Wednesday, November 5, 2025

ಮಿರ್ಜಗೂಡ ಬಳಿ ನೆತ್ತರು ಬಸಿದ ಹೆದ್ದಾರಿ: ಮೃತರ ಕುಟುಂಬಕ್ಕೆ ಪ್ರಧಾನಿ, ಸಿಎಂ ಪರಿಹಾರ ಘೋಷಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯಲ್ಲಿ ಇಂದು ಬೆಳಗ್ಗೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 24ಕ್ಕೆ ಏರಿಕೆಯಾಗಿದೆ. ತೆಲಂಗಾಣ ರಾಜ್ಯ ಸಾರಿಗೆ ಸಂಸ್ಥೆಯ ಬಸ್‌ಗೆ, ಜಲ್ಲಿಕಲ್ಲುಗಳನ್ನು ಸಾಗಿಸುತ್ತಿದ್ದ ಖಾಸಗಿ ಟಿಪ್ಪರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಅಪಘಾತದ ತೀವ್ರತೆಯನ್ನು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರುವ ವಿಡಿಯೋ ಮತ್ತು ಫೋಟೋಗಳು ಬಿಚ್ಚಿಡುತ್ತಿವೆ.

ಘಟನೆಯ ವಿವರಗಳು:

ತಾಂಡೂರ್‌ನಿಂದ ಹೈದರಾಬಾದ್‌ಗೆ ತೆರಳುತ್ತಿದ್ದ ಸರ್ಕಾರಿ ಬಸ್‌ಗೆ, ಹೈದರಾಬಾದ್‌ನಿಂದ ಬಿಜಾಪುರ ಕಡೆಗೆ ಹೋಗುತ್ತಿದ್ದ ಜಲ್ಲಿಕಲ್ಲು ತುಂಬಿದ ಟಿಪ್ಪರ್ ಲಾರಿ ಅತಿ ವೇಗದಲ್ಲಿ ಮುಖಾಮುಖಿ ಡಿಕ್ಕಿ ಹೊಡೆದಿದೆ. ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ಟಿಪ್ಪರ್ ಲಾರಿಯ ಅತಿವೇಗವೇ ದುರಂತಕ್ಕೆ ಕಾರಣ ಎಂದು ತಿಳಿದುಬಂದಿದೆ.

ಡಿಕ್ಕಿಯ ರಭಸಕ್ಕೆ ಸರ್ಕಾರಿ ಬಸ್ ಮತ್ತು ಟಿಪ್ಪರ್ ಲಾರಿ ಎರಡೂ ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಬಸ್ ಚಾಲಕ ಮತ್ತು ಟಿಪ್ಪರ್ ಚಾಲಕ ಸೇರಿದಂತೆ 24 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಸಾವಿನ ಸಂಖ್ಯೆ ಹೆಚ್ಚಳಕ್ಕೆ ಕಾರಣ:

ಟಿಪ್ಪರ್‌ನಲ್ಲಿದ್ದ ಜಲ್ಲಿಕಲ್ಲುಗಳ ರಾಶಿ ಬಸ್‌ನ ಮೇಲೆ ಬಿದ್ದಿದ್ದರಿಂದ ಸಾವಿನ ಸಂಖ್ಯೆ ಹೆಚ್ಚಾಗಲು ಪ್ರಮುಖ ಕಾರಣವಾಗಿದೆ. ಸುಮಾರು 70 ಪ್ರಯಾಣಿಕರಿದ್ದ ಬಸ್‌ನಲ್ಲಿ, 10ಕ್ಕೂ ಹೆಚ್ಚು ಪ್ರಯಾಣಿಕರು ಈ ಜಲ್ಲಿಕಲ್ಲುಗಳಡಿ ಸಿಲುಕಿ ಸಾವನ್ನಪ್ಪಿದ್ದಾರೆ. ಜೆಸಿಬಿಗಳ ನೆರವಿನಿಂದ ಸಿಲುಕಿದವರನ್ನು ಹೊರತೆಗೆಯಲಾಯಿತು. ಮೃತರ ಪೈಕಿ 10 ಪುರುಷರು ಮತ್ತು 9 ಮಹಿಳೆಯರು ಸೇರಿದ್ದಾರೆ.

ಪರಿಹಾರ ಮತ್ತು ಚಿಕಿತ್ಸೆ:

ಮೃತರ ಮರಣೋತ್ತರ ಪರೀಕ್ಷೆಯನ್ನು ಚೇವೆಲ್ಲಾ ಆಸ್ಪತ್ರೆಯಲ್ಲಿ ನಡೆಸಿ, ಕುಟುಂಬಗಳಿಗೆ ಮೃತದೇಹಗಳನ್ನು ಹಸ್ತಾಂತರಿಸಲಾಗಿದೆ. 5 ಮಂದಿಯ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.

ಸಂತಾಪ ಮತ್ತು ಪರಿಹಾರ:

ದುರಂತಕ್ಕೆ ಪ್ರಧಾನಿ ನರೇಂದ್ರ ಮೋದಿ ಮತ್ತು ತೆಲಂಗಾಣ ಮುಖ್ಯಮಂತ್ರಿ ಎ ರೇವಂತ್ ರೆಡ್ಡಿ ಸಂತಾಪ ವ್ಯಕ್ತಪಡಿಸಿದ್ದಾರೆ. ಮೃತರ ಕುಟುಂಬಗಳಿಗೆ ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ ₹2 ಲಕ್ಷ ಮತ್ತು ಗಾಯಾಳುಗಳಿಗೆ ₹50,000 ಘೋಷಣೆ. ತೆಲಂಗಾಣ ಮುಖ್ಯಮಂತ್ರಿ ಎ ರೇವಂತ್ ರೆಡ್ಡಿ ಮೃತ ಪ್ರಯಾಣಿಕರ ಕುಟುಂಬಗಳಿಗೆ ತಲಾ ₹5 ಲಕ್ಷ ಮತ್ತು ಗಾಯಾಳುಗಳಿಗೆ ₹2 ಲಕ್ಷ ಪರಿಹಾರ ಘೋಷಿಸಿದ್ದಾರೆ.

error: Content is protected !!