣವಿಲವಾಗಿದ್ದು, ಸರ್ಕಾರದ ವೈೈಲ್ಯ ಎದ್ದು ಕಾಣುತ್ತಿದೆ. ಸರ್ಕಾರ ಇದೆಯೋ. ಇಲ್ಲವೋ ಅನ್ನುವ ಅನುಮಾನ ಕಾಡುತ್ತಿದೆ ಎಂದು ತಿಳಿಸಿದರು.
ಜಿಲ್ಲೆಯ ರೈತರು ಹಾಗೂ ಜನಪ್ರತಿನಿಧಿಗಳನ್ನು ಸರ್ಕಾರ ವಿಶ್ವಾಸಕ್ಕೆ ಪಡೆಯದೇ ಉದ್ಧಟತನದಿಂದ ವರ್ತಿಸುತ್ತಿದೆ. ಇದಕ್ಕೆ ಜಿಲ್ಲೆಯ ಜನರೇ ಮುಂದಿನ ದಿನಗಳಲ್ಲಿ ತಕ್ಕ ಉತ್ತರ ನೀಡಲಿದ್ದಾರೆ ಎಂದರು.

ಕಳೆದ ನಾಲ್ಕೈದು ದಿನಗಳಿಂದ ರೈತರು ಕಬ್ಬಿಗೆ ಬೆಂಬಲ ಬೆಲೆ ನಿಗದಿ ಮಾಡುವಂತೆ ಆಹೋರಾತ್ರಿ ಧರಣಿ ನಡೆಸುತ್ತಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಹಾಗೂ ಜಿಲ್ಲೆಯವರೇ ಆದ ಸಚಿವ ಕೆ.ಸಿ.ನಾರಾಯಣಗೌಡರು ಸೌಜನ್ಯಕ್ಕಾದರೂ ಭೇಟಿ ಮಾಡಿ ಸಮಸ್ಯೆ ಕೇಳಲು ಮುಂದಾಗದಿರುವುದು ವಿಪರ್ಯಾಸ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಕಬ್ಬಿನ ದರ ಹಾಗೂ ಕಬ್ಬಿನ ಹಣ ಪಾವತಿ ಸಂಬಂಧ ಸರ್ಕಾರ ಸ್ಪಷ್ಟ ನಿರ್ದೇಶನ ನೀಡದೆ, ರೈತ ವಿರೋಧಿ ಧೋರಣೆ ಅನುಸರಿಸುತ್ತಿದೆ. ಕಬ್ಬಿಗೆ ಕನಿಷ್ಠ ಬೆಂಬಲ ಬೆಲೆ ನಿಗದಿ ಮಾಡಲು ಸಾಧ್ಯವಾಗುತ್ತಿಲ್ಲ. ರೈತರನ್ನು ಸಂಪೂರ್ಣವಾಗಿ ಬಿಜೆಪಿ ಸರ್ಕಾರ ಕಡೆಗಣಿಸುತ್ತಿದೆ ಎಂದು ಆರೋಪಿಸಿದರು.

ಬೈಸಿಕಲ್ ವಿತರಿಸಲು ಒತ್ತಾಯ :
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಜಾರಿಗೊಳಿಸಿರುವ ಬೈಸಿಕಲ್ ವಿತರಣೆ ಕಳೆದ ಮೂರು ವರ್ಷಗಳಿಂದ ಅನುಷ್ಠಾನಗೊಂಡಿಲ್ಲ. ಗ್ರಾಮೀಣ ವಿದ್ಯಾರ್ಥಿಗಳು ನಾಲ್ಕೈದು ಕಿ.ಮೀ. ವ್ಯಾಪ್ತಿಯ ಶಾಲೆಗಳಿಗೆ ತೆರಳಲು ಬಿಸಿಲು ಮಳೆ ಎನ್ನದೇ ನಡೆದುಕೊಂಡು ತೆರಳಬೇಕಾದ ಸಂದರ್ಭ ಒದಗಿ ಬಂದಿದೆ. ಸರ್ಕಾರ ಕೂಡಲೇ ಸೈಕಲ್ ವಿತರಿಸಲು ಮುಂದಾಗಬೇಕೆಂದರು.

