ಹೊಸದಿಗಂತ ಡಿಜಿಟಲ್ ಡೆಸ್ಕ್:
ವೈಎಸ್ ಜಗನ್ ಮೋಹನ್ ರೆಡ್ಡಿ ನೇತೃತ್ವದ YSR ಕಾಂಗ್ರೆಸ್ ಆಡಳಿತದ ಅವಧಿಯಲ್ಲಿ ತಿರುಪತಿ ದೇವಸ್ಥಾನದ ಪರಕಾಮಣಿ (ಹುಂಡಿಯಲ್ಲಿ ಭಕ್ತರು ಹಾಕಿದ್ದ) ರೂ.100 ಕೋಟಿ ಗೂ ಅಧಿಕ ಹಣ ಕಳ್ಳತನವಾಗಿದೆ ಎಂದು ಬಿಜೆಪಿ ಮುಖಂಡರೊಬ್ಬರು ಆರೋಪಿಸಿದ್ದಾರೆ.
ತಿರುಮಲ ತಿರುಪತಿ ದೇವಸ್ತಾನಮ್ಸ್ (ಟಿಟಿಡಿ) ಸದಸ್ಯರೂ ಆಗಿರುವ ಭಾನು ಪ್ರಕಾಶ್ ರೆಡ್ಡಿ, ದೇವಸ್ಥಾನದ ಸಿಬ್ಬಂದಿ ರವಿಕುಮಾರ್ ಕಾಣಿಗೆ ಪೆಟ್ಟಿಗೆಯಿಂದ ಹಣವನ್ನು ಕದ್ದಿದ್ದಾರೆ ಎಂದು ಆರೋಪಿಸಿದ್ದು, ಈ ಸಂಬಂಧ ಸಿಸಿಟಿವಿ ದೃಶ್ಯಾವಳಿಗಳನ್ನು ಬಿಡುಗಡೆ ಮಾಡಿದ್ದಾರೆ.
ಲೂಟಿ ಮಾಡಿದ ಹಣವನ್ನು ಬಳಸಿಕೊಂಡು ರಿಯಲ್ ಎಸ್ಟೇಟ್ನಲ್ಲಿ ಕೋಟ್ಯಂತರ ರೂಪಾಯಿ ಹೂಡಿಕೆ ಮಾಡಲಾಗಿದೆ. ಅಕ್ರಮ ಹಣವನ್ನು ಜಗನ್ ರೆಡ್ಡಿ ಅವರ ಮನೆ, ತಾಡೆಪಲ್ಲಿ ಪ್ಯಾಲೇಸ್ಗೆ ವರ್ಗಾಯಿಸಲಾಗಿದೆ ಎಂದು ಆರೋಪಿಸಲಾಗಿದೆ.
2019 ರಿಂದ 2024 ರವರೆಗೆ ವೈಎಸ್ಆರ್ಸಿಪಿ ಆಡಳಿತದಲ್ಲಿ ಟಿಟಿಡಿಯ ಇತಿಹಾಸದಲ್ಲಿ ಅತ್ಯಧಿಕ ರೂ. 100 ಕೋಟಿ ಲೂಟಿ ಮಾಡಲಾಗಿದೆ ಎಂದು ರೆಡ್ಡಿ ಆರೋಪಿಸಿದ್ದಾರೆ.
ಬಿಜೆಪಿ ನೇತೃತ್ವದ ಎನ್ಡಿಎಗೆ ಸೇರಿರುವ ಟಿಡಿಪಿ ನಾಯಕ ನಾರಾ ಲೋಕೇಶ್ , ತಮ್ಮ ಎಕ್ಸ್ ಖಾತೆಯಲ್ಲಿ ‘ಲೂಟಿ’ ತೋರಿಸುತ್ತಿರುವ ಸಿಸಿಟಿವಿ ದೃಶ್ಯಗಳನ್ನು ಹಂಚಿಕೊಂಡಿದ್ದಾರೆ. ವೈಎಸ್ಆರ್ಸಿಪಿ ಆಡಳಿತದಲ್ಲಿ ಭಕ್ತರು ಕಾಣಿಕೆಯಾಗಿ ಹುಂಡಿಗೆ ಹಾಕಿದ್ದ ಹಣವನ್ನು ಲೂಟಿ ಮಾಡಲಾಗಿದೆ ಎಂದು ರೆಡ್ಡಿ ಹೇಳಿದ್ದಾರೆ.