ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಭಾರತ ವಿರುದ್ಧ ಪಾಕಿಸ್ತಾನ ತಂಡ ಗೆಲ್ಲಬೇಕು ಎಂದರೆ ಪಾಕಿಸ್ತಾನದ ಸೇನಾ ಮುಖ್ಯಸ್ಥರೇ ಬ್ಯಾಟ್ ಹಿಡಿಬೇಕು ಎಂದು ಮಾಜಿ ಪ್ರಧಾನಿ ಇಮ್ರಾನ್ ಖಾನ್ ವ್ಯಂಗ್ಯ ಮಾಡಿದ್ದಾರೆ.
ಏಷ್ಯಾಕಪ್ ಕ್ರಿಕೆಟ್ ಟೂರ್ನಿಯಲ್ಲಿ ಭಾರತದ ವಿರುದ್ಧ ಪಾಕಿಸ್ತಾನ ಮುಗ್ಗರಿಸಿದ್ದು, ಇದು ಪಾಕಿಸ್ತಾನಿ ಅಭಿಮಾನಿಗಳಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ.
ಮಾಜಿ ಕ್ರಿಕೆಟಿಗರು ಸೇರಿದಂತೆ ಪಾಕಿಸ್ತಾನ ರಾಜಕೀಯ ಗಣ್ಯರೂ ಕೂಡ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಮತ್ತು ತಂಡ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಭಾರತದ ವಿರುದ್ಧದ ಹೀನಾಯ ಸೋಲಿಗೆ ಪಾಕಿಸ್ತಾನ ಕ್ರಿಕೆಟ್ ಮಂಡಳಿಯ ಅಧ್ಯಕ್ಷ ಮೊಹ್ಸಿನ್ ನಖ್ವಿ ಅವರನ್ನು ಟೀಕಿಸಿರುವ ಇಮ್ರಾನ್ ಖಾನ್, ಪಾಕಿಸ್ತಾನ ತಂಡ ಭಾರತದ ವಿರುದ್ಧ ಗೆಲ್ಲಬೇಕು ಎಂದರೆ ಪಾಕಿಸ್ತಾನ ಸೇನಾ ಮುಖ್ಯಸ್ಥ ಆಸಿಂ ಮುನೀರ್ ಅವರೇ ಬ್ಯಾಟ್ ಹಿಡಿದು ಭಾರತದ ವಿರುದ್ಧ ಮೈದಾನಕ್ಕಿಳಿಯಬೇಕು ಎಂದು ವ್ಯಂಗ್ಯ ಮಾಡಿದ್ದಾರೆ.
ಪ್ರಸ್ತುತ ದೇಶದ್ರೋಹ ಮತ್ತು ಭ್ರಷ್ಟಾಚಾರ ಪ್ರಕರಣಗಳಲ್ಲಿ ಆರೋಪಿಯಾಗಿ ಪಾಕಿಸ್ತಾನ ಜೈಲಿನಲ್ಲಿರುವ ಇಮ್ರಾನ್ ಖಾನ್, ‘ಭಾರತದ ವಿರುದ್ಧದ ಕ್ರಿಕೆಟ್ ಪಂದ್ಯವನ್ನು ಗೆಲ್ಲಲು ಏಕೈಕ ಮಾರ್ಗವೆಂದರೆ ಸೇನಾ ಮುಖ್ಯಸ್ಥ ಜನರಲ್ ಮುನೀರ್ ಮತ್ತು ಪಾಕಿಸ್ತಾನ ಕ್ರಿಕೆಟ್ ಮಂಡಳಿಯ (ಪಿಸಿಬಿ) ಅಧ್ಯಕ್ಷ ನಖ್ವಿ ಆರಂಭಿಕ ಆಟಗಾರರಾಗಿ ಬ್ಯಾಟಿಂಗ್ ಮಾಡಿದರೆ ಮತ್ತು ಅಂಪೈರ್ಗಳು ಪಾಕಿಸ್ತಾನದ ಮಾಜಿ ಮುಖ್ಯ ನ್ಯಾಯಮೂರ್ತಿ ಖಾಜಿ ಫೈಜ್ ಇಸಾ ಮತ್ತು ಪಾಕಿಸ್ತಾನದ ಮುಖ್ಯ ಚುನಾವಣಾ ಆಯುಕ್ತ ಸಿಕಂದರ್ ಸುಲ್ತಾನ್ ರಾಜಾ ಎಂದು ಇಮ್ರಾನ್ ಸೂಚಿಸಿದ್ದಾರೆ’ ಎಂದು ಹೇಳಿದರು.
ಇಸ್ಲಾಮಾಬಾದ್ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಸರ್ಫರಾಜ್ ಡೋಗರ್ ಮೂರನೇ ಅಂಪೈರ್ ಆಗಿರಬೇಕು ಎಂದು ಅವರು ಹೇಳಿದರು.