ಹೊಸ ದಿಗಂತ ವರದಿ, ಹಾವೇರಿ:
ರಾಣೇಬೆನ್ನೂರಿನಲ್ಲಿ ಹೈಟೆಕ್ ರೇಷ್ಮೆ ಮಾರುಕಟ್ಟೆ ನಿರ್ಮಾಣಕ್ಕೆ ಐದು ಎಕರೆ ಜಮೀನು ಮಂಜೂರಾಗಿದೆ ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ. ನಾರಾಯಣಗೌಡ ಅವರು ತಿಳಿಸಿದ್ದಾರೆ.
ಸಚಿವ ಡಾ. ನಾರಾಯಣಗೌಡ ಅವರು ಹಾವೇರಿ ಜಿಲ್ಲಾ ಪ್ರವಾಸದ ವೇಳೆ ಹೈಟೆಕ್ ಮಾರುಕಟ್ಟೆ ನಿರ್ಮಾಣಕ್ಕೆ ಬ್ಯಾಡಗಿ ಶಾಸಕ ವಿರೂಪಾಕ್ಷಪ್ಪ ಸೇರಿದಂತೆ ಹಲವು ರೇಷ್ಮೆ ಬೆಳೆಗಾರರು ಮನವಿ ಮಾಡಿದ್ದರು. ಅದರಂತೆ ರಾಣೇಬೆನ್ನೂರು ತಾಲೂಕಿನ ಕೂನಬೇವು ಗ್ರಾಮದಲ್ಲಿ ರೇಷ್ಮೆ ಮಾರುಕಟ್ಟೆ ನಿರ್ಮಾಣಕ್ಕೆ ನಿರ್ಧರಿಸಲಾಗಿದೆ. ಇದಕ್ಕಾಗಿ ಅಗತ್ಯವಿರುವ ಜಾಗ ನೀಡುವಂತೆ ಸಚಿವ ಡಾ.ನಾರಾಯಣಗೌಡ ಅವರು ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದರು. ಅದರಂತೆ ರೇಷ್ಮೆ ಇಲಾಖೆಗೆ ೫.೧ ಎಕರೆ ಭೂಮಿಯನ್ನು ರೇಷ್ಮೆ ಇಲಾಖೆಗೆ ಮಂಜೂರು ಮಾಡಿ ಹಾವೇರಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
ರಾಣೇಬೆನ್ನೂರಿನಲ್ಲಿ ಹೈಟೆಕ್ ರೇಷ್ಮೆ ಮಾರುಕಟ್ಟೆ ನಿರ್ಮಿಸಲು ನಿರ್ಧರಿಸಲಾಗಿದ್ದು, ಅದಕ್ಕೆ ಅಗತ್ಯವಿರುವ ಭೂಮಿ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿತ್ತು. ಇದೀಗ ಜಿಲ್ಲಾಧಿಕಾರಿಗಳು ಕೂನಬೇವು ಗ್ರಾಮದಲ್ಲಿ ಐದು ಎಕರೆ ಜಾಗವನ್ನು ಗುರುತಿಸಿ, ರೇಷ್ಮೆ ಇಲಾಖೆಗೆ ಮಂಜೂರು ಮಾಡಿದ್ದಾರೆ.
ಇದರಿಂದ ಉತ್ತರ ಕರ್ನಾಟಕ ಭಾಗದ ರೇಷ್ಮೆ ಬೆಳೆಗಾರರಿಗೆ ಸಾಕಷ್ಟು ಅನುಕೂಲವಾಗಲಿದೆ. ಶೀಘ್ರದಲ್ಲೇ ರೇಷ್ಮೆ ಇಲಾಖೆಯ ಸುಪರ್ದಿಗೆ ಪಡೆಯಲಾಗುತ್ತದೆ. ಅಲ್ಲದೇ ರಾಣೇಬೆನ್ನೂರಿನಲ್ಲಿ ಹೈಟೆಕ್ ರೇಷ್ಮೆ ಮಾರುಕಟ್ಟೆ ನಿರ್ಮಾಣದ ಈ ಬಾರಿಯ ಬಜೆಟ್ನಲ್ಲಿ ಘೋಷಣೆ ಮಾಡಿಸಲಾಗುತ್ತದೆ. ಆದಷ್ಟು ಬೇಗ ರೇಷ್ಮೆ ಮಾರುಕಟ್ಟೆ ನಿರ್ಮಿಸಲಾಗುವುದು ಎಂದು ಸಚಿವ ಡಾ.ನಾರಾಯಣಗೌಡ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.