ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜಧಾನಿ ಬೆಂಗಳೂರಿನಲ್ಲಿ ಫುಟ್ಪಾತ್ ಒತ್ತುವರಿ ತೆರವುಗೊಳಿಸುವ ಸರ್ಕಾರದ ಕ್ರಮದ ವಿರುದ್ಧ ಬುಧವಾರ ಬೀದಿಬದಿ ವ್ಯಾಪಾರಿಗಳು ತೀವ್ರ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ, ಸಚಿವ ಕೃಷ್ಣಬೈರೇಗೌಡ ಅವರು ಇಂದು ವ್ಯಾಪಾರಿಗಳು ಹಾಗೂ ವಿವಿಧ ಸಂಘಟನೆಗಳ ಪ್ರಮುಖರೊಂದಿಗೆ ಮಹತ್ವದ ಸಂಧಾನ ಸಭೆ ನಡೆಸಿದರು.
ನಾಳೆ ವಾಹನ ಟೋಯಿಂಗ್ ಕುರಿತು ಸಭೆ
ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ಪಾದಚಾರಿ ಮಾರ್ಗಗಳನ್ನು ಅತಿಕ್ರಮಿಸಿ ನಿಲ್ಲಿಸಲಾಗುವ ವಾಹನಗಳ ಟೋಯಿಂಗ್ ಪ್ರಕ್ರಿಯೆಯ ಕುರಿತು ನಾಳೆ ಮತ್ತೊಂದು ಪ್ರಮುಖ ಸಭೆ ನಡೆಸುವುದಾಗಿ ಪ್ರಕಟಿಸಿದರು. ಸುಪ್ರೀಂಕೋರ್ಟ್ ನಿರ್ದೇಶನದಂತೆಯೇ ಈ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದ್ದು, ಇದು ಹೀಗೆಯೇ ಮುಂದುವರಿಯಲಿದೆ ಎಂದು ಸ್ಪಷ್ಟಪಡಿಸಿದರು.
ಬೆಂಗಳೂರಿನ ಬದಲಾವಣೆ ನಮ್ಮ ಗುರಿ
“ಬೆಂಗಳೂರಿನಲ್ಲಿ ಇದುವರೆಗೆ ಕೇವಲ ಶೇ. 10 ರಷ್ಟು ಒತ್ತುವರಿ ಮಾತ್ರ ತೆರವುಗೊಂಡಿದೆ. ಇದರಲ್ಲಿ ನನ್ನ ಯಾವುದೇ ವೈಯಕ್ತಿಕ ಹಿತಾಸಕ್ತಿಯಿಲ್ಲ. ನಮ್ಮ ಉದ್ದೇಶ ವ್ಯಾಪಾರಿಗಳ ವಿರುದ್ಧ ಕ್ರಮ ಕೈಗೊಳ್ಳುವುದಲ್ಲ, ಬದಲಿಗೆ ಬೆಂಗಳೂರಿನಲ್ಲಿ ಧನಾತ್ಮಕ ಬದಲಾವಣೆ ತರುವುದಾಗಿದೆ” ಎಂದು ಸಚಿವರು ವಿವರಿಸಿದರು.
ಪಾದಚಾರಿಗಳ ಜೀವಕ್ಕೆ ರಕ್ಷಣೆ ಮುಖ್ಯ
ಕಳೆದ ಮೂರು ವರ್ಷಗಳಲ್ಲಿ ಬೆಂಗಳೂರಿನ ರಸ್ತೆಗಳಲ್ಲಿ 930 ಪಾದಚಾರಿಗಳು ಅಪಘಾತಗಳಿಂದ ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ನೂರಾರು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂಬ ಆತಂಕಕಾರಿ ಅಂಕಿ-ಅಂಶಗಳನ್ನು ಹಂಚಿಕೊಂಡ ಸಚಿವರು, ಸಾರ್ವಜನಿಕರ ಜೀವ ರಕ್ಷಣೆಗೆ ಒತ್ತುವರಿ ಮುಕ್ತ ಫುಟ್ಪಾತ್ಗಳು ಅನಿವಾರ್ಯ ಎಂದು ಪ್ರತಿಪಾದಿಸಿದರು.



