ಹೊಸದಿಗಂತ ವರದಿ, ಮಡಿಕೇರಿ:
ಕೊಳಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ನಗರದ ತ್ಯಾಗರಾಜ ಕಾಲೋನಿ ಕೊಳಚೆ ಪ್ರದೇಶದಲ್ಲಿ ರಸ್ತೆ ಹಾಗೂ ಚರಂಡಿ ನಿರ್ಮಾಣದ ಸುಮಾರು 50 ಲಕ್ಷ ರೂ. ವೆಚ್ಚದ ಕಾಮಗಾರಿಗೆ ಶಾಸಕ ಎಂ.ಪಿ.ಅಪ್ಪಚ್ಚುರಂಜನ್ ಅವರು ಶುಕ್ರವಾರ ಭೂಮಿ ಪೂಜೆ ನೆರವೇರಿಸಿದರು.
ಬಳಿಕ ಮಾತನಾಡಿದ ಶಾಸಕರಾದ ಅವರು, ತ್ಯಾಗರಾಜ ಕಾಲೋನಿಯಲ್ಲಿ ರಸ್ತೆ ಹಾಗೂ ಚರಂಡಿ ನಿರ್ಮಾಣ ಕಾಮಗಾರಿಗೆ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ಡಾಮರ್ ರಸ್ತೆ ಹಾಗೂ ಚರಂಡಿ ಕಾಮಗಾರಿಗೆ 50 ಲಕ್ಷ ರೂ. ಬಿಡುಗಡೆ ಮಾಡಲಾಗಿದೆ ಎಂದರು.
40ಕೋಟಿ ಬಿಡುಗಡೆಗೆ ಸಮ್ಮತಿ:‘ನಗರೋತ್ಥಾನ ಯೋಜನೆಯಡಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಡಿಕೇರಿ ನಗರಕ್ಕೆ 40 ಕೋಟಿ ರೂ. ಬಿಡುಗಡೆಗೆ ಒಪ್ಪಿದ್ದು, ಆ ದಿಸೆಯಲ್ಲಿ ನಗರೋತ್ಥಾನ ಕಾಮಗಾರಿ ಸಂಬಂಧ ಅಗತ್ಯ ಅಂದಾಜು ಪಟ್ಟಿಯ ಪ್ರಸ್ತಾವನೆ ಸಲ್ಲಿಸಬೇಕಿದೆ ಎಂದು ಶಾಸಕರು ತಿಳಿಸಿದರು.’
ಸೋಮವಾರಪೇಟೆಯ ಹಾಕಿ ಟರ್ಫ್ ಕಾಮಗಾರಿ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅಪ್ಪಚ್ಚು ರಂಜನ್ ಅವರು, ಕ್ರೀಡಾ ಸಚಿವನಾಗಿದ್ದ ಸಂದರ್ಭದಲ್ಲಿ 5 ಕೋಟಿ ರೂ. ಬಿಡುಗಡೆ ಮಾಡಿಸಲಾಗಿತ್ತು. ಕಾಮಗಾರಿ ಪ್ರಗತಿಯಲ್ಲಿದ್ದು, ಹೆಚ್ಚುವರಿ ಕಾಮಗಾರಿಗೆ 80 ಲಕ್ಷ ರೂ. ಬೇಕಿದ್ದೆ. ಜಣ ಬಿಡುಗಡೆ ಮಾಡಿಸಲಾಗುವುದು ಹಾಗೂ ಒಂದು ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ತಿಳಿಸಿದರು.
ನಗರಸಭೆ ಅಧ್ಯಕ್ಷೆ ಅನಿತಾ ಪೂವಯ್ಯ, ಉಪಾಧ್ಯಕ್ಷೆ ಸವಿತಾ ರಾಕೇಶ್, ಸದಸ್ಯರಾದ ಕೆ.ಎಸ್.ರಮೇಶ್, ಮಹೇಶ್ ಜೈನಿ, ಚಿತ್ರಾವತಿ, ಮನ್ಸೂರ್ ಅಲಿ, ಎಸ್.ಸಿ.ಸತೀಶ್, ಅಮೀನ್ ಮೊಹಿಸಿನ್, ಕಲಾವತಿ, ಉಮೇಶ್ ಸುಬ್ರಮಣಿ, ಅಪ್ಪಣ್ಣ, ಶ್ವೇತಾ, ಸಬಿತಾ ಮತ್ತಿತರರು ಇದ್ದರು.