ಹೊಸದಿಗಂತ ವರದಿ, ಮೈಸೂರು:
ಸಚಿವ ಸಂಪುಟ ಪುನರ್ ರಚನೆ, ಅಥವಾ ವಿಸ್ತರಣೆ ಮಾಡುವುದು ಮುಖ್ಯಮಂತ್ರಿಗಳಿಗೆ ಸೇರಿದ್ದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ್ ಹೇಳಿದರು.
ಗುರುವಾರ ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟ ಪುನರ್ ರಚನೆ ಮಾಡುವುದು, ಇಲ್ಲವೇ ವಿಸ್ತರಣೆ ಮಾಡುವುದು ಮುಖ್ಯಮಂತ್ರಿಗಳಿಗೆ ಸೇರಿದ ಪರಮಾಧಿಕಾರ. ಈ ವಿಚಾರವಾಗಿ ನಾವು ಏನು ಹೇಳುವಂತಿಲ್ಲ. ಮುಖ್ಯಮಂತ್ರಿಗಳು ಪಕ್ಷದ ವರಿಷ್ಠರೊಂದಿಗೆ ಚರ್ಚಿಸಿ, ಸೂಕ್ರ ಕ್ರಮ ತೆಗೆದುಕೊಳ್ಳುತ್ತಾರೆ ಎಂದರು.
ಬೆಲೆ ಏರಿಕೆ ವಿಚಾರವನ್ನು ಡೈವರ್ಟ್ ಮಾಡಲು ಬಿಜೆಪಿ ಎಮೋಷನಲ್ ಕಾರ್ಡ್ ಪ್ಲೇ ಮಾಡುತ್ತಿದೆ ಎಂದು ಜೆಡಿಎಸ್ನ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಮಾಡಿರುವ ಆರೋಪಕ್ಕೆ ಪ್ರತಿಕ್ರಿಯಿಸಿ, ಬಿಜೆಪಿಗೆ ಇನ್ನೂ ಅಂತಹ ಸ್ಥಿತಿ ಬಂದಿಲ್ಲ. ರಷ್ಯಾ- ಉಕ್ರೇನ್ ನಡುವಿನ ಯುದ್ದದ ಪರಿಣಾಮ ತೈಲ ಆಮದಿನಲ್ಲಿ ವ್ಯತ್ಯಾಸವಾಗಿದೆ. ಹಣದುಬ್ಬರದಿಂದ ಅಗತ್ಯ ವಸ್ತುಗಳ ಬೆಲೆ ಏರಿಕೆ ಆಗಿದೆ. ಬೆಲೆ ಏರಿಕೆ ಅಂತರಾಷ್ಟ್ರೀಯಯ ಮಟ್ಟದ್ದು. ಅದರಿಂದ ಹಲವಾರು ಸವಾಲುಗಳು ಎದುರಾಗುತ್ತಿವೆ. ಪ್ರಧಾನಿ ನರೇಂದ್ರ ಮೋದಿ ಅವರು ರಷ್ಯಾದಿಂದ ಕಡಿಮೆ ಬೆಲೆಯಲ್ಲಿ ತೈಲ ಆಮದು ಮಾಡಿಕೊಳ್ಳುತ್ತಿದ್ದಾರೆ. ಬೆಲೆ ಏರಿಕೆಯನ್ನು ನಿಯಂತ್ರಿಸಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದಾರೆ. ವಿಶ್ವದಲ್ಲೇ ಗಮನ ಸೆಳೆಯುವ ಕೆಲಸ ಮಾಡ್ತಿದ್ದಾರೆ. ಬೆಲೆ ಏರಿಕೆಯನ್ನೂ ಹಂತಹoತವಾಗಿ ಕಡಿಮೆ ಮಾಡ್ತೀವಿ ಎಂದರು.