ಹೊಸದಿಗಂತ ವರದಿ,ಸುಂಟಿಕೊಪ್ಪ:
ಚಾಲಕನ ನಿಯಂತ್ರಣ ಕಳೆದುಕೊಂಡ ಕಾರೊಂದು ಅಂಗಡಿಗೆ ಡಿಕ್ಕಿ ಹೊಡೆದ ಪರಿಣಾಮ ಅಂಗಡಿಗೆ ಹಾನಿಯಾಗಿದ್ದು, ಕಾರಿನಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾದ ಘಟನೆ ಸುಂಟಿಕೊಪ್ಪ ಮುಖ್ಯ ರಸ್ತೆಯಲ್ಲಿ ನಡೆದಿದೆ.
ಬೆಂಗಳೂರಿನ ಆಸ್ಪತ್ರೆಯಲ್ಲಿ ರೋಗಿಯೊಬ್ಬರಿಗೆ ಚಿಕಿತ್ಸೆ ಕೊಡಿಸಿ ಕಾಸರಗೋಡಿನ ಬದಿಯಡ್ಕಕ್ಕೆ ತೆರಳುತ್ತಿದ್ದ ಕಾರು ಸುಂಟಿಕೊಪ್ಪದ ಮುಖ್ಯ ರಸ್ತೆಯಲ್ಲಿ ಅಂಗಡಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಅಂಗಡಿಯೊಳಗಿನ ಗಾಜಿನ ಕಪಾಟುಗಳು ಸಂಪೂರ್ಣ ಪುಡಿಪುಡಿಯಾಗಿದ್ದು, ಕಾರು ಕೂಡಾ ಜಖಂಗೊಂಡಿದೆ. ಅಂದಾಜು ರೂ.80 ಸಾವಿರದಷ್ಟು ನಷ್ಟ ಸಂಭವಿಸಿದೆ ಎಂದು ಅಂಗಡಿಯ ಮಾಲಕ ಫಾರೂಕ್ ಮಾಹಿತಿ ನೀಡಿದ್ದಾರೆ.
ಒಂದು ವೇಳೆ ಪಕ್ಕದ ಅಂಗಡಿಯ ಕಂಬಕ್ಕೆ ಡಿಕ್ಕಿಯಾಗಿದ್ದರೆ ಭಾರಿ ಅನಾಹುತ ಸಂಭವಿಸುತ್ತಿತ್ತು. ಚಾಲಕನ ಅಜಾರೂಕತೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ.