ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರೂರಿನಲ್ಲಿ ಸಂಭವಿಸಿದ ಭೀಕರ ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ನಟ, ರಾಜಕಾರಣಿ ವಿಜಯ್ ತಲಾ 20 ಲಕ್ಷ ರೂ. ಪರಿಹಾರ ಘೋಷಿಸಿದ್ದು, ಗಾಯಾಳುಗಳಿಗೆ ತಲಾ 2 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದಾರೆ.
ತಮಿಳುನಾಡು ಕರೂರಿನಲ್ಲಿ ವಿಜಯ್ ದಳಪತಿ ಆಯೋಜಿಸಿದ್ದ ಚುನಾವಣಾ ಪ್ರಚಾರದ ರ್ಯಾಲಿ ವೇಳೆ ಭೀಕರ ಕಾಲ್ತುಳಿತ ಸಂಭವಿಸಿ 39 ಮಂದಿ ಸಾವನ್ನಪ್ಪಿದ್ದು, 48 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಕುರಿತು ವಿಜಯ್ ದಳಪತಿ ಎಕ್ಸ್ನಲ್ಲಿ ಟ್ವೀಟ್ ಮಾಡಿದ್ದು, ಘಟನೆಗೆ ಸಂತಾಪ ಸೂಚಿಸಿದ್ದಾರೆ.
“ನನ್ನ ಹೃದಯದಲ್ಲಿ ನೆಲೆಸಿರುವ ಎಲ್ಲರಿಗೂ ನಮಸ್ಕಾರಗಳು. ಶನಿವಾರ ಕರೂರಿನಲ್ಲಿ ನಡೆದ ದುರಂತದಿಂದ ನನ್ನ ಹೃದಯ ಮತ್ತು ಮನಸ್ಸು ಭಾರವಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡು ದುಃಖಿಸುತ್ತಿರುವ ಕುಟುಂಬಗಳಿಗೆ ನನ್ನ ಸಂತಾಪವನ್ನು ಸೂಚಿಸುತ್ತಾ, ಈ ದುಃಖವನ್ನು ನಿಮ್ಮೊಂದಿಗೆ ಹಂಚಿಕೊಳ್ಳುತ್ತೇನೆ. ಇದು ನಿಜಕ್ಕೂ ನಮಗೆ ತುಂಬಲಾರದ ನಷ್ಟ. ಘಟನೆಯಿಂದ ನನ್ನ ಹೃದಯ ಅನುಭವಿಸುತ್ತಿರುವ ನೋವನ್ನು ವ್ಯಕ್ತಪಡಿಸಲು ಪದಗಳೇ ಸಿಗುತ್ತಿಲ್ಲ. ಯಾರೇ ಸಾಂತ್ವನದ ಮಾತುಗಳನ್ನು ಹೇಳಿದರೂ, ಪ್ರೀತಿಪಾತ್ರರನ್ನು ಕಳೆದುಕೊಂಡ ನೋವನ್ನು ಭರಿಸಲು ಸಾಧ್ಯವಿಲ್ಲ. ಆದರೂ, ನಿಮ್ಮ ಕುಟುಂಬದ ಸದಸ್ಯನಾಗಿ, ಪ್ರೀತಿಪಾತ್ರರನ್ನು ಕಳೆದುಕೊಂಡ ಪ್ರತಿ ಕುಟುಂಬಕ್ಕೆ 20 ಲಕ್ಷ ರೂ. ಮತ್ತು ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವವರಿಗೆ 2 ಲಕ್ಷ ರೂ. ನೀಡಲು ನಾನು ಉದ್ದೇಶಿಸಿದ್ದೇನೆ. ಪ್ರೀತಿಪಾತ್ರರನ್ನು ಕಳೆದುಕೊಂಡಿರುವ ಸಂದರ್ಭದಲ್ಲಿ ಈ ಮೊತ್ತವು ಗಮನಾರ್ಹವಾಗಿಲ್ಲ. ಆದರೂ, ಈ ಕ್ಷಣದಲ್ಲಿ, ನಿಮ್ಮ ಕುಟುಂಬಕ್ಕೆ ಸೇರಿದವನಾಗಿ, ನಿಮ್ಮೊಂದಿಗೆ ನಿಲ್ಲುವುದು ನನ್ನ ಕರ್ತವ್ಯ.” ಎಂದು ಭಾವುಕ ಪೋಸ್ಟ್ ಮಾಡಿದ್ದಾರೆ.