ಹೊಸದಿಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನ ಅತ್ತಿಬೆಲೆಯಲ್ಲಿ ನಡೆದ ಅವಘಡದ ಬೆನ್ನಲ್ಲೇ ಇದೀಗ ತಮಿಳುನಾಡಿನಲ್ಲಿ ಮತ್ತೊಂದು ಅಂತಹುದೇ ದುರಂತವೊಂದು ಸಂಭವಿಸಿದೆ.
ಅರಿಯಲೂರು ಜಿಲ್ಲೆಯ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದ ಪರಿಣಾಮ 8 ಮಂದಿ ಮೃತಪಟ್ಟಿದಾರೆ, ಹಲವರು ಗಾಯಗೊಂಡಿರುವ ಘಟನೆ ಇಂದು ನಡೆದಿದೆ.
ದೀಪಾವಳಿ ಹಬ್ಬದ ಪ್ರಯುಕ್ತ ಪಟಾಕಿ ತಯಾರಿಕೆಯಲ್ಲಿ 35ಕ್ಕೂ ಹೆಚ್ಚು ಮಂದಿ ತೊಡಗಿದ್ದರು. ಈ ವೇಳೆ ಇದ್ದಕ್ಕಿದ್ದಂತೆ ಬೆಂಕಿ ಹೊತ್ತಿಕೊಂಡಿದೆ. ಅದರ ಪರಿಣಾಮ ಪಟಾಕಿಗಳಿಗೆ ಬೆಂಕಿ ವ್ಯಾಪಿಸಿ ಸ್ಫೋಟ ಸಂಭವಿಸಿದೆ. ಸ್ಥಳದಲ್ಲಿದ್ದವರಲ್ಲಿ 8 ಮಂದಿ ಸಾವನ್ನಪ್ಪಿದ್ದು, ಉಳಿದವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವರದಿಯಾಗಿದೆ.
ವಿಷಯ ತಿಳಿಯುತ್ತಿದ್ದಂತೆ ಅಗ್ನಿಶಾಮಕದಳದ ಸಿಬ್ಬಂದಿ ಸ್ಥಳಕ್ಕಾಗಮಿಸಿ, ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆ ಕೈಗೊಂಡಿದ್ದಾರೆ.