July 21, 2026
Tuesday, July 21, 2026
spot_img

ಕರ್ನೂಲ್ ಬಸ್ ದುರಂತ: ಮೃತರ ಕುಟುಂಬಕ್ಕೆ 5 ಲಕ್ಷ, ಗಾಯಾಳುಗಳಿಗೆ 2 ಲಕ್ಷ ಪರಿಹಾರ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಬಸ್ ಬೆಂಕಿ ದುರಂತದಲ್ಲಿ ಇಬ್ಬರು ಮಕ್ಕಳು ಮತ್ತು ಬೈಕ್ ಸವಾರ ಸೇರಿದಂತೆ ಒಟ್ಟು 20 ಪ್ರಯಾಣಿಕರು ಸಾವನ್ನಪ್ಪಿದ್ದು, 12 ಜನರು ಗಾಯಗೊಂಡಿದ್ದಾರೆ. ಹೈದರಾಬಾದ್‌ನಿಂದ ಬೆಂಗಳೂರಿಗೆ ಸಾಗುತ್ತಿದ್ದ ಖಾಸಗಿ ಟ್ರಾವೆಲ್ಸ್ ಬಸ್ ಇಂದು ಮುಂಜಾನೆ ಈ ದುರಂತಕ್ಕೆ ತುತ್ತಾಗಿದೆ.

ದುರಂತದ ವಿವರ:

ಕರ್ನೂಲ್‌ನ ಚಿನ್ನಟೇಕುರು ಗ್ರಾಮದ ಬಳಿ ಮುಂಜಾನೆ ಸುಮಾರು 40 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಖಾಸಗಿ ಬಸ್ ರಸ್ತೆಯಲ್ಲಿ ಸಾಗುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಬಸ್‌ನ ಕೆಳಗೆ ಸಿಲುಕಿಕೊಂಡು ಡೀಸೆಲ್ ಟ್ಯಾಂಕ್‌ಗೆ ಅಪ್ಪಳಿಸಿದೆ. ಇದರ ಪರಿಣಾಮವಾಗಿ ತಕ್ಷಣವೇ ಬಸ್‌ನ ಮುಂಭಾಗದಲ್ಲಿ ಬೆಂಕಿ ಕಾಣಿಸಿಕೊಂಡು ಕ್ಷಣಾರ್ಧದಲ್ಲಿ ಸಂಪೂರ್ಣ ಬಸ್‌ಗೆ ವ್ಯಾಪಿಸಿತು.

ಗ್ರಾನೈಟ್ ದಿನಗೂಲಿ ಕಾರ್ಮಿಕ ಮತ್ತು ತಂಡರಪಡು ಗ್ರಾಮದ ನಿವಾಸಿ ಶಿವಶಂಕರ್ (21) ಎಂದು ಗುರುತಿಸಲಾದ ಬೈಕ್ ಸವಾರ ಕೂಡ ಈ ಘಟನೆಯಲ್ಲಿ ಸಾವನ್ನಪ್ಪಿದ್ದಾರೆ. ಬೆಂಕಿಯ ಜ್ವಾಲೆಗೆ ಸಿಲುಕಿ ಒಟ್ಟು 19 ಪ್ರಯಾಣಿಕರು ಮತ್ತು ಬೈಕ್ ಸವಾರ ಸೇರಿದಂತೆ 20 ಜನರು ಜೀವಂತ ದಹನವಾಗಿದ್ದಾರೆ.

ಪರಿಹಾರ ಘೋಷಣೆ:

ಈ ಭೀಕರ ದುರಂತದ ಕುರಿತು ಪ್ರತಿಕ್ರಿಯಿಸಿದ ಆಂಧ್ರಪ್ರದೇಶ ಸಾರಿಗೆ ಸಚಿವ ರಾಮ್ ಪ್ರಸಾದ್ ರೆಡ್ಡಿ ಅವರು ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ ಮತ್ತು ಪರಿಹಾರವನ್ನು ಘೋಷಿಸಿದ್ದಾರೆ.

ಮೃತರ ಕುಟುಂಬಗಳಿಗೆ: ತಲಾ ₹ 5 ಲಕ್ಷ ರೂಪಾಯಿ.

ಗಾಯಾಳುಗಳಿಗೆ: ತಲಾ ₹ 2 ಲಕ್ಷ ರೂಪಾಯಿ.

ಘಟನಾ ಸ್ಥಳಕ್ಕೆ ಭೇಟಿ ನೀಡಿದ ಸಚಿವರು, ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ ಮತ್ತು ಈ ದುರಂತಕ್ಕೆ ಕಾರಣವಾದ ಅಂಶಗಳ ಕುರಿತು ತನಿಖೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !