ಹೊಸದಿಗಂತ ಡಿಜಿಟಲ್ ಡೆಸ್ಕ್:
ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ರಾಜಧಾನಿಯಲ್ಲಿ ಭದ್ರತೆಯನ್ನು ಬಿಗಿಗೊಳಿಸಿರುವ ದೆಹಲಿ ಪೊಲೀಸರು, ಅಪರಾಧ ಚಟುವಟಿಕೆಗಳಿಗೆ ತಡೆ ಹಾಕುವ ಉದ್ದೇಶದಿಂದ ಭಾರೀ ಕಾರ್ಯಾಚರಣೆ ನಡೆಸಿದ್ದಾರೆ. ಆಗ್ನೇಯ ದೆಹಲಿ ಜಿಲ್ಲೆಯಲ್ಲಿ ‘ಆಪರೇಷನ್ ಕವಚ್–12’ ಅಡಿಯಲ್ಲಿ ನಡೆದ ಏಕಕಾಲಿಕ ದಾಳಿಯಲ್ಲಿ 70ಕ್ಕೂ ಹೆಚ್ಚು ಆರೋಪಿಗಳನ್ನು ಬಂಧಿಸಲಾಗಿದೆ.
ಪೊಲೀಸ್ ಮೂಲಗಳ ಪ್ರಕಾರ, ಜನವರಿ 26ರ ಆಚರಣೆಗೂ ಮುನ್ನ ಅನುಮಾನಾಸ್ಪದ ಚಟುವಟಿಕೆಗಳ ಬಗ್ಗೆ ಗುಪ್ತ ಮಾಹಿತಿ ಲಭ್ಯವಾಗಿತ್ತು. ಇದರ ಬೆನ್ನಲ್ಲೇ 78 ವಿಶೇಷ ಪೊಲೀಸ್ ತಂಡಗಳನ್ನು ರಚಿಸಿ, 94 ಸೂಕ್ಷ್ಮ ಸ್ಥಳಗಳಲ್ಲಿ ತ್ವರಿತ ದಾಳಿ ನಡೆಸಲಾಗಿದೆ. ಈ ಕಾರ್ಯಾಚರಣೆ ವೇಳೆ ಹಲವು ವಾಹನಗಳನ್ನು ತಪಾಸಣೆ ಮಾಡಲಾಗಿದ್ದು, ಅಪರಾಧಕ್ಕೆ ಬಳಸುವ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಬಂಧಿತರಿಂದ ಅಕ್ರಮ ಶಸ್ತ್ರಾಸ್ತ್ರಗಳು, ಮಾದಕ ವಸ್ತುಗಳು ಮತ್ತು ನಗದು ಹಣ ಪತ್ತೆಯಾಗಿದ್ದು, ಹಲವರು ಹಿಂದೆಯೂ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದವರು ಎಂದು ಪೊಲೀಸರು ತಿಳಿಸಿದ್ದಾರೆ. ಗಣರಾಜ್ಯೋತ್ಸವಕ್ಕೂ ಮುನ್ನ ಯಾವುದೇ ಗಂಭೀರ ಘಟನೆ ರೂಪುಗೊಳ್ಳುವ ಸಾಧ್ಯತೆ ಇದೆಯೇ ಎಂಬ ಬಗ್ಗೆ ಆರೋಪಿಗಳನ್ನು ತೀವ್ರ ವಿಚಾರಣೆಗೆ ಒಳಪಡಿಸಲಾಗಿದೆ.



