ಹೊಸದಿಗಂತ ವರದಿ,ಚಿತ್ರದುರ್ಗ:
ಹಿಂದಿನಿಂದ ವೇಗವಾಗಿ ಬಂದ ಕಾರು ಮುಂದೆ ಹೋಗುತ್ತಿದ್ದ ಟ್ಯಾಂಕರ್ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಮೂರು ಜನರು ದಾರುಣವಾಗಿ ಮೃತಪಟ್ಟ ಘಟನೆ ಹಿರಿಯೂರು ತಾಲ್ಲೂಕಿನ ಗುಯಿಲಾಳು ಟೋಲ್ ಬಳಿ ಗುರುವಾರ ಬೆಳಿಗ್ಗೆ ನಡೆದಿದೆ.
ಮೃತರನ್ನು ಬೆಳಗಾವಿಯ ಸುಭಾಷ್ ನಗರದ ರಮೇಶ್ (೬೭), ಸೀಮಾ ಶಾನುಭೋಗ್ (೬೩) ಮತ್ತು ಕಾರಿನ ಹಿಂಬದಿಯ ಸೀಟಿನಲ್ಲಿ ಕುಳಿತಿದ್ದ ವಿಶ್ವನಾಥ ಶಾನಭೋಗ್ (೭೨) ಎಂದು ಗುರುತಿಸಲಾಗಿದೆ. ಮೃತರು ಕಾರ್ಯನಿಮಿತ್ತ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಅಪಘಾತ ನಡೆದ ಪರಿಣಾಮ ಮೂರು ಜನರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಬೆಳಿಗ್ಗೆ ೧೧ ಗಂಟೆ ಸುಮಾರಿಗೆ ಟ್ಯಾಂಕರ್ ಲಾರಿ ಚಾಲಕ ಟೋಲ್ನಲ್ಲಿ ಹಣ ಕಟ್ಟಿ ಮುಂದೆ ಸಾಗುತ್ತಿದ್ದ. ಇದ್ದಕ್ಕಿದ್ದಂತೆ ಹಿಂದಿನಿಂದ ವೇಗವಾಗಿ ಬಂದ ಕಾರು, ಮುಂದೆ ಹೋಗುತ್ತಿದ್ದ ಟ್ಯಾಂಕರ್ ಲಾರಿಗೆ ಡಿಕ್ಕಿ ಹೊಡೆದಿದೆ. ಚಾಲಕನ ಅಜಾಗರುಕತೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಈ ಕುರಿತು ಐಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.