ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆ ಬೆನ್ನಲ್ಲೇ ಹೈದರಾಬಾದ್ ಮತ್ತು ವಿಜಯವಾಡ ಪ್ರದೇಶಗಳಿಗೆ ಶನಿವಾರ ಭೇಟಿ ನೀಡಿದ ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್ ಸಮಿತಿ ಸದಸ್ಯರು ಹಾಗೂ ಪಕ್ಷದ ಕಾರ್ಯಕರ್ತರನ್ನು ಭೇಟಿ ಮಾಡಿ ತಾವು ಅಖಿಲ ಭಾರತ ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾದರೆ 50 ವರ್ಷಕ್ಕಿಂತ ಕೆಳಗಿನವರಿಗೆ ಶೇ.50 ಸೀಟು ನೀಡುವ ಪ್ರಸ್ತಾವನೆಯನ್ನು ಜಾರಿಗೊಳಿಸುವುದಾಗಿ ಹೇಳಿದ್ದಾರೆ. ಈ ಘೋಷಣೆಯು ಈ ವರ್ಷದ ಆರಂಭದಲ್ಲಿ ಉದಯಪುರ ಘೋಷಣೆಯಲ್ಲಿ ಮಾಡಿದ ಪ್ರಸ್ತಾಪಗಳಲ್ಲಿ ಒಂದಾಗಿದೆ.
“ಹಲವು ಜನರು ಇಡಿ, ಸಿಬಿಐ ಮತ್ತು ಆದಾಯ ತೆರಿಗೆಗೆ ಹೆದರಿ ಹೊರಟುಹೋದರು. ಯುವಕರಿಗೆ, ನಾನು ಹೇಳಿದಂತೆ, ಉದಯಪುರ ಘೋಷಣೆಯಲ್ಲಿ, ನಾವು 50 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ 50% ಸೀಟುಗಳನ್ನು ನೀಡುವುದಾಗಿ ಭರವಸೆ ನೀಡಿದ್ದೇವೆ ಮತ್ತು ನಾನು ಅದನ್ನು ಮಾಡುತ್ತೇನೆ” ಎಂದು ಖರ್ಗೆ ಘೋಷಿಸಿದ್ದಾರೆ.
ಇದೇ ವೇಳೆ ಬಿಜೆಪಿ ಆಡಳಿತದ ಕೇಂದ್ರ ಸರ್ಕಾರದ ವಿರುದ್ಧ ಖರ್ಗೆ ವಾಗ್ದಾಳಿ ನಡೆಸಿದ ಖರ್ಗೆ ಸಾರ್ವಜನಿಕ ವಲಯದ ಉದ್ಯಮಗಳಲ್ಲಿ ಬಂಡವಾಳ ಹಿಂತೆಗೆದುಕೊಳ್ಳುವಿಕೆ, ಹೆಚ್ಚುತ್ತಿರುವ ನಿರುದ್ಯೋಗ, ರೂಪಾಯಿ ಮೌಲ್ಯ ಕುಸಿತ ಮತ್ತು ಅಗತ್ಯ ವಸ್ತುಗಳ ಬೆಲೆಗಳ ಏರಿಕೆಯ ವಿರುದ್ಧ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡರು.