ದಿಗಂತ ವರದಿ ಹುಬ್ಬಳ್ಳಿ:
ಹುಬ್ಬಳ್ಳಿ-ಧಾರವಾಡ ಜಿಲ್ಲಾ ಅಧ್ಯಕ್ಷರನ್ನಾಗಿ ಸಂಜಯ ಕಪಾಟಕರ ಅವರನ್ನು ನೇಮಕ ಮಾಡಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನಕುಮಾರ ಕಟೀಲು ಆದೇಶ ಹೊರಡಿಸಿದ್ದಾರೆ.
ಬಿಜೆಪಿ ಕಾರ್ಯಕರ್ತ ಮತ್ತು ಸಾರ್ವಜನಿಕರ ಊಹೆಗೂ ನಿಲುಕದ ಅಚ್ಚರಿಯ ರೀತಿಯಲ್ಲಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿದ್ದ ಸಂಜಯ ಕಪಾಟಕರ ಅವರಿಗೆ ಜಿಲ್ಲಾ ಸಾರಥ್ಯ ವಹಿಸಿದೆ.
ಇದರೊಂದಿಗೆ ಕಳೆದ ಒಂದು ತಿಂಗಳಿನಿಂದ ಶಾಸಕ ಅರವಿಂದ ಬೆಲ್ಲದ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರೆಂಬ ಸುದ್ದಿ ನಂತರ ಯಾರು ಮುಂದಿನ ಅಧ್ಯಕ್ಷರಾಗುತ್ತಾರೆ ಎಂದು ಕಾರ್ಯಕರ್ತರಲ್ಲಿ ಕುತೂಹಲ ಮನೆ ಮಾಡಿತ್ತು. ಅದೇಲ್ಲದಕ್ಕೂ ರಾಜ್ಯಾಧ್ಯಕ್ಷರು ತೆರೆ ಎಳೆದಿದ್ದು, ಅಚ್ಚರಿ ಆಯ್ಕೆ ಮಾಡಿ ಬಿಜೆಪಿ ತನ್ನ ನಿಲುವನ್ನು ವ್ಯಕ್ತಪಡಿಸಿದೆ.
ಧಾರವಾಡ ಜಿಲ್ಲೆಯಲ್ಲಿ ಎಲ್ಲರ ಸಹಕಾರದೊಂದಿಗೆ ಪಕ್ಷ ಸಂಘಟನೆಗೆ ಶ್ರಮಿಸುವುದಾಗಿ ನೂತನ ಜಿಲ್ಲಾಧ್ಯಕ್ಷ ಸಂಜಯ ಕಪಾಟಕರ ಪತ್ರಿಕೆಯೊಂದಿಗೆ ತಮ್ಮ ಸಂತಸ ಹಂಚಿಕೊಂಡರು.