ಹೊಸದಿಗಂತ ಡಿಜಿಟಲ್ ಡೆಸ್ಕ್:
ಹಿಜಾಬ್ ವಿವಾದ ಕುರಿತು ಸಲ್ಲಿಸಿರುವ ಅರ್ಜಿಗಳನ್ನು ತ್ರಿಸದಸ್ಯ ಪೀಠ ಇಂದು ವಿಚಾರಣೆ ನಡೆಸಿದ್ದು, 2 ಗಂಟೆಗೂ ಹೆಚ್ಚು ಕಾಲ ವಾದ ಆಲಿಸಿದ ಪೀಠ, ವಿಚಾರಣೆಯನ್ನು ನಾಳೆ ಮಧ್ಯಾಹ್ನ 2.30ಕ್ಕೆ ಮುಂದೂಡಿತು.
ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ, ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಹಾಗೂ ನ್ಯಾಯಮೂರ್ತಿ ಖಾಜಿ ಜೈಬುನ್ನೀಸಾ ಅವರಿದ್ದ ಪೀಠ ಪ್ರಕರಣಕ್ಕೆ ಸಂಬಂಧಿಸಿದಂತೆ 4ನೇ ದಿನವೂ ಅರ್ಜಿದಾರರ ಪರ ವಕೀಲರೇ ವಾದ ಆಲಿಸಿದರು.
ವಿಚಾರಣೆ ಆರಂಭದಲ್ಲಿ ರಿಟ್ ಅರ್ಜಿಗಳಿಗೆ ಸಂಬಂಧಿಸಿದಂತೆ 20ಕ್ಕೂ ಹೆಚ್ಚು ಮಧ್ಯಂತರ ಅರ್ಜಿಗಳನ್ನು ಸಲ್ಲಿಸಿರುವುದನ್ನು ಗಮನಿಸಿದ ಪೀಠ, ಹೀಗೆ ನಿರಂತರವಾಗಿ ಮಧ್ಯಂತರ ಅರ್ಜಿಗಳನ್ನು ಸಲ್ಲಿಸುತ್ತಿದ್ದರೆ, ಪ್ರಕರಣವನ್ನು ತ್ವರಿತವಾಗಿ ಇತ್ಯರ್ಥಗೊಳಿಸುವುದು ಹೇಗೆ ಎಂದು ಪ್ರಶ್ನಿಸಿತು. ಹಾಗೆಯೇ, ಒಂದು ಅರ್ಜಿಗೆ ಒಬ್ಬರೇ ವಾದಿಸಬೇಕು.ಎಲ್ಲಾ ಮಧ್ಯಂತರ ಅರ್ಜಿ ವಿಚಾರಣೆ ಅಗತ್ಯವಿಲ್ಲ. ಈ ಅರ್ಜಿಗಳಿಂದ ಕೋರ್ಟ್ ಸಮಯ ವ್ಯರ್ಥವಾಗುತ್ತಿದೆ ಎಂದು ಅಭಿಪ್ರಾಯಪಟ್ಟಿತು.