ಅನುದಾನ ಬಿಡುಗಡೆಗೆ ಆಗ್ರಹ :
ಗೌರವಧನದಲ್ಲಿ ಬದುಕು ಕಟ್ಟಿಕೊಂಡಿರುವ ಬಿಸಿಯೂಟ ನೌಕರರು ರಾಜ್ಯದಲ್ಲಿ ಸುಮಾರು 1.18.586 ಸಿಬ್ಬಂದಿಗಳಿದ್ದು, ಸುಮಾರು ರಾಜ್ಯವ್ಯಾಪಿ 516 ಕೋಟಿ ರೂ. ಹಾಗೂ ಮಂಡ್ಯ ಜಿಲ್ಲೆಯ 43 ಕೋಟಿ ರೂ. ಬಿಡುಗಡೆಗೆ ಸರ್ಕಾರ ತಕ್ಷಣ ಮುಂದಾಗಬೇಕೆಂದು ಆಗ್ರಹಿಸಿದರು.

ಕ್ಯಾನ್ಸರ್ ಆಸ್ಪತ್ರೆಗೆ ಕಾಯಕಲ್ಪ ನೀಡಿ :
ಮಂಡ್ಯ ಜಿಲ್ಲೆ ಸ್ಥಾಪನೆಯಾಗಿ 50 ವರ್ಷಗಳು ಸಂದ ನೆನಪಿಗೆ ಬಾಲಗಂಗಾಧರನಾಥ ಶ್ರೀಗಳ ಒತ್ತಾಸೆಯಿಂದ ಮಂಡ್ಯ ನಗರಕ್ಕೆ ಕ್ಯಾನ್ಸರ್ ಪೇರಿಪೆರಲ್ ಆಸ್ಪತ್ರೆ ಮಂಜೂರಾಗಿ ಕಾರ್ಯ ನಿರ್ವಹಿಸುತ್ತಿತ್ತು. ಆದರೆ, ಪ್ರಸ್ತುತ ಆಸ್ಪತ್ರೆ ಸೇವೆ ರೋಗಿಗಳಿಗೆ ದೊರೆಯದಿರುವುದು ವಿಪರ್ಯಾಸ ಎಂದು ತಿಳಿಸಿದರು.
ಕೂಡಲೇ ಜಿಲ್ಲಾ ಮಂತ್ರಿಗಳು ಜಿಲ್ಲೆಯ ಜನಪ್ರತಿನಿಧಿಗಳು ಕ್ಯಾನ್ಸರ್ ಆಸ್ಪತ್ರೆ ಕಾರ್ಯ ನಿರ್ವಹಣೆಗೆ ಕ್ರಮ ಜರುಗಿಸಬೇಕು. ಮುಂದಿನ ಒಂದು ವಾರದೊಳಗೆ ಆಸ್ಪತ್ರೆ ಸಮುಚ್ಛಯಕ್ಕೆ ವಿಧಾನ ಪರಿಷತ್ ಸದಸ್ಯರಾದ ದಿನೇಶ್‌ಗೂಳಿಗೌಡ ಹಾಗೂ ಮಧು ಮಾದೇಗೌಡ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿ, ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಚರ್ಚಿಸಲಿದ್ದಾರೆ ಎಂದರು.

ಮಾಜಿ ಸಚಿವ ಎಂ.ಎಸ್.ಆತ್ಮಾನಂದ, ಶಾಸಕರಾದ ಮಧು ಜಿ.ಮಾದೇಗೌಡ, ದಿನೇಶ್‌ಗೂಳಿಗೌಡ, ಮಾಜಿ ಶಾಸಕ ರಮೇಶ್ ಬಾಬು ಬಂಡಿಸಿದ್ದೇಗೌಡ, ಜಿಲ್ಲಾಧ್ಯಕ್ಷ ಸಿ.ಡಿ.ಗಂಗಾಧರ್, ಮಹಿಳಾ ಆಧ್ಯಕ್ಷೆ ಅಂಜನಾ ಶ್ರೀಕಾಂತ್, ಯುವ ಘಟಕ ಅಧ್ಯಕ್ಷ ವಿಜಯ್ ಕುಮಾರ್, ನಗರ ಘಟಕ ಅಧ್ಯಕ್ಷ ಹೆಚ್.ಕೆ.ರುದ್ರಪ್ಪ ಹಾಗೂ ಡಿಸಿಸಿ ಬ್ಯಾಂಕ್ ನಿರ್ದೇಶಕ ಹಾಲಹಳ್ಳಿ ಅಶೋಕ್ ಗೋಷ್ಠಿಯಲ್ಲಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!