ದಿಗಂತ ವರದಿ ಅಂಕೋಲಾ:
ಕಾಂಗ್ರೆಸ್ ಪಕ್ಷದ ಸಂಸದ ಡಿ.ಕೆ.ಸುರೇಶ ಅವರು ರಾಮನಗರದಲ್ಲಿ ನಡೆದ ಅಭಿವೃದ್ಧಿ ಕಾಮಗಾರಿ ಹಾಗೂ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್, ನಾಡಪ್ರಭು ಕೆಂಪೇಗೌಡ ಅವರ ಪ್ರತಿಮೆಗಳ ಅನಾವರಣಕ್ಕೆ ಸಂಬಂಧಿಸಿದಂತೆ ನಡೆದ ಸರ್ಕಾರಿ ಕಾರ್ಯಕ್ರಮದಲ್ಲಿ ಗೂಂಡಾ ವರ್ತನೆ ತೋರಿದ್ದು ಅವರ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಅಂಕೋಲಾದಲ್ಲಿ ಭಾರತೀಯ ಜನತಾ ಪಕ್ಷದ ವತಿಯಿಂದ ಪ್ರತಿಭಟನೆ ನಡೆಸಿ ತಹಶೀಲ್ಧಾರರ ಮೂಲಕ ರಾಜ್ಯದ ಪೊಲೀಸ್ ಮಹಾ ನಿರ್ದೇಶಕರಿಗೆ ಮನವಿ ಸಲ್ಲಿಸಲಾಯಿತು.
ತಹಶೀಲ್ಧಾರ ಕಚೇರಿಯ ಎದುರಿನ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಬಿಜೆಪಿ ಕಾರ್ಯಕರ್ತರು ಡಿ.ಕೆ.ಸುರೇಶ ಅವರ ವಿರುದ್ಧ ಘೋಷಣೆಗಳನ್ನು ಕೂಗಿ ಅವರ ಭಾವಚಿತ್ರವನ್ನು ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಅಧ್ಯಕ್ಷ ಸಂಜಯ ನಾಯ್ಕ ಮಾತನಾಡಿ ಕಾಂಗ್ರೆಸ್ ಪಕ್ಷದ ದುರಹಂಕಾರ, ಅಟ್ಟಹಾಸಕ್ಕೆ ಒಂದು ಉತ್ತಮ ಕಾರ್ಯಕ್ರಮದ ವೇದಿಕೆ ಸಾಕ್ಷಿಯಾಗಿದ್ದು ವಿಷಾದನೀಯ ರಾಜ್ಯದ ಮುಖ್ಯಮಂತ್ರಿಗಳ ಎದುರಿನಲ್ಲೇ ಜಿಲ್ಲೆಯ ಉಸ್ತುವಾರಿ ಸಚಿವರು ಮಾತನಾಡುತ್ತಿದ್ದ ಮೈಕ್ ಕಿತ್ತೆಸೆದು ಅವರ ಮೇಲೆ ಹಲ್ಲೆಗೆ ಮುಂದಾಗಿರುವ ಕ್ರಮವನ್ನು ಬಿಜೆಪಿ ಖಂಡಿಸುತ್ತಿದ್ದು ಗೂಂಡಾಗಿರಿ ನಡೆಸಿದವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದರು.
ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಛಾ ರಾಜ್ಯ ಕಾರ್ಯಕಾರಿಣಿ ಸದಸ್ಯ ರಾಜೇಂದ್ರ ನಾಯ್ಕ ಮಾತನಾಡಿ ಸಂಸದ ಡಿ.ಕೆ.ಸುರೇಶ ಅವರ ವರ್ತನೆ ಕಾಂಗ್ರೆಸ್ ಸಂಸ್ಕೃತಿಯನ್ನು ತೋರಿಸುತ್ತಿದ್ದು ಒಬ್ಬ ಸಂಸದರಾಗಿ ಸಮಾಜದಲ್ಲಿ ಯಾವ ರೀತಿಯಲ್ಲಿ ನಡೆದುಕೊಳ್ಳಬೇಕು ಎಂಬ ಕನಿಷ್ಠ ಜ್ಞಾನ ಇರದಿರುವುದು ದುರದೃಷ್ಟಕರ ಎಂದರು.
ಜಿಲ್ಲಾ ಪಂಚಾಯತಿ ಸದಸ್ಯ ಜಗದೀಶ ನಾಯಕ ಮೊಗಟಾ ಮಾತನಾಡಿದರು
ಹಿರಿಯ ಮುಖಂಡ ಭಾಸ್ಕರ ನಾರ್ವೇಕರ್, ಪುರಸಭೆ ಅಧ್ಯಕ್ಷೆ ಶಾಂತಲಾ ನಾಡಕರ್ಣಿ, ಉಪಾಧ್ಯಕ್ಷೆ ರೇಖಾ ಗಾಂವಕರ್, ಸ್ಥಾಯಿ ಸಮಿತಿ ಅಧ್ಯಕ್ಷೆ ಜಯಾ ನಾಯ್ಕ ಪ್ರಮುಖರುಗಳಾದ ದಾಮೋದರ ರಾಯ್ಕರ್, ಕೃಷ್ಣಕುಮಾರ ಮಹಾಲೆ, ಅನುರಾಧಾ ನಾಯ್ಕ, ಚಂದ್ರಕಾಂತ ನಾಯ್ಕ, ನಾಗೇಶ ಕಿಣಿ, ಗಣಪತಿ ನಾಯ್ಕ, ರಾಮಚಂದ್ರ ಹೆಗಡೆ, ರಾಘು ಭಟ್ಟ ಮೊದಲಾದವರು ಪಾಲ್ಗೊಂಡಿದ್ದರು.