ಹೊಸದಿಗಂತ ಡಿಜಿಟಲ್ ಡೆಸ್ಕ್:
ತಡರಾತ್ರಿ ಒಡಿಶಾದ ಗಂಜಾಂ ಜಿಲ್ಲೆಯ ಕಳಿಂಗ ಘಾಟ್ ಬಳಿ ಬಸ್ ಪಲ್ಟಿಯಾಗಿ ಆರು ಜನರು ಸಾವನ್ನಪ್ಪಿದ್ದು, ಸುಮಾರು 40 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಪಶ್ಚಿಮ ಬಂಗಾಳದ ಪ್ರವಾಸಿಗರು ದರಿಂಗ್ಬಾಡಿಯಿಂದ ಹಿಂತಿರುಗುತ್ತಿದ್ದ ಸಮಯದಲ್ಲಿ ಬ್ರೇಕ್ ವೈಫಲ್ಯದಿಂದ ಅವಗಢ ಸಂಭವಿಸಿದೆ ಎಂದು ಅಗ್ನಿಶಾಮಕ ಅಧಿಕಾರಿ ತಿಳಿಸಿದ್ದಾರೆ.
ವರದಿಯ ಪ್ರಕಾರ, ಟೂರಿಸ್ಟ್ ಬಸ್ 70 ಕ್ಕೂ ಹೆಚ್ಚು ಪ್ರಯಾಣಿಕರನ್ನು ಹೊತ್ತು ಕಂಧಮಾಲ್ನ ದರಿಂಗ್ಬಾಡಿಯಿಂದ ಭಂಜನಗರದ ಮೂಲಕ ವಿಶಾಖಪಟ್ಟಣಕ್ಕೆ ತೆರಳುತ್ತಿತ್ತು. ಬಸ್ ಚಕ್ರಗಳ ಮೇಲೆ ಸಮತೋಲನ ಕಳೆದುಕೊಂಡು ಕಳಿಂಗ ಘಾಟ್ ಬಳಿ ಪಲ್ಟಿಯಾಗಿದೆ. ಮಾಹಿತಿ ತಿಳಿದ ಭಂಜಾನಗರ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಟಿಕಬಲಿ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದರು.
ಎಲ್ಲಾ ಗಾಯಾಳುಗಳನ್ನು ರಕ್ಷಿಸಲಾಗಿದ್ದು, ತಕ್ಷಣದ ವೈದ್ಯಕೀಯ ಚಿಕಿತ್ಸೆಗಾಗಿ ಭಂಜಾನಗರ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕಿತ್ಸೆ ಪಡೆಯುತ್ತಿರುವ ಸಂದರ್ಭದಲ್ಲಿ ಒಬ್ಬ ವ್ಯಕ್ತಿ ಪ್ರಾಣ ಕಳೆದುಕೊಂಡಿದ್ದಾರೆ. ಎಲ್ಲ ಪ್ರಯಾಣಿಕರು ಪಶ್ಚಿಮ ಬಂಗಾಳದ ಹೌರಾ ಜಿಲ್ಲೆಯ ಉದಯನಾರಾಯಣಪುರ ಉಪವಿಭಾಗದ ಸುಲ್ತಾನ್ಪುರ ಗ್ರಾಮದವರು ಎಂದು ತಿಳಿದು ಬಂದಿದೆ. ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಕೈಗೊಂಡಿದ್ದಾರೆ.