ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ದ್ವೇಷ ಭಾಷಣಗೈದಿದ್ದಾರೆ ಎಂಬ ದೂರಿನ ಮೇರೆಗೆ ಹಿಂದು ಮುಖಂಡ ಕಲ್ಲಡ್ಕ ಡಾ. ಪ್ರಭಾಕರ ಭಟ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಅ.20 ರಂದು ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಳಿಗೆಯಲ್ಲಿ ನಡೆದ ದೀಪೋತ್ಸವ ಕಾರ್ಯಕ್ರಮದಲ್ಲಿ ಡಾ. ಭಟ್ ಮಾಡಿದ ಭಾಷಣ ಧಾರ್ಮಿಕ ದ್ವೇಷ ಪ್ರಚೋದಿಸುವ, ಮಹಿಳೆಯರ ಘನತೆಗೆ ಧಕ್ಕೆ ಉಂಟುಮಾಡುವ ಹಾಗೂ ಸಾರ್ವಜನಿಕ ಶಾಂತಿಗೆ ಅಪಾಯ ಉಂಟುಮಾಡುವಂತಿದೆ. ಅವರ ಈ ಭಾಷಣ ಯೂಟ್ಯೂಬ್ ಚಾನೆಲ್ವೊಂದರಲ್ಲಿ ಕೂಡಾ ಪ್ರಸಾರವಾಗಿದೆ ಎಂದು ಆರೋಪಿಸಿ ಪುತ್ತೂರು ತಾಲೂಕು ಈಶ್ವರಿ ಪದ್ಮುಂಜ ಎಂಬವರು ದೂರು ನೀಡಿದ್ದಾರೆ.
ಇದೀಗ ಈ ದೂರಿನಂತೆ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಅಪರಾಧ ಕ್ರಮಾಂಕ 118/2025, ಭಾರತೀಯ ನ್ಯಾಯ ಸಂಹಿತೆ (BNS) 79, 196, 299, 302 ಹಾಗೂ 3(5) ಕಲಂಗಳ ಅಡಿಯಲ್ಲಿ ಡಾ. ಪ್ರಭಾಕರ ಭಟ್ ಮತ್ತು ಕಾರ್ಯಕ್ರಮ ಆಯೋಜಕರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

