July 21, 2026
Tuesday, July 21, 2026
spot_img

2020ರ ದೆಹಲಿ ಗಲಭೆ ಪ್ರಕರಣ: ಆರೋಪಿಗಳ ಜಾಮೀನು ಅರ್ಜಿಗೆ ಉತ್ತರಿಸದ ಪೊಲೀಸರಿಗೆ ‘ಸುಪ್ರೀಂ’ ತರಾಟೆ!

ಹೊಸ ದಿಗಂತ ಡಿಜಿಟಲ್ ಡೆಸ್ಕ್:

2020ರ ಈಶಾನ್ಯ ದೆಹಲಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ಆರು ಆರೋಪಿಗಳ ಜಾಮೀನು ಅರ್ಜಿಗಳಿಗೆ ಪ್ರತಿಕ್ರಿಯೆ ಸಲ್ಲಿಸಲು ವಿಫಲರಾದ ದೆಹಲಿ ಪೊಲೀಸರನ್ನು ಸುಪ್ರೀಂಕೋರ್ಟ್ ತರಾಟೆಗೆ ತೆಗೆದುಕೊಂಡಿದೆ.

ಆರೋಪಿಗಳಾದ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್, ಗುಲ್ಫಿಶಾ ಫಾತಿಮಾ ಸೇರಿದಂತೆ ಇತರ ಮೂವರು ಜಾಮೀನು ಅರ್ಜಿ ಸಲ್ಲಿಸಿದ್ದರು.

ಈ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋಟ್‌ನ ನ್ಯಾ.ಅರವಿಂದ್ ಕುಮಾರ್ ಮತ್ತು ಎನ್.ವಿ.ಅಂಜಾರಿಯಾ ಅವರ ಪೀಠವು, ಈಗಾಗಲೇ ಅರ್ಜಿಗಳಿಗೆ ಉತ್ತರಿಸಲು ದೆಹಲಿ ಪೊಲೀಸರಿಗೆ ಸಾಕಷ್ಟು ಸಮಯ ನೀಡಲಾಗಿತ್ತು, ಹೀಗಾಗಿ ಈ ವಿಷಯವನ್ನು ಶುಕ್ರವಾರ (ಅ.31) ಇತ್ಯರ್ಥಪಡಿಸುವುದಾಗಿ ತಿಳಿಸಿದೆ.

ಆರೋಪಿಗಳು ಸಲ್ಲಿಸಿದ ಮೇಲ್ಮನವಿಗೆ ಪ್ರತಿಕ್ರಿಯಿಸಲು ಇನ್ನೂ ಎರಡು ವಾರಗಳ ಕಾಲಾವಕಾಶ ನೀಡಬೇಕೆಂದು ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್‌ವಿ ರಾಜು ಮನವಿ ಮಾಡಿಕೊಂಡರು. ಈ ವೇಳೆ ಕೋರ್ಟ್, ನೀವು ಈ ಪ್ರಕರಣದಲ್ಲಿ ಮೊದಲ ಬಾರಿ ಹಾಜರಾಗಿರಬಹುದು. ಆದರೆ ನಾವು ಈಗಾಗಲೇ ದೆಹಲಿ ಪೊಲೀಸರಿಗೆ ಸಾಕಷ್ಟು ಸಮಯ ನೀಡಿದ್ದೇವೆ. ಆದರೂ ಕೂಡ ಅವರು ಪ್ರತಿಕ್ರಿಯಿಸಿಲ್ಲ ಎಂದು ಹೇಳಿದೆ.

ಈ ವೇಳೆ ಸಾಲಿಸಿಟರ್ ಜನರಲ್ ಎಸ್‌ವಿ ರಾಜು, ಪ್ರಕರಣದ ವಿಚಾರಣೆ ಮುಂದೂಡಲು ಮನವಿ ಮಾಡಿಕೊಂಡರು. ಆದರೆ ಅರ್ಜಿದಾರರ ಪರ ವಕೀಲರಾದ ಕಪಿಲ್ ಸಿಬಲ್ ಮತ್ತು ಅಭಿಷೇಕ್ ಮನುಸಿಂಘ್ವಿ ವಿರೋಧಿಸಿದರು. ಅಂತಿಮವಾಗಿ ನ್ಯಾಯಾಲಯವು ಪ್ರಕರಣವನ್ನು ಶುಕ್ರವಾರಕ್ಕೆ ಮುಂದೂಡಿತು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !