ಹೊಸದಿಗಂತ ಶ್ರೀರಂಗಪಟ್ಟಣ:
ಕೆಆರ್ಎಸ್ ಜಲಾಶಯಕ್ಕೆ 55ರಿಂದ 80 ಸಾವಿರ ಕ್ಯೂಸೆಕ್ ನೀರು ಹರಿದು ಬರುತ್ತಿರುವ ಹಿನ್ನೆಲೆಯಲ್ಲಿ ಅಣೆಕಟ್ಟೆ ಹಿತ ದೃಷ್ಠಿಯಿಂದ 55 ಸಾವಿರ ಕ್ಯೂಸೆಕ್ ನೀರನ್ನು ಹೊರ ಬಿಡಲಾಗುತ್ತಿದ್ದು, ಮತ್ತಷ್ಟು ನೀರು ಹೊರಬಿಡುವ ಸಾಧ್ಯತೆ ಇದೆ.
ಈಗಾಗಲೇ ಕಾವೇರಿ ಕೊಳ್ಳದ ಪ್ರದೇಶದಲ್ಲಿ ಹೆಚ್ಚಿನ ಮಳೆಯಾಗಿ ಕೆಆರ್ಎಸ್ ಜಲಾಶಯಕ್ಕೆ ಗುರುವಾರ ಬೆಳಿಗ್ಗೆ 8 ಗಂಟೆಗೆ 33 ಸಾವಿರ ಕ್ಯೂಸೆಕ್ ಒಳ ಹರಿವು ಬರುತ್ತಿತ್ತು. ನಂತರ ಬೆಳಿಗ್ಗೆ 11 ಗಂಟೆ ವೇಳೆಗೆ 45 ಸಾವಿರ ಕ್ಯೂಸೆಕ್ಗೆ ಏರಿಕೆ ಕಂಡು ಬಂದಿತ್ತು, ಅಣೆಕಟ್ಟೆ ಭದ್ರತಾ ದೃಷ್ಟಿಯಿಂದ ಸಂಜೆ 4ರ ಹೊತ್ತಿಗೆ ಅಣೆಕಟ್ಟೆಯಿಂದ 55 ಸಾವಿರ ಕ್ಯೂಸೆಕ್ ನೀರನ್ನು ಹೊರ ಬಿಡಲಾಯಿತು.
ಈಗಾಗಲೆ ಹಾರಂಗಿ ಹಾಗೂ ಹೇಮಾವತಿ ಜಲಾಶಯಗಳು ಭರ್ತಿಯಾಗಿ ಹೆಚ್ಚಿನ ನೀರನ್ನು ಕಾವೇರಿ ನದಿಗೆ ಹರಿಸುತ್ತಿರುವ ಹಿನ್ನೆಲೆ ಕೆಆರ್ಎಸ್ ಜಲಾಶಯಕ್ಕೆ ಸುಮಾರು 80 ಸಾವಿರ ಕ್ಯೂಸೆಕ್ ನೀರು ಹರಿದು ಬರುವ ನಿರೀಕ್ಷಯಲ್ಲಿ ನೀರಾವರಿ ಅಧಿಕಾರಿಗಳು ಮುಂಜಾಗ್ರತ ಕ್ರಮವಾಗಿ ಅಣೆಕಟ್ಟೆ ಸುರಕ್ಷತೆಯಿಂದ ಹೆಚ್ಚಿನ ನೀರನ್ನು ಹೊರ ಬಿಡಲು ಗಂಟೆಗೊಮ್ಮೆ ಜಲಾಶಯದ ಒಳ ಹರಿವಿನ ಪ್ರಮಾಣವನ್ನು ಪರೀಕ್ಷಿಸುವ ಜವಬ್ದಾರಿಯಲ್ಲಿದ್ದಾರೆ.